ಎಂ.ಕೆ.ಹರಿಚರಣ್ ತಿಲಕ್
ಪಟ್ಟಣದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಸೇರಿದ ರೆಕಾರ್ಡ್ ರೂಂ ಸಹ ಸಂಪೂರ್ಣ ಶಿಥಿಲಗೊಂಡಿದೆ. ಇದರಿಂದ ತಾಲೂಕಿನ ಲಕ್ಷಾಂತರ ರೈತರಿಗೆ ಸಂಬಂಧಿಸಿದ ಭೂ ದಾಖಲೆಗಳು ಅಪಾಯಕ್ಕೆ ಸಿಲುಕುವ ಆತಂಕ ಎದುರಾಗಿದೆ.
ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಉಪ ನೋಂದಣಾಧಿಕಾರಿಗಳ ಕಚೇರಿ ಇದ್ದು, ನಿತ್ಯ ನೂರಾರು ರೈತರು ಹಾಗೂ ಸಾರ್ವಜನಿಕರ ಆಸ್ತಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ ಕಾರಣ ಈ ಕಚೇರಿಯನ್ನು ತಾತ್ಕಾಲಿಕವಾಗಿ ಹಳೆ ತಾಲೂಕು ಕಚೇರಿಗೆ ಸ್ಥಳಾಂತರಿಸಲಾಗಿದೆ.ಮಿನಿವಿಧಾನ ಸೌಧವನ್ನು ನಿರ್ಮಿಸಿದ ನಂತರ ತೆರವಾದ ಹಳೆಯ ತಾಲೂಕು ಕಚೇರಿಗೆ ಉಪ ನೋಂದಣಾಧಿಕಾರಿಗಳ ಕಚೇರಿ ಸ್ಥಳಾಂತರಿಸಲಾಗಿದ್ದರೂ ನೋಂದಣಿಯಾದ ಆಸ್ತಿ ದಾಖಲೆಗಳು ಮಾತ್ರ ಹಳೆಯ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿಯೇ ಉಳಿದಿವೆ. ಅವುಗಳಿಗೆ ಸೂಕ್ತ ರಕ್ಷಣೆ ಕೊರತೆ ಎದುರಾಗಿದೆ.
ದಾಖಲೆ ಸಂಗ್ರಹಿಸಲು ಜಾಗದ ಸಮಸ್ಯೆ:
ಕಟ್ಟಡ ಶಿಥಿಲವಾದ ಕಾರಣದಿಂದ ಕಚೇರಿಯನ್ನು ಹಳೆಯ ತಾಲೂಕು ಕಚೇರಿಗೆ ವರ್ಗಾಯಿಸಲಾಗಿದೆ. ಇದೇ ಜಾಗದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಚೇರಿ ನೂತನ ಕಟ್ಟಡ ನಿರ್ಮಿಸಲು ರಾಜ್ಯ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಕಳೆದ 2019ರ ಮಾರ್ಚ್ 18ರಲ್ಲಿಯೇ 1,27,30,000 ಮೊತ್ತದ ಹಣವನ್ನು ಆಡಳಿತಾತ್ಮಕ ಮಂಜೂರಾತಿ ಪಡೆದು ಅನುಮೋದಿಸಿದ್ದಾರೆ.
ರಾಜ್ಯ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಶಿಥಿಲವಾಗಿರುವ ಹಳೆಯ ಕಟ್ಟಡವನ್ನು ಕೆಡವಿ ಅದೇ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಲು ಜಿಲ್ಲಾ ಪಾರಂಪರಿಕ ಸಂರಕ್ಷಣಾ ಸಮಿತಿ ಅನುಮೋದನೆ ಪಡೆಯುವಂತೆ ಸೂಚಿಸಿದೆ. ಸಾರ್ವಜನಿಕರ ಆಸ್ತಿ ಪತ್ರಗಳ ಸಂರಕ್ಷಣೆ ದೃಷ್ಟಿಯಿಂದ ಉಪ ನೋಂದಣಾಧಿಕಾರಿಗಳ ನೂತನ ಕಟ್ಟಡ ನಿರ್ಮಿಸಲೇಬೇಕಾಗಿದೆ. ಆದರೆ, ಉಪ ನೋಂದಣಾಧಿಕಾರಿಗಳ ಕಚೇರಿ ನಿರ್ಮಿಸಲು ಅಥವಾ ಹಳೆಯ ಶಿಥಿಲವಾಗಿರುವ ಕಟ್ಟಡವನ್ನು ಕೆಡವಲು ಜಿಲ್ಲಾಧಿಕಾರಿಗಳಾಗಲೀ ಅಥವಾ ತಹಸೀಲ್ದಾರರಾಗಲೀ ಮುದ್ರಾಂಕ ಇಲಾಖೆಗೆ ಅಗತ್ಯ ಸಹಕಾರ ನೀಡುತ್ತಿಲ್ಲ. ಹಳೆಯ ಶಿಥಿಲ ಕಟ್ಟಡದಲ್ಲಿರುವ ನೂರಾರು ವರ್ಷಗಳ ಹಳೆಯ ಆಸ್ತಿ ದಾಖಲಾತಿಗಳು ಹಾಳಾಗುವ ಅಪಾಯಕ್ಕೆ ಸಿಲುಕಿದ್ದರೂ ಸ್ಥಳೀಯವಾಗಿ ಯಾವುದೇ ಜನಪ್ರತಿನಿಧಿಗಳು ಈ ಬಗ್ಗೆ ತಲೆಕಡೆಸಿಕೊಳ್ಳುತ್ತಿಲ್ಲ.
- ಕಾರಿಗನಹಳ್ಳಿ ಪುಟ್ಟೇಗೌಡ, ರೈತ ಸಂಘದ ತಾಲೂಕು ಅಧ್ಯಕ್ಷ