ಸಿರಿಧಾನ್ಯಗಳಿಗೆ ಸ್ವಸಹಾಯ ಸಂಘಗಳ ಮಾರುಕಟ್ಟೆ ಒದಗಿಸಿ: ಆ್ಯಂಟನಿ ಮರಿಯಪ್ಪ

KannadaprabhaNewsNetwork |  
Published : Dec 12, 2024, 12:30 AM IST
ಸಿರಿಧಾನ್ಯ ಖಾದ್ಯಗಳ ಸ್ಪರ್ಧೆಯ ನೋಟ | Kannada Prabha

ಸಾರಾಂಶ

ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಮಹಿಳೆಯರು ತಾವು ತಯಾರಿಸಿದಂತಹ ಖಾದ್ಯಗಳನ್ನು ಪ್ರದರ್ಶಿಸಿದರು. ಪುರುಷರು ಕೂಡ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ವಿಶೇಷ.

ಕನ್ನಡಪ್ರಭ ವಾರ್ತೆ ಮಂಗಳೂರು

ಸಿರಿಧಾನ್ಯಗಳಿಂದ ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ, ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ...ಇದು ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಡು ಬಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ ಖಾದ್ಯಗಳ ತಿನಿಸುಗಳು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಮಹಿಳೆಯರು ತಾವು ತಯಾರಿಸಿದಂತಹ ಖಾದ್ಯಗಳನ್ನು ಪ್ರದರ್ಶಿಸಿದರು. ಪುರುಷರು ಕೂಡ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ವಿಶೇಷ. ಕೃಷಿ ಇಲಾಖೆಯು ಕಳೆದ ಕೆಲವು ವರ್ಷಗಳಿಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳ ಸ್ಪರ್ಧೆಯನ್ನು ನಡೆಸುತ್ತಿದೆ. ಈ ವರ್ಷ ಇದರೊಂದಿಗೆ ಮರೆತು ಹೋದ ಖಾದ್ಯಗಳನ್ನು ತಯಾರಿಸಿ ಪ್ರದರ್ಶನ ನೀಡುವ ಸ್ಪರ್ಧೆಯನ್ನು ಸೇರಿಸಿದೆ. ಹಿಂದಿನ ಕಾಲದಲ್ಲಿ ತಯಾರಿಸುತ್ತಿದ್ದ ವಿಶೇಷ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸಿ, ಸ್ಪರ್ಧೆಗೆ ಇಡಲಾಗಿತ್ತು. ಇದಕ್ಕೆ ಬೇಕಾದ ಸಾಮಗ್ರಿಗಳನ್ನು ಗ್ರಾಮಾಂತರ ಪ್ರದೇಶಗಳಿಂದ ಮತ್ತು ಅರಣ್ಯ ಪ್ರದೇಶಗಳಿಂದ ಹುಡುಕಿ ತಂದು ಖಾದ್ಯಗಳನ್ನು ತಯಾರಿಸಿರುವುದು ವಿಶೇಷವಾಗಿತ್ತು. ಕಳೆದ ವರ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಗೆ ಸಾರ್ವಜನಿಕರು ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ ಮಾತನಾಡಿ, ನಮ್ಮ ಆರೋಗ್ಯ ಸಂರಕ್ಷಣೆಗೆ ಉತ್ತಮ ಸತ್ವಭರಿತ ಆಹಾರಗಳ ಅಗತ್ಯವಿದ್ದು, ಸಿರಿಧಾನ್ಯ ಆಹಾರವು ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ನಾಂದಿಯಾಗಲಿದೆ. ಮರೆತು ಹೋದ ಖಾದ್ಯಗಳ ಪ್ರದರ್ಶನದ ಮೂಲಕ ನಮ್ಮ ಪೂರ್ವಜರ ವಿಶೇಷ ಖಾದ್ಯಗಳ ಪರಿಚಯ ಆಗಲಿದೆ. ಸಿರಿಧಾನ್ಯದ ಖಾದ್ಯಗಳಿಗೆ ಸ್ವಸಹಾಯ ಸಂಘಗಳ ಮೂಲಕ ಮಾರುಕಟ್ಟೆಯನ್ನು ಒದಗಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಕಾರ್ಯೋನ್ಮುಖವಾಗಿರುವಂತೆ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ, ಉಪ ಕೃಷಿ ನಿರ್ದೇಶಕಿ ಕುಮುದಾ ಸಿ.ಎನ್, ಪುತ್ತೂರು ಉಪ ಕೃಷಿ ನಿರ್ದೇಶಕ ಶಿವಶಂಕರ.ಎಚ್ ದಾನೆಗೊಂಡಾರು, ಮಂಗಳೂರು ತಾ. ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್. ಮತ್ತಿತರರು ಇದ್ದರು ಪಾಕ ಸ್ಪರ್ಧೆಯಲ್ಲಿ ಸಜ್ಜೆ ಪಾಯಸ, ಬಾರ್ಲಿ ಪಾಯಸ, ನವಣೆ/ಲಾಡು, ಸಜ್ಜೆ ಲಡ್ಡು, ರಾಗಿ ಕೇಕ್, ರಾಗಿ ಸಿಹಿ ಖಾದ್ಯ, ರಾಗಿ ಸಿಹಿ ಖಾದ್ಯ, ಸಾಮೆ ಸಿಹಿ ಕಡುಬು, ಮಿಲೆಟ್ ಸ್ಮೂಧಿ, ಸಿರಿಧಾನ್ಯ ಹಲ್ವ, ಮಿಲೆಟ್ ಪುಡ್ಡಿಂಗ್, ನವಣೆ ಲಾಡು, ಸಿರಿಧಾನ್ಯ ಪೇಯ,ಸಿರಿಧಾನ್ಯ ಲಡ್ಡು, ನವಣೆ ಪಾಯಸ, ಅನ್ನದ ಖಾರ ಖಾದ್ಯ, ಬಿದಿರಿನ ಅಕ್ಕಿ /ಕಳಲೆ ಕಡುಬು, ಗೋಧಿ ದೋಸೆ, ನೆರುಗಳ ಸೊಪ್ಪು ದೋಸೆ, ಹಲಸಿನ ಹೋಳಿಗೆ ಬೆಟ್ಟದ ನೆಲ್ಲಿಕಾಯಿ ಚಟ್ನಿ, ಹಲಸಿನ ಸೊಲೆ, ಓಂ ಕಾಳಿನ ಕರಿ, ಕಲ್ತಪ್ಪ, ಚಟ್ನಿ ಪುಂಡಿ, ನೀರುಂಡೆ(ನೀರ್ ಪುಂಡಿ), ಅಡ್ಡೆ ಸೌತೆ ಕಿಚಡಿ, ವೈಶಾಕಿ ಮಿತ್ರ, ಗೆಂಡೆದ ಅಡ್ಡೆ, ಸೋಜಿ. ಬಾಳೆ ಎಲೆಯ ಓಡು ಅಡ್ಡೆ, ನವಣೆ -ರಾಗಿ ಚಕ್ಕುಲಿ, ಆದ್ರ ಸೊಪ್ಪು ಇಡ್ಲಿ ಸಿಹಿಗುಂಬಳ ಇಡ್ಲಿ, ರಾಜಗಿರಿ ಹಲ್ವಾ ಇತ್ಯಾದಿಗಳು ಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ