ಉಡುಪಿ : ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಿಂದ ಕೇವಲ ಜನರಿಗೆ ಮಾತ್ರವಲ್ಲದೇ ಸರ್ಕಾರಕ್ಕೂ ಅನುಕೂಲವಾಗಲಿದೆ, ಜನರಿಗೆ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಪರಿಹಾರ ಸಿಗಲಿದೆ, ಸರ್ಕಾರಕ್ಕೆ ತನ್ನ ಕರ್ತವ್ಯ ನಿರ್ವಹಣೆಯೂ ಸುಲಭ ಸಾಧ್ಯವಾಗಲಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಪ್ರಜಾಸೇವಾ ಇಲಾಖೆ ಹಾಗೂ ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಉಡುಪಿ ಜಿಲ್ಲಾ ಪ್ರಜಾಸೇವೆ ಆಂದೋಲನ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಮತ್ತು ಅಧಿಕಾರಿಗಳ ಕರ್ತವ್ಯ ನೆನಪಿಸುವ ಕೆಲಸ ಈ ಪ್ರಜಾಸೇವಾ ಆಂದೋಲನದ ಮೂಲಕ ಆಗಬೇಕು ಎಂದರು.
ಸಚಿವರು ಉಡುಪಿ ಜಿಲ್ಲೆಯ 9-11, ಡೀಮ್ಡ್ ಫಾರೆಸ್ಟ್, ಸಿಆರ್ಝಡ್, ಕಸ್ತೂರಿರಂಗನ್ ವರದಿ ಇತ್ಯಾದಿ ಸಮಸ್ಯೆಗಳ ಬಗ್ಗೆ ಇಲಾಖಾವಾರು ಸಭೆ ನಡೆಸಿ ಪರಿಹಾರ ನೀಡಬೇಕು ಎಂದವರು ಆಗ್ರಹಿಸಿದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತವಿಕವಾಗಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ಕೊ ಡವೂರು, ಜಿಪಂ ಸಿಓಇ ಪ್ರತೀಕ್ ಬಾಯಲ್, ಎಸ್ಪಿ ಹರಿರಾಂ ಶಂಕರ್, ಡಿಎಫ್ಓ ರುಥ್ರೆನ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸ್ವಾಗತಿಸಿ, ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.
ಕರಾವಳಿ ಭಾಗದ ಅಭಿವೃದ್ಧಿಯ ಉದ್ದೇಶದಿಂದ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿ, ವ್ಯವಹಾರ ಕ್ಷೇತ್ರ, ಇಲ್ಲಿನ ಯುವಜನತೆಗೆ ಉದ್ಯೋಗಾವಕಾಶ ಸೇರಿದಂತೆ ಒಟ್ಟಾರೆಯಾಗಿ ಕರಾವಳಿ ಭಾಗದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.