ಕೊಪ್ಪಳ:
ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೊಟ್ರೇಶ ಜವಳಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಸ್ಥರಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ರಾಜ್ಯದಲ್ಲಿ 5000ಕ್ಕೂ ಹೆಚ್ಚು ನೌಕರರಿಗೆ ಕಳೆದ 6 ತಿಂಗಳಿಂದ ವೇತನ ಪಾವತಿಸಿಲ್ಲ. ಇದರಿಂದ ನೌಕರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಟುಂಬ ನಿರ್ವಹಣೆ, ದಿನಸಿ ಖರೀದಿ, ಮಕ್ಕಳ ಶಾಲಾ ಪ್ರವೇಶಾತಿ, ಕುಟುಂಬದ ಸದಸ್ಯರ ವೈದ್ಯಕೀಯ ವೆಚ್ಚ, ಪ್ರಯಾಣ ವೆಚ್ಚ, ಸಾಲಗಳ ಮರುಪಾವತಿ, ಇಎಂಐ ಸೇರಿ ಅನೇಕ ರೀತಿಯ ಖರ್ಚು-ವೆಚ್ಚ ನಿಭಾಯಿಸಲು ತೀವ್ರ ತೊಂದರೆಯುಂಟಾಗುತ್ತಿದೆ ಎಂದರು.
ಈಗಾಗಲೇ ಬೇಡಿಕೆಗಳ ಈಡೇರಿಕೆಗಾಗಿ ಜು. 7ರಿಂದ ರಾಜ್ಯಾದ್ಯಂತ ನೌಕರರು ಅಸಹಕಾರ ಚಳವಳಿ ಮಾಡುತ್ತಿದ್ದು, ಕೂಡಲೇ ಬಾಕಿ ವೇತನ ಪಾವತಿಸಿ ಎಲ್ಲ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ ಅವರು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದರೂ ರಾಜ್ಯ ಸರ್ಕಾರ ನೌಕರರ ವೇತನ ಪಾವತಿಸುವಲ್ಲಿ ತಾಂತ್ರಿಕ ಕಾರಣ ಹೇಳಿ ವಿಳಂಬ ಮಾಡುತ್ತಿದೆ. ಇದರಿಂದ ನೌಕರರು ಸಂಕಷ್ಟ ಎದುರಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಹಾಗೂ 6 ತಿಂಗಳ ಬಾಕಿ ವೇತನ ಪಾವತಿ ಆಗುವವರೆಗೂ ಅಸಹಕಾರ ಚಳವಳಿ ಮಾಡುತ್ತೇವೆ ಎಂದು ನೌಕರರು ಘೋಷಣೆ ಕೂಗಿದರು.