ಕೊಪ್ಪಳ: ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ತಾಲೂಕಿನ ಬಿಸರಳ್ಳಿ ಗ್ರಾಮದ ಚಿದಾನಂದಯ್ಯ ಮುಂಡರಗಿಮಠ ಎನ್ನುವಾತ ಸುಳ್ಳು ಮಾಹಿತಿ ನೀಡಿದ್ದರಿಂದ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ, ಆದೇಶಿಸಲಾಗಿದೆ.ಬಿಸರಳ್ಳಿ ಗ್ರಾಮದಲ್ಲಿ 1 ಎಕರೆ ಹೊಲವನ್ನು ತನ್ನ ಮತ್ತು ವಿಜಯ ಆನಂದಯ್ಯ ಅವರಿಗೆ ವರ್ಗಾವಣೆ ಮಾಡುವಂತೆ ಚಿದಾನಂದಯ್ಯ ಗ್ರಾಪಂ ಮೂಲಕ ತಹಸೀಲ್ದಾರ್ಗೆ ಅರ್ಜಿ ಸಲ್ಲಿಸಿದ್ದನು. ಆರು ತಿಂಗಳಾದರೂ ಹಕ್ಕು ಬದಲಾವಣೆ ಆಗಿರಲಿಲ್ಲ. ಗ್ರಾಮ ಲೆಕ್ಕಾಧಿಕಾರಿ ರವಿ ಶೆಟ್ಟಿ ₹5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದನು. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಗ್ರಾಮ ಲೆಕ್ಕಾಧಿಕಾರಿಯನ್ನು ಹಿಡಿದು, ಗ್ರಾಮ ಲೆಕ್ಕಾಧಿಕಾರಿ ಹಾಗೂ ಅವರ ಸಹಾಯಕನ ಮೇಲೆ ಪ್ರಕರಣ ದಾಖಲಿಸಿದ್ದರು. ಆದರೆ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಚಿದಾನಂದಯ್ಯ ತದ್ವಿರುದ್ಧ ಸಾಕ್ಷಿ ನುಡಿದಿದ್ದನು. ಹೀಗಾಗಿ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.ಬಿಡುಗಡೆ ಆದೇಶದ ವಿರುದ್ಧ ಕೊಪ್ಪಳ ಲೋಕಾಯುಕ್ತ ಪೋಲಿಸರು ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಉಚ್ಚ ನ್ಯಾಯಾಲಯ ಆರೋಪಿತರನ್ನು ತಪ್ಪಿಸ್ಥರೆಂದು ತೀರ್ಮಾನಿಸಿ ಆರೋಪಿತರಿಗೆ ಶಿಕ್ಷೆ ವಿಧಿಸಿತ್ತು. ಜತೆಗೆ ಫಿರ್ಯಾದುದಾರ ಚಿದಾನಂದಯ್ಯ ಸುಳ್ಳು ಸಾಕ್ಷಿ ಹೇಳಿದ್ದಕ್ಕೆ, ಆತನ ವಿರುದ್ಧ ವಿಚಾರಣೆ ಕೈಗೊಂಡು ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆದೇಶ ನೀಡಿತ್ತು.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಾಧಿಕಾರಿಗಳು ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಹಿರಿಯ ನ್ಯಾಯಧೀಶರಾದ ಮಲಕಾರಿ ರಾಮಪ್ಪ ಒಡೆಯರ್ ಅವರು, ಚಿದಾನಂದಯ್ಯಗೆ ಸುಳ್ಳು ಸಾಕ್ಷ್ಯ ನೀಡಿದ ಅಪರಾಧಕ್ಕೆ 3 ವರ್ಷ ಕಾರಾಗೃಹ ವಾಸದ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ, 2024 ಅ. 21ರಂದು ತೀರ್ಪು ನೀಡಿದ್ದಾರೆ.ರಾಜ್ಯ ಸರ್ಕಾರದ ಪರವಾಗಿ ಕೊಪ್ಪಳ ಸಿಜೆಎಂ ನ್ಯಾಯಾಲಯದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ವಸಂತ ವಾದ ಮಂಡಿಸಿದ್ದರು ಎಂದು ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.