ಹೃದಯ ಸಂಬಂಧಿ ಕಾಯಿಲೆಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಚಿಕಿತ್ಸೆ

KannadaprabhaNewsNetwork |  
Published : Jul 13, 2026, 01:00 AM IST
ಹಾವೇರಿಯ ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ನೂತನ ಕ್ಯಾತ್ ಲ್ಯಾಬ್‌ ಉದ್ಘಾಟನೆಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಗಣ್ಯರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಹೃದಯ ಸಂಬಂಧಿ ಕಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಕ್ಯಾತ್‌ಲ್ಯಾಬ್ ಸೌಲಭ್ಯ ಕಲ್ಪಿಸಲಾಗಿದೆ. ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಆಂಜಿಯೋಗ್ರಾಮ್ ಹಾಗೂ ಆಂಜಿಯೋಪ್ಲಾಸ್ಟಿ ಸೇರಿದಂತೆ ಅತ್ಯಾಧುನಿಕ ಚಿಕಿತ್ಸೆ ಸ್ಥಳೀಯವಾಗಿಯೇ ದೊರೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ, ಸರ್ಜಿ ಗ್ರೂಪ್ಸ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ ತಿಳಿಸಿದರು.

ಹಾವೇರಿ: ಹೃದಯ ಸಂಬಂಧಿ ಕಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಕ್ಯಾತ್‌ಲ್ಯಾಬ್ ಸೌಲಭ್ಯ ಕಲ್ಪಿಸಲಾಗಿದೆ. ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಆಂಜಿಯೋಗ್ರಾಮ್ ಹಾಗೂ ಆಂಜಿಯೋಪ್ಲಾಸ್ಟಿ ಸೇರಿದಂತೆ ಅತ್ಯಾಧುನಿಕ ಚಿಕಿತ್ಸೆ ಸ್ಥಳೀಯವಾಗಿಯೇ ದೊರೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ, ಸರ್ಜಿ ಗ್ರೂಪ್ಸ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ ತಿಳಿಸಿದರು.

ಇಲ್ಲಿಯ ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ಭಾನುವಾರ ಕಾರ್ಡಿಯಾಕ್ ಕ್ಯಾತ್ ಲ್ಯಾಬ್‌ನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯ ಆರೋಗ್ಯ ಸೇವೆಗಳು ಇನ್ನೂ ಹಲವು ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕಿದೆ. ಸಾಮಾನ್ಯ ವೈದ್ಯಕೀಯ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ, ಅಸ್ಥಿರೋಗ ಸೇರಿದಂತೆ ಸೂಪರ್ ಸ್ಪೆಷಾಲಿಟಿ ವಿಭಾಗಗಳಾದ ನೆಫ್ರಾಲಜಿ, ಹೃದಯ ಚಿಕಿತ್ಸೆ, ನ್ಯೂರೋಸರ್ಜರಿ ಮುಂತಾದ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯಗಳ ಕೊರತೆ ಜಿಲ್ಲೆಯಲ್ಲಿ ಕಂಡುಬರುತ್ತಿದೆ. ಮೂರು ತಿಂಗಳ ಹಿಂದೆ ಸೇವೆಗೆ ಸೇರ್ಪಡೆಯಾದ ಡಾ. ದೀಪಕ್ ಈಗಾಗಲೇ ಅನೇಕ ಹೃದಯ ರೋಗಿಗಳ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 42 ಹೃದಯ ರೋಗಿಗಳನ್ನು ಶಿವಮೊಗ್ಗಕ್ಕೆ ಸುರಕ್ಷಿತವಾಗಿ ಕರೆದೊಯ್ದು ಸ್ಟೆಂಟ್ ಅಳವಡಿಕೆ ಸೇರಿದಂತೆ ಅಗತ್ಯ ಚಿಕಿತ್ಸೆ ಕೊಡಿಸಿ ಜೀವ ಉಳಿಸಿರುವುದು ಗಮನಾರ್ಹ ಸಾಧನೆಯಾಗಿದೆ ಎಂದರು.

ಹೃದಯಾಘಾತದ ಸಂದರ್ಭದಲ್ಲಿ ಸಾಧ್ಯವಾದಷ್ಟು ಬೇಗ ಚಿಕಿತ್ಸೆ ನೀಡುವುದು ಅತ್ಯಂತ ಮುಖ್ಯ. ಹೃದಯದ ಸ್ನಾಯುಗಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡರೆ ಅದರ ಪಂಪಿಂಗ್ ಸಾಮರ್ಥ್ಯ ಕುಂಠಿತವಾಗುತ್ತದೆ. ಆದ್ದರಿಂದ ಗೋಲ್ಡನ್ ಅವರ್‌ನಲ್ಲೇ ಚಿಕಿತ್ಸೆ ದೊರೆತರೆ ರೋಗಿಯ ಜೀವ ಉಳಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಎಲ್ಲ ಮೆಡಿಕಲ್‌ ಕಾಲೇಜುಗಳಲ್ಲಿ ಕ್ಯಾತ್ ಲ್ಯಾಬ್‌ ಆರಂಭಿಸುವಂತೆ ಸದನದಲ್ಲಿ ಒತ್ತಾಯಿಸಿದ್ದೇನೆ. ಇದು ಎಲ್ಲ ಜಿಲ್ಲೆಗಳಲ್ಲಿ ಆಗಬೇಕಿದೆ ಎಂದರು.

ಹೃದಯ ತಜ್ಞ ಡಾ. ದೀಪಕ್ ಮಾತನಾಡಿ, ಚಿಕಿತ್ಸೆಗಾಗಿ ದೂರದ ಊರುಗಳಿಗೆ ಪ್ರಯಾಣಿಸುವಾಗಲೇ ಜಿಲ್ಲೆಯ ಅನೇಕರು ಜೀವ ಕಳೆದುಕೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ 114 ಹೃದಯ ರೋಗಿಗಳನ್ನು ಪರೀಕ್ಷಿಸಿ, ಎಂಜಿಯೋಗ್ರಾಮ್‌ಗೆ ಗುರುತಿಸಿದೆ. ಕ್ಯಾಥ್ ಲ್ಯಾಬ್ ನಿರ್ಮಾಣ ಹಂತದಲ್ಲಿದ್ದ ಕಾರಣ ಸ್ವತಃ ಶಿವಮೊಗ್ಗಕ್ಕೆ ತೆರಳಿ 45 ರೋಗಿಗಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದ್ದು, ಅವರಲ್ಲಿ 42 ಮಂದಿಗೆ ಯಶಸ್ವಿಯಾಗಿ ಸ್ಟೆಂಟ್ ಅಳವಡಿಸಲಾಗಿದೆ. ಇದೇ ಅವಧಿಯಲ್ಲಿ ಬೇರೆ ಆಸ್ಪತ್ರೆಗಳಿಗೆ ತೆರಳುವ ವೇಳೆ ಐವರು ರೋಗಿಗಳು ದಾರಿಮಧ್ಯೆ ಮೃತಪಟ್ಟಿರುವುದು ನೋವು ತಂದಿದೆ. ಆಸ್ಪತ್ರೆಯ ವೈದ್ಯರು, ತಜ್ಞರು ಮತ್ತು ಸಿಬ್ಬಂದಿ ಎಲ್ಲರೂ ಒಗ್ಗಟ್ಟಿನಿಂದ ಜನಸೇವೆಗೆ ಬದ್ಧರಾಗಿದ್ದು, ಹಾವೇರಿ ಜಿಲ್ಲೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.

ಉದ್ಘಾಟನೆ ವೇಳೆ ಕಲ್ಮಠದ ಗುರುಸಿದ್ದ ಸ್ವಾಮೀಜಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಮಾಜಿ ಶಾಸಕ ನೆಹರು ಓಲೇಕಾರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೋಟ್ರೇಶಪ್ಪ ಬಸೇಗಣ್ಣಿ, ಜಗದೀಶ ಬಸೇಗಣ್ಣಿ, ಪರಿಸರವಾದಿ ಮಾಧುರಿ ದೇವಧರ, ಡಾ. ಸಂಜಯ ದೇವಧರ, ಡಾ. ರಾಘವಾಂಕ ಎಚ್., ಡಾ. ದೀಪಕ್‌ಕುಮಾರ, ಸಚಿನ್, ವಿಕಾಸ್, ರಾಕೇಶ, ನಿರಂಜನ್, ನವೀನ್, ಪ್ರವೀಣಕುಮಾರ ವಿ.ಸಿ., ಗುಡ್ಡಪ್ಪ ಅಂಚಿ ಸೇರಿದಂತೆ ಗಣ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಇದ್ದರು.ಹಾವೇರಿ ಜಿಲ್ಲೆಯ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ನಮ್ಮ ತಂಡದ ಮುಖ್ಯ ಧ್ಯೇಯವಾಗಿದೆ. ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವ ಉದ್ದೇಶದಿಂದ ಶೀಘ್ರದಲ್ಲೇ ನೆಫ್ರಾಲಜಿ ವಿಭಾಗ, ಡಯಾಲಿಸಿಸ್ ಕೇಂದ್ರ, ಸಿಟಿ ಸ್ಕ್ಯಾನ್ ಹಾಗೂ ರಕ್ತ ಸಂಗ್ರಹಣಾ ಘಟಕ (ಬ್ಲಡ್ ಸ್ಟೋರೇಜ್ ಯುನಿಟ್) ಆರಂಭಿಸಲಾಗುವುದು ಎಂದು ಸರ್ಜಿ ರೇಣುಕಾ ದೇವಧರ ಆಸ್ಪತ್ರೆ ಡಾ. ಮಧು ಕೆ.ಆರ್., ವೈದ್ಯಕೀಯ ನಿರ್ದೇಶಕ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರ್ಯಾಯ ಬೆಳೆಯಿಂದ ಮಣ್ಣಿನ ಫಲವತ್ತತೆ ಹೆಚ್ಚಳ
ಗದಗ ಜಿಲ್ಲೆಯ 898 ಮಕ್ಕಳಲ್ಲಿ ಅಪೌಷ್ಟಿಕತೆ!