ಪುತ್ತೂರು: ನಾಳೆ ಕಾಳುಮೆಣಸು, ಕಾಫಿ ಬೆಳೆ ಮಾಹಿತಿ ಶಿಬಿರ, ಸಮಾವೇಶ

KannadaprabhaNewsNetwork |  
Published : Aug 09, 2025, 12:06 AM IST
32 | Kannada Prabha

ಸಾರಾಂಶ

ಕಾಳುಮೆಣಸು ಮತ್ತು ಕಾಫಿ ಬೆಳೆ ಬೆಳೆಯುವ ಬಗ್ಗೆ ಮಾಹಿತಿ ಶಿಬಿರ ಮತ್ತು ಸಮಾವೇಶವನ್ನು ಆ.೧೦ರಂದು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಸುಭದ್ರ ಸಭಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಕೊಳೆರೋಗ ಹಾಗೂ ಹವಾಮಾನ ವೈಪರೀತ್ಯದಿಂದ ವರ್ಷದಿಂದ ವರ್ಷಕ್ಕೆ ಇಳುವರಿ ಕಡಿಮೆಯಾಗುತ್ತಿರುವ ಅಡಿಕೆಗೆ ಉಪಬೆಳೆಯಾಗಿ ಕಾಳುಮೆಣಸು ಮತ್ತು ಕಾಫಿ ಬೆಳೆ ಬೆಳೆಯುವ ಬಗ್ಗೆ ಮಾಹಿತಿ ಶಿಬಿರ ಮತ್ತು ಸಮಾವೇಶವನ್ನು ಆ.೧೦ರಂದು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಸುಭದ್ರ ಸಭಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದ.ಕ. ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಒಕ್ಕೂಟದಿಂದ ಈ ಶಿಬಿರ ಹಾಗೂ ಸಮಾವೇಶ ನಡೆಯಲಿದೆ. ಅಡಕೆಗೆ ಬಾಧಿಸುತ್ತಿರುವ ಹಳದಿ ರೋಗ, ಎಲೆಚುಕ್ಕಿ ರೋಗ, ಎಳೆ ನಳ್ಳಿ ಉದುರುವಿಕೆಯಂತಹ ಸಮಸ್ಯೆಗಳು, ಅಡಿಕೆ ಕೊಯ್ಯಲು, ಔಷಧ ಸಿಂಪಡಣೆಗೆ ನುರಿತ ಕಾರ್ಮಿಕರ ಅಭಾವಕ್ಕೆ ಪರ್ಯಾಯವಾಗಿ ಕಾಳುಮೆಣಸು, ಕಾಫಿ ಬೆಳೆಗಳತ್ತ ರೈತವರ್ಗ ದೃಷ್ಟಿ ಹಾಯಿಸಿದೆ. ಬೆಳಿಗ್ಗೆ ಮಾಹಿತಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಕಾಳುಮೆಣಸು ಬೆಳೆಗಾರರ ಸಂಘದ ವಿಜ್ಞಾನಿ ಡಾ. ವೇಣುಗೋಪಾಲ್ ಸಮಗ್ರ ಕಾಳುಮೆಣಸು ಬೆಳೆಯುವ ಮಾಹಿತಿ ಮತ್ತು ಸಂರಕ್ಷಣಾ ವಿಧಾನದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ೭ ಬಿನ್ ಟೀಮ್‌ನ ಮುಖ್ಯಸ್ಥ ಡಾ. ಎಚ್ ಎಸ್ ಧರ್ಮರಾಜ್ ಸಕಲೇಶಪುರ ಅವರು ಕಾಫಿ ಮತ್ತು ಕಾಳುಮೆಣಸಿಗೆ ನೀಡುವ ಪೋಷಕಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಇಂದೋರ್‌ನ ಶ್ರೀಸದ್ದಿ ಅಗ್ರಿ ಕಂಪನಿಯ ಮುಖ್ಯಸ್ಥ ಪೆರುವೊಡಿ ನಾರಾಯಣ ಭಟ್ ಅಡಕೆ ಬೆಳೆಯುವ ವಿಧಾನ ಮತ್ತು ಪೋಷಕಾಂಶಗಳ ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದರು.ಅಡಕೆ ಮತ್ತು ಕಾಳುಮೆಣಸು ಕೃಷಿಕ ಸುರೇಶ್ ಬಲ್ನಾಡು, ಅರವಿಂದ ಮುಳ್ಳಂಕೊಚ್ಚಿ ಆಲಂಕಾರು, ಪ್ರಗತಿಪರ ಕಾಳುಮೆಣಸು ಕೃಷಿಕ ಡಾ. ವೇಣುಗೋಪಾಲ್ ಕಳೆಯತೋಡಿ, ಧೂಪದ ಮರದಲ್ಲಿ ಕಾಳುಮೆಣಸು ಕೃಷಿ ಮಾಡಿದ ಸಾಧಕ ಅನಂತರಾಮಕೃಷ್ಣ ಪಳ್ಳತ್ತಡ್ಕ, ಅಡಿಕೆಮರ ಏರುವ ಯಂತ್ರವನ್ನು ಅವಿಷ್ಕರಿಸಿದ ಕೋಮಲೆ ಗಣಪತಿ ಭಟ್, ಕಾಳುಮೆಣಸು ಕಸಿ ಕಟ್ಟಿ ಬೆಳೆಸಿದ ಅನುಭವಿ ಸ್ವಪ್ನಾ ಸೇಡಿಯಾಪು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಕಾಳುಮೆಣಸು ಮತ್ತು ಕಾಫಿ ಬೆಳೆಯಲ್ಲಿ ಪ್ರಗತಿಪರ ಕೃಷಿಕರಾಗಿರುವ ಅಜಿತ್ ಪ್ರಸಾದ್ ರೈ ದಂಪತಿ ಮತ್ತು ಪೆರುವೋಡಿ ನಾರಾಯಣ ಭಟ್ ಅವರನ್ನು ಸನ್ಮಾನಿಸಲಾಗುವುದು ಎಂದ ಅವರು ಕಾರ್ಯಾಗಾರದಲ್ಲಿ ಹಲವು ಹಣ್ಣುಗಳ ಗಿಡಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಎಸ್.ಆರ್.ಕೆ.ಲ್ಯಾಡರ್ ಅವರಿಂದ ಕಾಳುಮೆಣಸು ಪ್ರತ್ಯೇಕಿಸುವ ಯಂತ್ರ ಮತ್ತು ಆಕರ್ಷನ್ ಇಂಡಸ್ಟ್ರೀಸ್‌ ಅವರಿಂದ ಕಾಳುಮೆಣಸು ಬೆಳೆಯುವ ಸಿಮೆಂಟ್ ಕಂಬಗಳ ಮಳಿಗೆಗಳು ಸಹಿತ ಹಲವು ಉಪಕರಣಗಳ ಹಾಗೂ ವಿದೇಶಿ ತಳಿಗಳು ಸೇರಿದಂತೆ ೧೫೦ಕ್ಕೂ ಮಿಕ್ಕಿ ವಿವಿಧ ತಳಿಯ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ತಿಳಿಸಿದರು. ಸುದ್ಧಿಗೋಷ್ಠಿಯಲ್ಲಿ ಒಕ್ಕೂಟದ ಸದಸ್ಯರಾದ ನ್ಯಾಯವಾದಿ ಗೋವಿಂದ ಭಟ್ ಬಾಯಾಡಿ, ಅಜಿತ್ ಪ್ರಸಾದ್ ರೈ, ಸೇಡಿಯಾಪು ಜನಾರ್ದನ ಭಟ್, ಕಾರ್ಯದರ್ಶಿ ಅಭಿಜಿತ್ ಬಿ ಪುತ್ತೂರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ