ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

KannadaprabhaNewsNetwork |  
Published : Oct 01, 2025, 01:00 AM IST
30ಜಿಡಿಜಿ4 | Kannada Prabha

ಸಾರಾಂಶ

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹7721ರಂತೆ ನಿಗದಿಪಡಿಸಲಾಗಿದೆ ಎಂದರು.

ಗದಗ: 2025- 26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಇತ್ತಿಚೆಗೆ 2025- 26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್ ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಹಾಗೂ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಿದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಸರ್ಕಾರದ ಮಾನದಂಡಗಳನ್ವಯ ಎಫ್ಎಕ್ಯು ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಸೂರ್ಯಕಾಂತಿ ಎಫ್ಎಕ್ಯು ಪ್ರಕ್ರಿಯೆಯಲ್ಲಿ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ, ಸಿಬ್ಬಂದಿಯನ್ನು ಬಳಸಿಕೊಳ್ಳುವುದು. ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗೆ ಎಫ್ಎಕ್ಯು ಗ್ರೇಡಿಂಗ್ ತರಬೇತಿ ನೀಡಲು ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕೆಂದು ತಿಳಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹7721ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸರ್ಕಾರ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಲು ಆದೇಶಿಸಲಾಗಿದೆ ಎಂದರು.

ಸರ್ಕಾರದ ಆದೇಶದನುಸಾರ ನ್ಯಾಫೆಡ್ ಸಂಸ್ಥೆ ಮತ್ತು ಎನ್‌ಸಿಸಿಎಫ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ(ಕೆಒಎಫ್) ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ಗುರುತಿಸಲಾಗಿದೆ. ಸೂರ್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲು ಸೂರ್ಯಕಾಂತಿ ಹುಟ್ಟುವಳಿ ಉತ್ಪಾದನಾ ಆಧಾರದ ಮೇಲೆ ಮತ್ತು ರೈತರ ನೋಂದಣಿ ಆಧಾರದ ಮೇಲೆ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ಎನ್‌ಸಿಸಿಎಫ್ ಮಾರ್ಗಸೂಚಿಗಳನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಸದೃಡ PACS/OGCS/TAPCMS/FPO/Agricultural Prodece Co operative Marketing Processing Societies ಸಂಸ್ಥೆಗಳ ಮುಖಾಂತರ ಒಡಂಬಡಿಕೆ ಮಾಡಿಕೊಂಡು 9 ಸ್ಥಳಗಳಲ್ಲಿ ಖರೀದಿ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.ಎಲ್ಲೆಲ್ಲಿ ಖರೀದಿ ಕೇಂದ್ರ?

ಗದಗ ತಾಲೂಕಿನ ಬಳಗಾನೂರ, ಹೊಂಬಳ, ಶಿರಹಟ್ಟಿ ತಾಲೂಕಿನ ರಣತೂರ, ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ, ರೋಣ ತಾಲೂಕಿನ ಅಬ್ಬಿಗೇರಿ, ನರಗುಂದ ಪಟ್ಟಣ ಹಾಗೂ ತಾಲೂಕಿನ ಕಣಕಿಕೊಪ್ಪ, ಮುಂಡರಗಿ ತಾಲೂಕಿನ ಬರದೂರ, ಕಲಕೇರಿ.

PREV

Recommended Stories

ಇಂದಿನಿಂದ ಮಹಿಳಾ ಏಕದಿನ ವಿಶ್ವಕಪ್‌ : 8 ತಂಡ, 31 ಪಂದ್ಯ
ಅಕ್ರಮ ತಡೆಗೆ ‘ಡಿಜಿಟಲ್‌’ ಭೂಸ್ವಾಧೀನ: ಬೈರೇಗೌಡ