ಕರಡು ಮತದಾರರ ಪಟ್ಟಿ ಪ್ರಕಟಣೆ: ನಂತರದ ಪ್ರಕ್ರಿಯೆ ಎಚ್ಚರಿಕೆಯಿಂದ ನಿರ್ವಹಿಸಿ

KannadaprabhaNewsNetwork |  
Published : Aug 26, 2026, 02:00 AM IST
25ಕೆಎಂಎನ್ ಡಿ16 | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಡಿ 1,50,269 ಮಂದಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಹಾಗೂ ಅರ್ಹತೆ ದೃಢೀಕರಣ ಕಾರ್ಯವನ್ನು ನಿಯಮಾನುಸಾರ ಹಾಗೂ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ಪ್ರಕಟಣೆ ನಂತರದ ಹಂತದ ಕಾರ್ಯಗಳನ್ನು ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಕಾರಿಗಳು (ಎಇಆರ್‌ಒ) ಕಾನೂನು ಬದ್ಧವಾಗಿ ಹಾಗೂ ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ಮಂಡ್ಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಭವನದಲ್ಲಿ ನಡೆದ ಸಭೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಡಿ ಕೈಗೊಂಡಿರುವ ಕಾರ್ಯಗಳ ಪ್ರಗತಿ, ನೋಟಿಸ್ ಜಾರಿ, ದಾಖಲೆಗಳ ಪರಿಶೀಲನೆ ಹಾಗೂ ಮುಂದಿನ ಹಂತದ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಡಿ 1,50,269 ಮಂದಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಹಾಗೂ ಅರ್ಹತೆ ದೃಢೀಕರಣ ಕಾರ್ಯವನ್ನು ನಿಯಮಾನುಸಾರ ಹಾಗೂ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟಣೆಯ ನಂತರದ ಪೋಸ್ಟ್ ಡ್ರಾಫ್ಟ್ ಹಂತದಲ್ಲಿ ಕೈಗೊಳ್ಳಬೇಕಾದ ಎಲ್ಲ ಕಾನೂನಾತ್ಮಕ ಕ್ರಮಗಳನ್ನು ಎಚ್ಚರಿಕೆಯಿಂದ ಪಾಲಿಸಬೇಕು. ಕರಡು ಪಟ್ಟಿ ಪ್ರಕಟಣೆ ನಂತರ ಆಕ್ಷೇಪಣೆಗಳನ್ನು ಸ್ವೀಕರಿಸುವುದು, ಅವುಗಳನ್ನು ನಿಯಮಾನುಸಾರ ಪರಿಶೀಲಿಸುವುದು ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವುದು ಪ್ರಮುಖ ಹಂತಗಳಾಗಿವೆ. ಈ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದರು.

ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ:

ಎಇಆರ್‌ಒಗಳು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್‌ಒ) ನಿಯಮಿತವಾಗಿ ಸಭೆ ನಡೆಸಿ, ನೋಟಿಸ್‌ಗಳನ್ನು ಮನೆ ಮನೆಗೆ ತಲುಪಿಸುವಾಗ ಅಗತ್ಯ ಪೂರಕ ದಾಖಲೆಗಳನ್ನು ಪಡೆಯುತ್ತಿರುವ ಕುರಿತು ಪ್ರಗತಿ ಪರಿಶೀಲಿಸಬೇಕು. ನೋಟಿಸ್ ಪಡೆದಿರುವ ಮತದಾರರ ದಾಖಲೆಗಳನ್ನು ನಿಯಮಾನುಸಾರ ಸಮಗ್ರವಾಗಿ ಪರಿಶೀಲಿಸಿ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ನೋಟಿಸ್ ಜಾರಿ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಸ್ಥಳದಲ್ಲಿಯೇ ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಬೇಕು. ಮತದಾರರಿಗೆ ಅನುಕೂಲವಾಗುವಂತೆ ವಿಚಾರಣಾ ಸ್ಥಳವನ್ನು ಗ್ರಾಪಂ ಮಟ್ಟದಲ್ಲಿಯೇ ನಿಗದಿಪಡಿಸಿ, ಅಲ್ಲಿಯೇ ವಿಚಾರಣೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದರು.

ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಬದಲಾವಣೆಗಳಿಗೆ ಸಂಬಂಸಿದಂತೆ ಅರ್ಹ ನಾಗರಿಕರು ನಿಗದಿತ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಸೇರ್ಪಡೆಗೆ ನಮೂನೆ 6, ತಿದ್ದುಪಡಿಗೆ ನಮೂನೆ 8 ಹಾಗೂ ಹೆಸರು ಕೈಬಿಡುವ ಪ್ರಕ್ರಿಯೆಗೆ ನಮೂನೆ 7 ಬಳಸಬೇಕು. ಅಗತ್ಯವಿರುವ ಕಡೆ ಪೂರಕ ದಾಖಲೆಗಳ ಪ್ರತಿಗಳನ್ನು ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಶೇಖರ್, ಮಂಡ್ಯ ವಿವಿ ಕುಲಸಚಿವ ಕೃಷ್ಣಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ ಸೇರಿದಂತೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗು, ಕರಾವಳಿಯಲ್ಲಿ ಭರ್ಜರಿ ಮಳೆ
ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್​