ಕನ್ನಡಪ್ರಭ ವಾರ್ತೆ ಗುಬ್ಬಿತಂಬಾಕು ಉತ್ಪನ್ನಗಳ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ತಿಳಿಸಿದರು.ಪಟ್ಟಣದಲ್ಲಿ ಏರ್ಪಡಿಸಿದ್ದ, ತಂಬಾಕು ನಿಯಂತ್ರಣ ಅರಿವು ಜಾಥಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು. ತಂಬಾಕು ಸೇವನೆಯಿಂದಾಗಿ ಮಾರಣಾಂತಕ ಕಾಯಿಲೆಗಳಿಗೆ ತುತ್ತಾಗುವ ಜೊತೆಗೆ ಯಾವಾಗ ಬೇಕಾದರೂ ಪ್ರಾಣಕ್ಕೆ ಕುತ್ತು ಬರಬಹುದು. ಸಂಸಾರಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.
ವಕೀಲರ ಸಂಘದ ಉಪಾಧ್ಯಕ್ಷ ಶಿವಯೋಗಿಶ್ ಮಾತನಾಡಿ, ತಂಬಾಕು ಉತ್ಪನ್ನ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಕಾಯ್ದೆಗಳನ್ನು ಜಾರಿಗೊಳಿಸಿದೆ. ಅದರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಡ್ಡಾಯವಾಗಿದೆ. ಕಾನೂನು ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ಪನ್ನಗಳನ್ನು ಉಪಯೋಗಿಸಲು ಉತ್ತೇಜನ ನೀಡುವುದು, ಅಪ್ರಾಪ್ತ ವಯಸ್ಕರಿಗೆ ಮಾರಾಟ ಮಾಡುವುದು ,ಕಾನೂನು ಬಾಹಿರವಾಗಿದೆ. ಶಾಲಾ ಕಾಲೇಜುಗಳ ಆವರಣಗಳಲ್ಲಿ ತಂಬಾಕು ನಿಷೇಧ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವ ಮೂಲಕ ಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಬಿಂಧು ಮಾಧವ್ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆಯಿಂದಾಗಿ ನರ ದೌರ್ಬಲ್ಯ, ದಂತಕ್ಷಯ, ಶ್ವಾಸಕೋಶದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ರಕ್ತ ಹೀನತೆ, ಅಲ್ಸರ್, ಗ್ಯಾಂಗ್ರಿನ್, ಕ್ಯಾನ್ಸ್ರ್ ನಂತಹ ಮಾರಕ ಕಾಯಿಲೆಗಳಿಗೆ ಸುಲಭವಾಗಿ ತುತ್ತಾಗುವುದರಿಂದ ಜನರು ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಲ್ಲಿಸಬೇಕಾಗಿದೆ ಎಂದರು.ತಂಬಾಕು ಸೇವನೆ ತ್ಯಜಿಸಲು ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಂಬಾಕು ವರ್ಜನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಪಡೆದುಕೊಳ್ಳುವತ್ತ ಗಮನಹರಿಸಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕಾರಿಯಾಗಿ ನಿಲ್ಲೋಣ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ತಂಬಾಕು ಉತ್ಪನ್ನಗಳ ಅಪಾಯದ ಬಗ್ಗೆ ಎಚ್ಚರಿಸುವ ಬಿತ್ತಿ ಪತ್ರಗಳನ್ನು ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ದಿವಾಕರ್ ಪಿಎಸ್ಐ ಬಾಬು ಕಿಲಾರಿ, ವೈದ್ಯರು, ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಭಾಗವಹಿಸಿದ್ದರು .