ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಅರ್ಹ ಶಿಕ್ಷಕರು ಬೋಧನೆ ಮಾಡುತ್ತಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಲಿಯಾಗದೇ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಸ್.ವಿ.ಕುಸುಮಲತಾ ಮನವಿ ಮಾಡಿದರು.
ತಾಲೂಕಿನಲ್ಲಿಯೇ ಪ್ರಥಮ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಕೋಡಂಬಹಳ್ಳಿ ಸರ್ಕಾರಿ ಶಾಲೆಯು ಯಾವುದೇ ಖಾಸಗಿ ಶಾಲೆಗಳಿಗಿಂತ ಮಿಗಿಲಾಗಿ ಶಾಲಾ ವೈಭವ ಕಾರ್ಯಕ್ರಮ ರೂಪಿಸಿದೆ. ಮಕ್ಕಳಿಗಾಗಿ ಸಾಂಸ್ಕೃತಿಕ, ಆಟೋಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದೆ ಎಂದು ಶ್ಲಾಘಿಸಿದರು.
ಕೋಡಂಬಹಳ್ಳಿ ಗ್ರಾಪಂ ಪಿಡಿಒ ಭಾಗ್ಯಲಕ್ಷ್ಮಮ್ಮ ಮಾತನಾಡಿ, ಗ್ರಾಪಂ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲ ಸವಲತ್ತುಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಬದ್ಧವಾಗಿದೆ ಎಂದು ಭರವಸೆ ನೀಡಿದರು.ಎಸ್ಡಿಎಂಸಿ ಅಧ್ಯಕ್ಷ ಮುತ್ತುರಾಜು ಮಾತನಾಡಿ, ಕೋಡಂಬಹಳ್ಳಿ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದಿದ ಶಾಲೆಯನ್ನಾಗಿ ರೂಪುಗೊಳಿಸುವಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕ ವರ್ಗದವರು, ಪೋಷಕರು ಹಾಗೂ ಕೋಡಂಬಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಶಿಕ್ಷಣ ಪ್ರೇಮಿಗಳು ಹಾಗೂ ದಾನಿಗಳ ಸಹಕಾರದೊಂದಿಗೆ ತಾಲ್ಲೂಕಿನಲ್ಲಿಯೇ ಒಂದು ಮಾದರಿ ಶಾಲೆ ಮಾಡಲು ಪ್ರಾಮಾಣಿಕವಾಗಿ ಶ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೋಡಂಬಹಳ್ಳಿ ಗ್ರಾಪಂ ಸದಸ್ಯರಾದ ಸತೀಶ್, ಚೌಡಯ್ಯ, ಶಿಲ್ಪಾ ಸಿದ್ದರಾಜು, ಇಸಿಒಗಳಾದ ಚಕ್ಕೆರೆ ಯೋಗೇಶ್, ಗಂಗಾಧರ ಮೂರ್ತಿ, ಬಿಆರ್ಪಿ ಪುಷ್ಪಲತಾ, ಸಿಆರ್ಪಿ ಮಹದೇವಯ್ಯ, ಎಸ್ಡಿಎಂಸಿ ಸಮಿತಿ ಸದಸ್ಯರು, ಕೋಡಂಬಹಳ್ಳಿ ನಾಗರಾಜು, ಶಾಲೆಯ ಮುಖ್ಯ ಶಿಕ್ಷಕ ನಾಗರಾಜು ಇತರರು ಉಪಸ್ಥಿತರಿದ್ದರು. ಪೊಟೋ೩ಸಿಪಿಟಿ೨: ಚನ್ನಪಟ್ಟಣ ತಾಲೂಕಿನ ಕೋಡಂಬಹಳ್ಳಿ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವೈಭವ- ೨೦೨೪ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.