ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ನೀಡಿ

KannadaprabhaNewsNetwork | Published : Sep 24, 2024 1:50 AM

ಸಾರಾಂಶ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಹಾಗೂ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಜನರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಹಾಗೂ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಸ್.ದೇವರಾಜು ಅವರ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಿಯೋಗ ತೆರಳಿ ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರರಿಗೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಿಗೆ ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರು.ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್.ದೇವರಾಜು, ಕಂದಾಯ ಇಲಾಖೆಯಿಂದ ಬೆಳೆ ಸಮೀಕ್ಷೆ, ಬಗರ್ ಹುಕ್ಕಂ ಭೂಮಿ ಗುರುತು ಮಾಡುವುದು ಸೇರಿದಂತೆ ಸುಮಾರು 17 ಮೊಬೈಲ್‌ ಆ್ಯಪ್‌ಗಳನ್ನು ಸೃಜಿಸಲಾಗಿದೆ. ಆದರೆ ಈ ಮೊಬೈಲ್ ಆ್ಯಪ್‌ಗಳ ಅಪರೇಷನ್ ಮಾಡಲು ಅಗತ್ಯವಿರುವ ಆಧುನಿಕ ತಂತ್ರಜ್ಞಾನ ಒಳಗೊಂಡ ಮೊಬೈಲ್ ಆಗಲಿ, ಅದಕ್ಕೆ ಬೇಕಾದ ಇಂಟರನೆಟ್ ಸೌಲಭ್ಯ, ಪ್ರಿಂಟರ್ ಯಾವ ಪರಿಕರ ಗಳನ್ನು ನೀಡದೆ, ಕೆಲಸ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.ಮೇಲಧಿಕಾರಿಗಳ ಈ ಒತ್ತಡದಿಂದ ವಿಒಒ ಗಳಲ್ಲಿ ದೈಹಿಕ ಮತ್ತು ಮಾನಸಿಕ ಒತ್ತಡಗಳು ಹೆಚ್ಚಾಗಿ, ಸಾವು, ನೋವುಗಳು ಸಂಭವಿಸಿವೆ. ಅಲ್ಲದೆ ಕೆಲಸದ ಸಂದರ್ಭದಲ್ಲಿ ಹಲ್ಲೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಚಿತ್ರದುರ್ಗದಲ್ಲಿ ನಡೆದ ಸಂಘದ ರಾಜ್ಯ ಮಂಡಳಿ ತೀರ್ಮಾನದಂತೆ ಆಧಾರ್ ಸೀಡ್, ಲ್ಯಾಂಟ್ ಬೀಟ್, ಬಗರ್ ಹುಕುಂ, ಹಕ್ಕುಪತ್ರ, ನಮೂನೆ1-5 ರ ವೆಬ್‌ ಅಪ್ಲಿಕೇಷನ್, ಹಾಗೂ ಪೌತಿ ಖಾತೆ ಆಂದೋಲನ ಆ್ಯಪ್‌ಗಳ ಕಾರ್ಯಗಳನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ದೇವರಾಜು ತಿಳಿಸಿದರು.ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಿಂದ ವಂಚಿತರಾಗುತ್ತಿದ್ದು, ಸುಮಾರು 30 ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ 1196 ಗ್ರೆಡ್ 1 ಗ್ರಾಮಪಂಚಾಯಿತಿ ಹಾಗೂ 304 ಹೋಬಳಿ ವೃತ್ತಗಳಲ್ಲಿ ಇರುವ ಗ್ರೆಡ್-01 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೇಲ್ದರ್ಜೆಗೇರಿಸಿ, ರಾಜಸ್ವ ನಿರೀಕ್ಷಕರು, ಪ್ರಥಮದರ್ಜೆ ಸಹಾಯಕರಿಗೆ ಪದೋನ್ನತ್ತಿ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಅಲ್ಲದೆ ಪತಿ, ಪತ್ನಿ ಪ್ರಕರಣದಲ್ಲಿ ಅಂತರ್‌ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ ಅಂತಿಮ ಆದೇಶ ಪ್ರಕಟಿಸುವುದು. ಕೆಪಿಆರ್‌ಎಸ್ ನಿಯಮದಂತೆ ಸರಕಾರಿ ರಜಾ ದಿನಗಳಲ್ಲಿ ಮೆಮೋ ಹಾಕದಿರಲು, ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಗ್ರಾಮ ಆಡಳಿತ ಅಧಿಕಾರಿಗಳ ಒತ್ತಾಯವಾಗಿದೆ ಎಂದು ದೇವರಾಜು ನುಡಿದರು.ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯಮಟ್ಟದ ಜೇಷ್ಠತೆಯಾಗಿ ಪರಿಗಣಿಸಬೇಕು. ಮೊಬೈಲ್ ಆ್ಯಪ್‌ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತುಗಳನ್ನು ತಕ್ಷಣವೇ ರದ್ದುಪಡಿಸಬೇಕು. ಪ್ರಯಾಣ ಭತ್ಯೆಯನ್ನು 500 ರುಗಳಿಂದ 3000 ರುಗಳಿಗೆ ಹೆಚ್ಚಿಸಬೇಕು. ಕೆಲಸದ ಅವಧಿ ಮುನ್ನ ಮತ್ತು ಕೆಲಸದ ಅವಧಿ ನಂತರ ನಡೆಸಲಾಗುವ ಎಲ್ಲಾ ವರ್ಚುವಲ್ ಸಭೆಗಳ್ನು ಕಡ್ಡಾಯವಾಗಿ ನಿಷೇಧಿಸಬೇಕೆಂಬುದು ನಮ್ಮೆಲ್ಲರ ಬೇಡಿಕೆಯಾಗಿದೆ. ಸರಕಾರ ನಮ್ಮ ಬೇಡಿಕೆಗಳಿಗೆ ಮನ್ನಣೆ ನೀಡದಿದ್ದರೆ 26-09-2024 ರಿಂದ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಠಾವಧಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.ಈ ವೇಳೆ ಗೌರವಾಧ್ಯಕ್ಷರಾದ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಭಕ್ತವತ್ಸಲ, ಖಜಾಂಚಿ ಮೋಹನ್, ಉಪಾಧ್ಯಕ್ಷರಾದ ಯಮನೂರು, ಜಿಲ್ಲಾ ಸಹಕಾರ್ಯದರ್ಶಿ ರಾಘವೇಂದ್ರಸ್ವಾಮಿ, ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಎಚ್.ಸಿ.ಹೇಮಾ ಸೇರಿದಂತೆ ಪದಾಧಿಕಾರಿಗಳು, ನಿರ್ದೇಶಕರುಗಳು ಉಪಸ್ಥಿತರಿದ್ದರು.

Share this article