ಕನ್ನಡಪ್ರಭ ವಾರ್ತೆ, ಮಂಡ್ಯ
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾ ವಕೀಲರ ಸಂಘದಿಂದ ಮೇ ೨ರಂದು ಸಂಜೆ ೫ ಗಂಟೆಗೆ ಸಂಘದ ಆವರಣದಲ್ಲಿ ಸವಾಲುಗಳನ್ನು ಮೆಟ್ಟಿನಿಂತ ಅದ್ಭುತ ಆಡಳಿತಗಾರ ಜಂಟಲ್ಮನ್ ರಾಜಕಾರಣಿ ಎಸ್.ಎಂ.ಕೃಷ್ಣ ಸಂಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ತಿಳಿಸಿದ್ದಾರೆ.
ಮೈಸೂರು ರಾಮಕೃಷ್ಣ ಆಶ್ರಮ ಅಧ್ಯಕ್ಷ ಪರಮಪೂಜ್ಯ ಶ್ರೀಮುಕ್ತಿದಾನಂದ ಮಹಾರಾಜ್ ಸ್ವಾಮೀಜಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು.ಕಾರ್ಯಕ್ರಮದಲ್ಲಿ ೭೫ ವಸಂತ ಪೂರೈಸಿದ ಹಿರಿಯ ವಕೀಲ ಹಾಗೂ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರಿಗೆ ವಕೀಲರ ಸಂಘದ ಸಹೋದ್ಯೋಗಿ ಮಿತ್ರರಿಂದ ಅಭಿನಂದನಾ ಸಮರ್ಪಣೆ ಏರ್ಪಡಿಸಲಾಗಿದೆ. ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಅವರು ಗೌರವ ಸಮರ್ಪಣೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಅಧ್ಯಕ್ಷತೆ ವಹಿಸುವರು. ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ, ಡಾ.ಕೆ.ಸುಧಾಕರ್ ಅವರು ಮರೆತರು ಮರೆಯಲಾಗದ ಜಂಟಲ್ ಮನ್ ರಾಜಕಾರಣಿ ಎಸ್.ಎಂ.ಕೃಷ್ಣ ಕುರಿತು ಮಾತನಾಡುವರು. ಶಾಸಕರಾದ ಪಿ. ರವಿಕುಮಾರ್, ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಕೃಷ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸಿ. ಚಲುವಯ್ಯ ಅವರು ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ ೫ ಗಂಟೆಗೆ ಸುಮಧುರ ವಾದ್ಯಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.