ಕನ್ನಡಪ್ರಭ ವಾರ್ತೆ ಸಿದ್ದಾಪುರ
ಪ್ರತಿವರ್ಷ ಪುತ್ತರಿ ನಮ್ಮೆಗೆ 15 ದಿವಸ ಮುಂಚಿತವಾಗಿ ಅಮಾವಾಸ್ಯೆಯ ದಿನದಂದು ಇಗ್ಗುತಪ್ಪ ದೇವರ ಮೂಲಸ್ಥಾನವಾದ ಮಲ್ಮ ಬೆಟ್ಟದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ತಕ್ಕಮುಖ್ಯಸ್ಥರು ಸೇರಿ ಪುತ್ತರಿ ಹಬ್ಬದ ‘ದೇವ ಕಟ್ಟ್’ ಹಾಕಿದ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ಒಂದಷ್ಟು ಕಟ್ಟುಪಾಡುಗಳನ್ನು ಕೂಡ ವಿಧಿಸಲಾಗುತ್ತದೆ. ಅದನ್ನು ದೇವರ ಮುಂದೆ ಒಪ್ಪಿಸಲಾಗುತ್ತದೆ. ಆದರೆ ಇದನ್ನು ಜಿಲ್ಲೆಯ ಮಂದಿ ಸರಿಯಾಗಿ ಪಾಲನೆ ಮಾಡುತ್ತಿಲ್ಲ, ಇದರಿಂದ ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ಬದುಕು ಕಟ್ಟಿಕೊಂಡಿರುವ ಕೊಡವ ಹಾಗೂ ಕೊಡವ ಭಾಷಿಕ ಸಮುದಾಯ ಅವರವರ ಸಂಸಾರದಲ್ಲಿ ಬಹಳಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಆದರೆ ಇದು ಕೆಲವರಿಗೆ ಅರ್ಥ ಆಗುತ್ತಿಲ್ಲ ಮತ್ತೆ ಕೆಲವರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.ಪುತ್ತರಿ ನಮ್ಮೆಗೆ 15 ದಿನಗಳ ಹಿಂದೆ ಇಗ್ಗುತಪ್ಪ ದೇವರ ಪುತ್ತರಿ ದೇವ ಕಟ್ಟ್ ಸಂದರ್ಭ ಹೇಳಲಾದ ಪ್ರತಿಯೊಂದು ವಾಕ್ಯಗಳು ದೇವರ ವಾಕ್ಯಗಳಂತೆ, ನಮ್ಮ ಹಿರಿಯರು ನಡೆಸಿಕೊಂಡು ಬಂದಿರುವ ಆಚಾರ ವಿಚಾರಗಳನ್ನು ಇದೀಗ ಮುಂದುವರಿಸಿಕೊಂಡು ಬರಲಾಗಿದೆ. ಇದನ್ನು ತಪ್ಪದೆ ಪಾಲನೆ ಮಾಡಬೇಕು, ಪುತ್ತರಿ ದೇವ ಕಟ್ಟ್ ಸಮಯದಲ್ಲಿ ಮದುವೆ ಸೇರಿದಂತೆ ಯಾವುದೇ ಶುಭಕಾರ್ಯಗಳನ್ನು ಜನಾಂಗ ಮಾಡಬಾರದು, ಮಾಡಿದ್ದರೆ ಅವರು ಇಗ್ಗುತಪ್ಪನ ವಕ್ರ ದೃಷ್ಟಿಗೆ ಬಲಿಯಾಗುತ್ತಾರೆ ಎನ್ನುವುದು ನಂಬಿಕೆಯಾಗಿದ್ದು, ಇದಕ್ಕೆ ಹಲವಾರು ನಿದರ್ಶನಗಳು ನಮ್ಮ ಕಣ್ಣಿನ ಮುಂದೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಹೀಗೆ ಪುತ್ತರಿ ದೇವ ಕಟ್ಟ್ ಸಂದರ್ಭದಲ್ಲಿ ಹಿಂದಿನ ಕಾಲದಲ್ಲಿ ಬೇಟೆಗಳು ನಿಷೇಧವಾಗಿತ್ತು, ಪ್ರಾಣಿ ಹಿಂಸೆ ಮಾಡಬಾರದು, ಪುತ್ತರಿ ಕಳೆಯುವವರೆಗೂ ಭತ್ತದ ಕಟಾವು ಮಾಡುವಂತಿಲ್ಲ, ಹೀಗೆ ಹಲವಾರು ಕಟ್ಟುಪಾಡುಗಳನ್ನು ವಿಧಿಸಿ ಕಟ್ಟು ಹಾಕಿ ದೇವರ ಸನ್ನಿಧಿಯಲ್ಲಿ ದೇವರಿಗೆ ಒಪ್ಪಿಸಲಾಗಿರುತ್ತದೆ. ಇದಕ್ಕೆ ಬಹಳಷ್ಟು ಶಕ್ತಿ ಇದ್ದು ದಯವಿಟ್ಟು ಯಾರು ಪುತ್ತರಿ ದೇವ ಕಟ್ಟ್ ಉಲ್ಲಂಘನೆ ಮಾಡದೆ ಪರಿಪಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.ಮುಂದುವರಿದು ಮಾತನಾಡಿದ ಅವರು ಮಂದ್ ಮಾನಿಗಳು ಶ್ರದ್ಧಾ ಭಕ್ತಿಯ ಧಾರ್ಮಿಕ ಕೇಂದ್ರವಿದ್ದಂತೆ ಇದು ನಮಗೆ ದೇವಸ್ಥಾನವೂ ಹೌದು. ನಮ್ಮ ಶ್ರೀಮಂತ ಸಂಸ್ಕೃತಿಯ ಅನಾವರಣ ಮಾಡುವ ಸ್ಥಳವು ಹೌದು. ಈ ಹಿಂದೆ ನಮ್ಮ ಪೂರ್ವಿಕರು ಎಲ್ಲಿಯೂ ಇತ್ಯರ್ಥ ಆಗದೆ ಉಳಿರುವ ಬಹಳಷ್ಟು ವ್ಯಾಜ್ಯಗಳನ್ನು ಮಂದ್ ಮಾನಿಗಳಿಗೆ ತರುವ ಮೂಲಕ ಇಲ್ಲಿ ಇತ್ಯರ್ಥ ಮಾಡಿಕೊಳ್ಳುತ್ತಿದ್ದರು, ಕೋರ್ಟ್ ಕಛೇರಿಗೆ ವ್ಯಾಜ್ಯಗಳು ಹೋಗುತ್ತಿರಲಿಲ್ಲ, ಈ ಮಂದ್ಗಳಿಗೆ ಅಷ್ಟೊಂದು ಹಿರಿಮೆ ಇದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರು ನಾಡಿನ ತಕ್ಕಮುಖ್ಯಸ್ಥ ಹಾಗೂ ಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ, ಕೈಮುಡಿಕೆ ಮಂದ್ ಎನ್ನುವುದು ಕೊಡಗಿನಲ್ಲಿ ಪ್ರಸಿದ್ಧಿ ಪಡೆದಿರುವ ಮಂದ್ ಆಗಿದ್ದು, ಸೇನಾ ಮಹಾದಂಡನಾಯಕನಾಗಿದ್ದ ಫೀಲ್ಡ್ ಮಾರ್ಷಲ್ ಕೊಡಂದೇರ ಕಾರ್ಯಪ್ಪ ಅವರು ಕೋಲು ಹೊಡೆದ ಖ್ಯಾತಿಯನ್ನು ಹೊಂದಿದೆ ಎಂದರು.
ನಂತರ ಮೂರು ನಾಡಿನವರು ಒಂದು ಸುತ್ತಿನ ಸಾಮೂಹಿಕ ಪುತ್ತರಿ ಕೋಲಾಟ್ ನಡೆಸಿ ಸಾರ್ವಜನಿಕವಾಗಿ ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಧ್ಯಾಹ್ನ ಸಹಭೋಜನ ವ್ಯವಸ್ಥೆಯೊಂದಿಗೆ ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ ಮಂದ್ನಲ್ಲಿ ಕೊಡವ ಶ್ರೀಮಂತ ಸಂಸ್ಕೃತಿಯ ಅನಾವರಣವಾಯಿತು. ಜಿಲ್ಲೆಯ ವಿವಿಧ ಶಾಲಾಕಾಲೇಜುಗಳು ಸೇರಿದಂತೆ ವಿವಿಧ ಮಂದ್ ಹಾಗೂ ಸಂಘಸಂಸ್ಥೆಗಳ ತಂಡಗಳು ಗಮನ ಸೆಳೆಯಿತು ಹಾಗೂ ಬಹುಮಾನಗಳನ್ನು ಪಡೆದರು.