ನಿರಾಶ್ರೀತರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಿ

KannadaprabhaNewsNetwork | Published : Mar 13, 2025 12:45 AM

ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ನಗರದ ಟಕ್ಕೆಯಲ್ಲಿರುವ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ನಿರಾಶ್ರೀತರಿಗೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿರಾಶ್ರೀತರಿಗೆ ಆಶ್ರಯ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರ ನಗರದ ಟಕ್ಕೆಯಲ್ಲಿರುವ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ನಿರಾಶ್ರೀತರಿಗೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿರಾಶ್ರೀತರಿಗೆ ಆಶ್ರಯ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಭಿಕ್ಷಾಟನಾ ನಿಷೇಧ ಅಧಿನಿಯಮ ೧೯೭೫ರ ಸೆಕ್ಷನ್ ೫ರ ಪ್ರಕಾರ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಭಿಕ್ಷಾಟನೆ ಮಾಡುತ್ತಿರುವವರನ್ನು ರಕ್ಷಿಸಿ ನಿರಾಶ್ರೀತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗುತ್ತದೆ. ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳು ಒಳಗೊಂಡಂತೆ ನಗರದಲ್ಲಿ ಪರಿಹಾರ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರದಲ್ಲಿ ೧೫೦ ನಿರಾಶ್ರಿತರಿಗೆ ಆಶ್ರಯ ಒದಗಿಸಲಾಗಿದೆ. ಈ ಪೈಕಿ ೯೧ ಬೇರೆ ರಾಜ್ಯದವರಾಗಿದ್ದಾರೆ ಎಂದು ಮಾಹಿತಿ ನೀಡಿದರು.ಆಶ್ರಯ ಪಡೆದವರಲ್ಲಿ ೪೫ ಜನ ಮಾನಸಿಕ ಅಸ್ವಸ್ಥರಿದ್ದು, ಕೆಲವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕಾಲಕಾಲಕ್ಕೆ ಕೌನ್ಸೆಲಿಂಗ್ ನಡೆಸಬೇಕು. ಕಾಲಕಾಲಕ್ಕೆ ಸಮಾಲೋಚನೆ ನಡೆಸಬೇಕು. ಆರೋಗ್ಯ ತಪಾಸಣೆ ನಡೆಸಬೇಕು. ದೀರ್ಘಾವಧಿ ಕಾಯಿಲೆ ಇರುವವರಿಗೆ ಸೂಕ್ತ ಔಷಧೋಪಚಾರ ಒದಗಿಸಿ ಗುಣಪಡಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.ಕೇಂದ್ರದಲ್ಲಿನ ನಿರಾಶ್ರೀತರಿಗೆ ಟೇಲರಿಂಗ್, ಲಾಂಡ್ರಿ ಸೇರಿದಂತೆ ಅವರ ಕೌಶಲ್ಯಕ್ಕನುಸಾರವಾಗಿ ಸೂಕ್ತ ತರಬೇತಿ ಒದಗಿಸಲು ಕ್ರಮ ವಹಿಸಬೇಕು. ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಬೀದಿ ದೀಪಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು. ಭಿಕ್ಷಾಟನೆ ಮಾಡುವವರಿಗೆ ಸಂರಕ್ಷಿಸುವುದು, ರಕ್ಷಿತರನ್ನು ಅವರ ಕೌಶಲ್ಯದ ಆಧಾರದ ಮೇಲೆ ಅವರಿಗೆ ತರಬೇತಿ ನೀಡಿ, ಮುಂದಿನ ದಿನಗಳಲ್ಲಿ ಭಿಕ್ಷಾಟನೆಗಿಳಿಯದೇ ಅವರ ಜೀವನ ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕಾರ್ಯ ನಿರ್ವಹಿಸಲು, ನಿರಾಶ್ರಿತರ ಕೇಂದ್ರದ ಸಮರ್ಪಕ ನಿರ್ವಹಣೆಗೆ ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಶೇ.೩ರಷ್ಟು ಕರ ಆದ್ಯತೆ ಮೇಲೆ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಹೇಳಿದರು. ಡಿಸಿ ಮೆಚ್ಚುಗೆ

ನಿರಾಶ್ರಿತರ ಕೇಂದ್ರದಲ್ಲಿನ ಸ್ವಚ್ಛ ಪರಿಸರ, ಗಿಡ-ಮರಗಳ ಹಸಿರು ವಾತಾವರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಅದೇ ಮಾದರಿಯಲ್ಲಿ ಎಲ್ಲ ಸರ್ಕಾರಿ ಕಚೇರಿ ಆವರಣದಲ್ಲಿ ಹಸರೀಕರಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.ಈ ವೇಳೆ ಭಿಕ್ಷಾಟನೆ ನಿರ್ಮೂಲನಾ ಕರಪತ್ರ ಬಿಡುಗಡೆ ಹಾಗೂ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ ನೀಡಿದರು. ಎಎಸ್ಪಿ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‌ಕುಮಾರ ಗುಣಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್.ರೂಪಾ, ನಿರಾಶ್ರಿತ ಪರಿಹಾರ ಕೇಂದ್ರದ ಅಧೀಕ್ಷಕ ಬಸವರಾಜ ನಾಟೀಕಾರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.