ವಿಕಸಿತ ಭಾರತಕ್ಕೆ ಪೂರಕ ಬಜೆಟ್‌: ಅಶೋಕ್‌

KannadaprabhaNewsNetwork |  
Published : Feb 03, 2024, 01:48 AM IST
ಅಶೋಕ್‌ | Kannada Prabha

ಸಾರಾಂಶ

ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ಬಜೆಟ್‌ ಸಹಕಾರಿಯಾಗಿದೆ ಎಂದು ವಿಪಕ್ಷ ನಾಯಕ ಆರ್‌ ಆಶೋಕ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಸರ್ಕಾರದ ಈ ಬಾರಿಯ ಮಧ್ಯಂತರ ಬಜೆಟ್ ಬಡವರು, ಯುವಕರು, ಮಹಿಳೆಯರು ಹಾಗೂ ರೈತರು ಈ ನಾಲ್ಕು ವರ್ಗಗಳು ದೇಶದ ಆಧಾರ ಸ್ತಂಭಗಳು ಎಂಬ ಪರಿಕಲ್ಪನೆಯೊಂದಿಗೆ ರೂಪಿಸಲಾಗಿದೆ. ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಈ ಬಜೆಟ್ ವೇದಿಕೆ ಕಲ್ಪಿಸಲಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಉತ್ತಮವಾಗಿದೆ. ಭಾರತದ ತಂತ್ರಜ್ಞಾನ ಹಾಗೂ ಆರ್ಥಿಕತೆಯ ಏಳ್ಗೆಗೆ ಇದು ಸಹಕಾರಿಯಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ''''ಸಬ್ ಕಾ ಸಾತ್, ಸಬ್ ಕಾ ವಿಕಾಸ್'''' ಹಾಗೂ 2047ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಪೂರಕ ಬಜೆಟ್ ಮಂಡನೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಗಿಮಿಕ್‌ ಇಲ್ಲ:ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಬಜೆಟ್ ಜನಪ್ರಿಯ ಯೋಜನೆಗಳು, ಕೊಡುಗೆಗಳಿಂದ ಕೂಡಿರುತ್ತದೆ ಎಂಬ ಲೆಕ್ಕಾಚಾರಕ್ಕೆ ವ್ಯತಿರಿಕ್ತವಾಗಿ ಈ ಬಜೆಟ್ ಅಂತಹ ಯಾವುದೇ ಘೋಷಣೆಗಳನ್ನು ಮಾಡಿಲ್ಲ.ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಬಜೆಟ್ ಅನ್ನು ಮಂಡಿಸಿಲ್ಲ. ಸರ್ವರ ಏಳ್ಗೆಗೆ, ಬಡವರ ಏಳ್ಗೆಗೆ ಮಂಡನೆಯಾಗಿರುವ ಬಜೆಟ್ ಇದಾಗಿದೆ. ಏಳು ಲಕ್ಷ ರು.ವರೆಗೂ ಆದಾಯ ತೆರಿಗೆ ಇಲ್ಲ. ಒಂದು ಕೋಟಿ ಮನೆಗಳಲ್ಲಿ ಸೌರ ಶಕ್ತಿ ಬಳಕೆಗೆ ಒತ್ತು ನೀಡಲಾಗಿದ್ದು, ಆ ಕುಟುಂಬಗಳಿಗೆ ಶಾಶ್ವತವಾಗಿ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ದೊರೆಯಲಿದೆ. ಇದು ಮೋದಿ ಅವರ ಗ್ಯಾರೆಂಟಿಗೆ ಒಳ್ಳೆ ಉದಾಹರಣೆ. ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಿಸಲಾಗಿದೆ. ಹೆಣ್ಣು ಮಕ್ಕಳಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 9-15 ವರ್ಷದ ಹೆಣ್ಣುಮಕ್ಕಳಿಗೆ ಉಚಿತ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.ಮೂಲಸೌಕರ್ಯಕ್ಕೆ ಆದ್ಯತೆ:ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದ್ದು ನಾಲ್ಕು ವಿಶೇಷ ರೈಲ್ವೆ ಕಾರಿಡಾರ್, ಏರ್ಪೋರ್ಟ್ ಆಧುನೀಕರಣ, ಸಣ್ಣ ನಗರಗಳಿಗೆ ಮೆಟ್ರೋ ಸೇವೆ, 40 ಸಾವಿರ ರೈಲು ಬೋಗಿಗಳ ಆಧುನೀಕರಣ, ಹೊಸ ವಂದೇ ಭಾರತ್, ನಮೋ ಭಾರತ್ ರೈಲುಗಳು ಸೇರಿದಂತೆ ಅನೇಕ ದೂರದೃಷ್ಟಿಯುಳ್ಳ ಯೋಜನೆಗಳನ್ನು ರೂಪಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಪ್ರಪಂಚದ ಗಮನ ಸೆಳೆಯಲು ಒತ್ತು ನೀಡಲಾಗಿದೆ. ಚುನಾವಣೆಗಾಗಿ ಗಿಮಿಕ್ ಪಾಲಿಟಿಕ್ಸ್ ಮಾಡದೆ, ಮುಂದಿನ ಪೀಳಿಗೆಗೆ ಉಪಯುಕ್ತ ಆಗುವಂತ ಬಜೆಟ್ ಮಂಡನೆಯಾಗಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಬಿಡಿ ಪುಸ್ತಕ ಹಿಡಿ’ ಅಭಿಯಾನ
ಬಾಗಲಕೋಟೆ ಗಲಭೆಗೆ ಕೇಸರಿ ಪಡೆ ಗರಂ