ತಂಬಾಕು ತ್ಯಜಿಸಿ ಉತ್ತಮ ಸಮಾಜ ನಿರ್ಮಿಸೋಣ: ರಮೇಶಬಾಬು

KannadaprabhaNewsNetwork |  
Published : Jun 07, 2024, 12:32 AM IST
1ಎಚ್‌ಪಿಟಿ5- ಹೊಸಪೇಟೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ತಂಬಾಕು ಮುಕ್ತ ದೇಶವನ್ನಾಗಿ ಮಾಡುವುದು, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಹೊಸಪೇಟೆ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಭಾರತಿಯ ದಂತ ವೈದ್ಯಕೀಯ ಸಂಘ ಹೊಸಪೇಟೆ ಮತ್ತು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿ ಜಾಥಾಕ್ಕೆ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಹೊಸಪೇಟೆ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಮೇಶ್‌ಬಾಬು ಬಿ.ಎನ್‌. ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಭಾರತವನ್ನು ತಂಬಾಕು ಮುಕ್ತ ದೇಶವನ್ನಾಗಿ ಮಾಡುವುದು, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸಿ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ಅದರಂತೆ ಮಕ್ಕಳನ್ನು ತಂಬಾಕಿನಿಂದ ದೂರವಿಡುವುದರಿಂದ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಬಹುದಾಗಿದೆ. ತಂಬಾಕು ಉತ್ಪಾದನೆಯಿಂದ ಅಂತ್ಯದವರೆಗೂ ಪರಿಸರಕ್ಕೆ ಹಾಗೂ ಮನುಷ್ಯರ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತಿದೆ. ಹಾಗಾಗಿ ಉತ್ತಮ ಸಮಾಜ, ಪರಿಸರ ಹಾಗೂ ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಿ ಎಂದು ಹೇಳಿದರು.

ಜಿಪಂ ಸಿಇಒ ಸದಾಶಿವ ಪ್ರಭು ಮಾತನಾಡಿ, ತಂಬಾಕು ಈ ಸಮಾಜಕ್ಕೆ ಒಂದು ಪಿಡುಗಾಗಿ ಪರಿಣಮಿಸಿದೆ. ವಿಶ್ವಸಂಸ್ಥೆಯು ಪತ್ರಿ ವರ್ಷ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ತಂಬಾಕು ಮಕ್ಕಳಿಗೆ ಆಕರ್ಷಣೆಯಾಗದಂತೆ ತಡೆದು ಅದರ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ನಾಯ್ಕ ಮಾತನಾಡಿ, ಇತ್ತೀಚೆಗೆ 13ರಿಂದ 18 ವರ್ಷದ ಮಕ್ಕಳು ತಂಬಾಕಿನ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ತಂಬಾಕು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ತಂಬಾಕು ನಿಯಂತ್ರಣ ಕೋಶದಿಂದ ಇಲ್ಲಿಯವರೆಗೂ ನಮ್ಮ ಜಿಲ್ಲೆಯಲ್ಲಿ 168 ಪ್ರಕರಣಗಳನ್ನು ದಾಖಲಿಸಿ ₹33,600 ದಂಡ ವಿಧಿಸಲಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಶೋಕ್ ಎಚ್.ಆರ್., ಎರಡನೇ ಸಿವಿಲ್ ನ್ಯಾಯಾಧೀಶ ಸಂಜೀವಕುಮಾರ ಜಿ., ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ.ಷಣ್ಮುಖ ನಾಯ್ಕ.ಬಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಜಿಲ್ಲಾ ರೋಗವಾಹಕ ಆಶಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿನಯ್, ಜಿಲ್ಲಾ ಕ್ಷಯರೊಗ ನಿರ್ಮೂಲಣಾಧಿಕಾರಿ ಡಾ.ಜಗದೀಶ್ ಪಾಟ್ನಿ, ಜಿಲ್ಲಾ ಕುಷ್ಠರೋಗ ನಿರ್ಮೂಲಾಣಾಧಿಕಾರಿ ಡಾ.ರಾಧಿಕಾ, ತಾಲೂಕು ಆರೋಗ್ಯಾಧಿಕಾರಿ ಡಾ.ಭಾಸ್ಕರ್, ಸಮಾಜ ಕಾರ್ಯಕರ್ತ ಭೋಜರಾಜ ಎಸ್, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಪದಾಧಿಕಾರಿಗಳು, ಪೊಲೀಸರು, ಮಲ್ಲಿಗೆ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಸಪ್ತಗಿರಿ ಇನ್ಸಿಟ್ಯೂಟ್‌ ಆಫ್ ನರ್ಸಿಂಗ್ ಸೈನ್ಸ್, ಹೀಮ ಇನ್‌ಸ್ಟಿಟ್ಯೂಟ್‌ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ