ರಾಮನಗರ: ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಸೈಯದ್ ತನ್ವೀರ್ ಹುಸೇನ್ ಅವರನ್ನು ಕರ್ತವ್ಯದಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ವಕೀಲರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಹೋರಾಟವನ್ನು ಬುಧವಾರ ಕೈಬಿಟ್ಟರು.
ಅಲ್ಲದೆ, ವಕೀಲರ ಸಮೂಹ ತಮ್ಮ ಗೆಲುವನ್ನು ಮಹಾತ್ಮಗಾಂಧಿ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅರ್ಪಿಸಿದರು. ನ್ಯಾಯಕ್ಕಾಗಿ ಆಗ್ರಹಿಸಿ ಗುರುವಾರ ವಕೀಲರ ಸಮೂಹ ವಿಧಾನಸೌಧ ಚಲೋ ನಡೆಸಲು ತೀರ್ಮಾನಿಸಿದ್ದರು. ಗೃಹ ಸಚಿವರು ಪಿಎಸ್ಐ ಅಮಾನತು ಘೋಷಿಸಿದ ಹಿನ್ನೆಲೆಯಲ್ಲಿ ವಕೀಲರು ಪ್ರತಿಭಟನೆಯನ್ನು ಮೊಟಕುಗೊಳಿಸಿದರು. ಅಲ್ಲದೆ, ವಿಧಾನಸೌಧ ಚಲೋ ಕಾರ್ಯಕ್ರಮವನ್ನೂ ಕೈಬಿಡಲಾಗಿದೆ ಎಂದು ಘೋಷಿಸಿದರು.
ವಕೀಲರ ಸಂಘದ ಆವರಣದಲ್ಲಿ ಫೆ.12ರಿಂದ ಆರಂಭವಾದ ವಕೀಲರ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಫೆ.19ರಂದು ಸ್ಥಳಾಂತರಗೊಂಡು ಅಹೋರಾತ್ರಿ ಹೋರಾಟವಾಗಿ ಬದಲಾಯಿತು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಕೀಲರು ದಿಗ್ಬಂಧನ ವಿಧಿಸಿದರು.ದಿನದಿಂದ ದಿನಕ್ಕೆ ತೀವ್ರಗೊಂಡ ವಕೀಲರ ಹೋರಾಟ, ರಾಜ್ಯದ ಗಮನ ಸೆಳೆದಿತ್ತು. ಮಾಜಿ ಸಿಎಂ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋರ್, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಧರಣಿನಿರತ ವಕೀಲರನ್ನು ಭೇಟಿ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.
ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ವಿಶಾಲ್ ರಘು ಮಾತನಾಡಿ, ವಕೀಲರ ಮೇಲಿನ ಸುಳ್ಳು ಪ್ರಕರಣ ದಾಖಲು ವಿರೋಧಿಸಿ ಹಾಗೂ ಪಿಎಸ್ಐ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಹಿರಿಯ, ಕಿರಿಯ, ಮಹಿಳಾ ವಕೀಲರ ನ್ಯಾಯಯುತ ಹೋರಾಟದ ಫಲವಾಗಿ ಸಿಕ್ಕ ಜಯ ಇದಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಹೊಸ ಇತಿಹಾಸ ಬರೆದಿದ್ದೇವೆ. ಯಾರಿಂದಲೂ ಬಗೆಹರಿಸಲಾಗದ ಸಮಸ್ಯೆಯನ್ನು ವಕೀಲರು ಹೋರಾಡಿ ನ್ಯಾಯ ಪಡೆದುಕೊಂಡಿದ್ದಾರೆ ಎಂದರು.
ನಾವು ಸಬ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ವಜಾಗೊಳಿಸಿ ಅವರ ಕುಟುಂಬವನ್ನು ಬೀದಿಗೆ ತಳ್ಳಿ ಅನ್ನಲಿಲ್ಲ. ತಪ್ಪು ಮಾಡಿದ ನಮ್ಮ ವಕೀಲ ಸಹೋದರನನ್ನು ಅಮಾನತು ಮಾಡಿದೆವು. ಅದೇ ರೀತಿ ಅಮಾನತು ಮಾಡುವಂತೆ ಕೇಳಿದೆವು. ಈಗ ಅದರ ಪರಿಣಾಮ ಗೊತ್ತಾಗಿದೆ. ಸಾರ್ವಜನಿಕರ ಕೆಲಸ ಮಾಡುವ ಅಧಿಕಾರಿಗಳು ಆಡಳಿತಗಾರರ ಕೈಗೊಂಬೆಯಾಗದೆ ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಿದರೆ ಯಾರೂ ಪ್ರಶ್ನೆ ಮಾಡುವುದಿಲ್ಲ. ವಕೀಲರಿಗೆ ನ್ಯಾಯ ಕೊಡುವಲ್ಲಿ ವಿಫಲರಾದರೊ ಇಲ್ಲವೊ ಎಂಬುದನ್ನು ಡಿಸಿ, ಎಸ್ಪಿ ಆತ್ಮವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.
ಮಾಜಿ ಸಿಎಂ ಕುಮಾರಸ್ವಾಮಿ ತಡರಾತ್ರಿ ಬಂದು ಹೋರಾಟಗಾರರಿಗೆ ಧೈರ್ಯ ತುಂಬಿದರು. ವಿರೋಧ ಪಕ್ಷದ ನಾಯಕ ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಕೀಲರ ಹೋರಾಟವನ್ನು ಸದನದಲ್ಲಿ ಆಡಳಿತ ಪಕ್ಷದವರ ಗಮನ ಸೆಳೆಯುವಂತೆ ಮಾಡಿದರು. ಅಲ್ಲಿ ಶಾಸಕ ಯತ್ನಾಳ್ ಗಾಂಭೀರ್ಯ ಪ್ರದರ್ಶಿಸಿದರು. ಹಾಗಾಗಿ ವಕೀಲರ ಹೋರಾಟಕ್ಕೆ ಬೆಂಬಲ ನೀಡಿದವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ವಿಶಾಲ್ ರಘು ತಿಳಿಸಿದರು.
ಬಾಕ್ಸ್...............
ಪ್ರತಿಭಟನಾನಿರತ ವಕೀಲರನ್ನು ಉದ್ದೇಶಿಸಿ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ವಕೀಲರ ಸಮೂಹಕ್ಕೆ ಅಭಿನಂದನೆ ಸಲ್ಲಿಸಿದರು. ನಿಮ್ಮ ಹೋರಾಟಕ್ಕೆ ಸರ್ಕಾರ ತಲೆಬಾಗಿದೆ. ಸರ್ಕಾರ ನಡೆದುಕೊಂಡ ರೀತಿಯಿಂದ ನೀವು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂತು. ನಿಮ್ಮ ಹೋರಾಟಕ್ಕೆ ಸರ್ಕಾರ ಹೆದರಿದೆ. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ವಕೀಲರ ಮೇಲೆ ಸದಾ ಅಭಿಮಾನ ಇದೆ ಎಂದು ಕುಮಾರಸ್ವಾಮಿ ಹೇಳಿದರು.ಬಾಕ್ಸ್.............
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಕೀಲರು ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.21ಕೆಆರ್ ಎಂಎನ್ 4.ಜೆಪಿಜಿ
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನಾನಿರತ ವಕೀಲರು ವಿಕ್ಟರಿ ಚಿಹ್ನೆ ಪ್ರದರ್ಶಿಸಿ ಸಂಭ್ರಮಿಸಿದರು.