ಕನ್ನಡಪ್ರಭವಾರ್ತೆ ನಾಪೋಕ್ಲು
ಕಾರ್ಯಕ್ರಮ ಉದ್ಘಾಟಿಸಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಮಚಂದ್ರ ಕಾಮತ್ ಮಾತನಾಡಿ, ವಿಶೇಷ ಚೇತನರಿಗೆ ಗುಣಮಟ್ಟದ ಹಾಗೂ ಸಮಾನ ಆರೋಗ್ಯ ಸೇವೆಗಳನ್ನು ತಲುಪಿಸುವ ಅಗತ್ಯವನ್ನು ಒತ್ತಿ ಹೇಳಿದರು. ಸಮಾಜದ ಎಲ್ಲ ವರ್ಗಗಳ ಸಹಕಾರದಿಂದ ವಿಶೇಷ ಚೇತನರ ಆರೋಗ್ಯ, ಶಿಕ್ಷಣ ಮತ್ತು ಪುನರ್ವಸತಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ. ವೈದ್ಯಕೀಯ ಇಲಾಖೆ ವಿಶೇಷ ಕಾಳಜಿ ವಹಿಸಿದ್ದು ಬೇರೆ ಬೇರೆ ಆರೋಗ್ಯ ಕೇಂದ್ರಗಳಲ್ಲಿ ಇಂತಹ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಲಾಗಿದೆ ಎಂದರು.
ಪುನಶ್ಚೇತನ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಬಾಳೆಯಡ ದಿವ್ಯಾ ಭಾಗವಹಿಸಿ ಮಾತನಾಡಿ 15 ವರ್ಷ ಮೇಲ್ಪಟ್ಟ ವಿಕಲಚೇತನ ಮಕ್ಕಳ ಏಳಿಗೆಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ವಿಶೇಷ ಚೇತನ ಮಕ್ಕಳ ಬಗ್ಗೆವಿಶೇಷ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರಂಭಿಸಿರುವ ಆರೋಗ್ಯ ಸೇವೆ ಯೋಜನೆ ಇದಾಗಿದೆ ಎಂದರು. ಸರ್ಕಾರದಿಂದ ವಿಶೇಷ ಚೇತನರಿಗಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಪುನರ್ವಸತಿ ಸೇವೆಗಳ ಕುರಿತು ಮಾಹಿತಿ ನೀಡಿ, ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ವಿಶೇಷ ಚೇತನರಿಗೆ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ, ಆರೋಗ್ಯ ಶಿಕ್ಷಣ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಬಿ.ಆರ್, ನಾಪೋಕ್ಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಬಿ.ಬಿ ಸುಬ್ಬಯ್ಯ, ಓಂಪ್ರಕಾಶ್ ಪಾಲ್ಗೊಂಡಿದ್ದರು.