ಪ್ರಜಾಸೇವಾ ಆಂದೋಲನದಿಂದ ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಬಹುದು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಕೊಪ್ಪಳ: ಪ್ರಜಾಸೇವಾ ಆಂದೋಲನದಿಂದ ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಬಹುದು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು. ತಾಲೂಕಿನ ಅಳವಂಡಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಬರಘೋಷಣೆಗೆ ಒತ್ತಾಯ
ಅಳವಂಡಿ ಹೋಬಳಿ ಸೇರಿದಂತೆ ಕೊಪ್ಪಳ ತಾಲೂಕು ಬರಘೋಷಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ಸರಿಪಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯ ಮಾಡುವುದಾಗಿ ಸಂಸದರು ಇದೆ ವೇಳೆ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ ಮಾತನಾಡಿ, ಸಾರ್ವಜನಿಕರ ಅರ್ಜಿಗಳು, ಅಹವಾಲುಗಳಿಗೆ 30 ದಿನಗಳಲ್ಲಿ ಪರಿಹಾರ ಸಿಗಬೇಕು ಎಂಬುದು ಈ ಕಾರ್ಯಕ್ರಮ ಉದ್ದೇಶವಾಗಿದೆ. ಜನರು ಇಂತಹ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮಾತನಾಡಿ, ಸರ್ಕಾರದ ಮಾರ್ಗಸೂಚಿಯಂತೆ, ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಧನಾತ್ಮಕ ರೀತಿಯಲ್ಲಿ ವಿಲೇ ಮಾಡುತ್ತಿದ್ದೇವೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರು ಪ್ರತಿ ಬುಧವಾರ ಸಭೆ ನಡೆಸಿ ಅರ್ಜಿಗಳ ವಿಲೇವಾರಿ ಬಗ್ಗೆ ಪರಿಶೀಲಿಸುತ್ತಾರೆ ಎಂದು ತಿಳಿಸಿದರು.ಸಭೆಯಲ್ಲಿ ಕೊಪ್ಪಳ ಜಿಲ್ಲಾ ಹಾಗೂ ತಾಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.ಗಂಗಾವತಿಯಲ್ಲಿ ಪ್ರಜಾ ಸೇವಾ ಆಂದೋಲನ
ಗಂಗಾವತಿ: ಇಲ್ಲಿಯ ನಗರಸಭೆಯಲ್ಲಿ ಜಿಲ್ಲಾಡಳಿತ ಹಾಗೂ ಗಂಗಾವತಿ ತಾಲೂಕು ಆಡಳಿತದ ಸಹಯೋಗದಲ್ಲಿ ಪ್ರಜಾ ಸೇವಾ ಆಂದೋಲನ ಜರುಗಿತು. ಕಾರ್ಯಕ್ರಮವನ್ನು ಶಾಸಕ ಗಾಲಿ ಜನಾರ್ದನ ರಡ್ಡಿ ಉದ್ಘಾಟಿಸಿದರು. ಈ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಟ್ಟರು.ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂತಹ ಜನಪರ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ತ್ವರಿತಗತಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಮರೆಡ್ಡಿ, ಆರ್.ಎಫ್.ಒ. ಬಸವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಆಯೋಜನೆ ಮಾಡಿದ ತಹಸೀಲ್ದಾರ್ ವಸಂತಕುಮಾರಿ ಮತ್ತು ಇಒ ರಾಮರೆಡ್ಡಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.