ಪಂಪ್ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆತಿದ್ದು, ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ಮೆಸ್ಕಾಂ, ಕೆಯುಎಫ್ಡಿಸಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸ್ಥಳ ಪರಿಶೀಲನೆ ನಡೆಸಿದರು.
ಮಂಗಳೂರು: ಹಲವು ಸಮಯದ ನಂತರ ನಗರದ ಪಂಪ್ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆತಿದ್ದು, ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ಮೆಸ್ಕಾಂ, ಕೆಯುಎಫ್ಡಿಸಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಶಾಸಕರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಸುಮಾರು 4 ಕೋಟಿ ರು. ಅನುದಾನ ಮಂಜೂರುಗೊಳಿಸಿ ಗುದ್ದಲಿ ಪೂಜೆಯನ್ನು ಸಹ ನೆರವೇರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿದ್ದರಿಂದ ಇಲ್ಲಿನ ರಸ್ತೆ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಪರಿಣಾಮ ಜನರು ಅನುಭವಿಸುತ್ತಿದ್ದ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಹಲವು ಬಾರಿ ಮನವಿ ಮಾಡಿದ ಕಾರಣ ಇಂದು ಈ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದೆ ಎಂದರು.
ಈ ಸ್ಥಳವು ನಗರದ ಪ್ರಮುಖ ಭಾಗವಾಗಿದ್ದು, ಎಲ್ಲ ಇಲಾಖೆಗಳು ಸಮನ್ವಯತೆಯಿಂದ, ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವುದು ಅಗತ್ಯವಾಗಿದೆ. ಹಾಗಾಗಿ ಎಲ್ಲರನ್ನು ಸ್ಥಳಕ್ಕೆ ಕರೆಸಿ ಕಾಮಗಾರಿಯ ಬಗ್ಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದರು.ಪಾಲಿಕೆಯ ನಿಕಟಪೂರ್ವ ಸದಸ್ಯ ಸಂದೀಪ್ ಗರೋಡಿ, ಅಧಿಕಾರಿಗಳಾದ ಪ್ರೀತಂ, ಭವ್ಯ, ಹೇಮಂತ್, ಶರತ್ ಗೌಡ, ಖಾದರ್, ಪೊಲೀಸ್ ಅಧಿಕಾರಿಗಳಾದ ಕೃಷ್ಣಾನಂದ ನಾಯಕ್, ಗೋಪಾಲ ಕೃಷ್ಣ ಭಟ್, ಗುತ್ತಿಗೆದಾರ ಸುಧಾಕರ್ ಪೂಂಜ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.