ಸರಕುಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣ ಉದ್ಘಾಟಿಸಿದ ಶಾಸಕಕನ್ನಡಪ್ರಭ ವಾರ್ತೆ ಸಿದ್ದಾಪುರ
ತಾಲೂಕಿನ ಸರಕುಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿ, ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ಬಸ್ ನಿಲ್ದಾಣವನ್ನು ಶಾಸಕರ ಅನುದಾನದಡಿ ನಿರ್ಮಿಸಲಾಗಿದ್ದು, ಪ್ರಯಾಣಿಕರಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆ ಸಿಗಲಿದೆ. ಕೇವಲ ಕಟ್ಟಡ ನಿರ್ಮಾಣವಷ್ಟೇ ಅಲ್ಲದೆ, ಈ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಸಂಚಾರ ಲಭ್ಯವಾಗುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕ್ಷೇತ್ರದ ಗ್ರಾಮೀಣ ರಸ್ತೆಗಳ ಸುಧಾರಣೆ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಮುಖ್ಯ. ಗ್ರಾಮದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು. ಸರಕುಳಿ ಗ್ರಾಮದ ಜನರ ಸಾರಿಗೆ ಸಮಸ್ಯೆ ನೀಗಿಸಲು ಈ ಬಸ್ ನಿಲ್ದಾಣ ಪೂರಕವಾಗಲಿದೆ ಎಂದರು.
ಸರಕುಳಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ:ತಾಲೂಕಿನ ಅತ್ತಿಸವಲು ಮತ್ತು ಅಣಲೇಬೈಲನ ದಿವರಕೇರಿಯಲ್ಲಿ ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ತಲುಪಿಸುವ ನಿಟ್ಟಿನಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಲ ಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಲಾದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ಉದ್ಘಾಟನೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು ನೀರಿಗಾಗಿ ಪಡುತ್ತಿದ್ದ ಕಷ್ಟ ತಪ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ಯೋಜನೆಯು ಗುಣಮಟ್ಟದಿಂದ ಕೂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಕ್ಷೇತ್ರದಾದ್ಯಂತ ಕುಡಿಯುವ ನೀರು, ರಸ್ತೆ ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ತಾವು ಬದ್ಧರಾಗಿರುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.