ಆರ್.ಮಂಜುನಾಥ್ ಗೆ ಕೋಟೆ ನಾಡಿನ ಅಭಿಮಾನದ ಗೌರವ

KannadaprabhaNewsNetwork |  
Published : Apr 09, 2025, 12:30 AM IST
ಚಿತ್ರದುರ್ಗಮೂರನೇ ಪುಟದ ಲೀಡ್   | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನೂತನ ರಾಜ್ಯಾಧ್ಯಕ್ಷ ಆರ್.ಮಂಜುನಾಥ್‍ಗೆ ಮಂಗಳವಾರ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಅಭಿನಂದನೆ ಸಲ್ಲಿಸಲಾಯಿತು. ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಇದ್ದರು.

ಗುತ್ತಿಗೆದಾರರ ಸಂಘದಿಂದ ಹೃದಯಸ್ಪರ್ಶಿ ಅಭಿನಂದನೆ । ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾಗಿಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಚಿತ್ರದುರ್ಗದ ಆರ್.ಮಂಜುನಾಥ್‍ಗೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಮಂಗಳವಾರ ಕೋಟೆನಾಡಿನ ಗೌರವ ಸಲ್ಲಿಸಲಾಯಿತು.

ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ, ಕೆ.ಎಸ್.ನವೀನ್, ಮಾಜಿ ಸಚಿವ ಎಚ್.ಆಂಜನೇಯ ಸೇರಿ ಹಲವರು ಕಾರ್ಯಕ್ರಮ ಸಾಕ್ಷೀಕರಿಸಿ ಮಂಜುನಾಥ್ ಗೆ ಶುಭ ಹಾರೈಸಿದರು.

ಮಂಜುನಾಥ್ ಗೆ ಮೈಸೂರು ಪೇಟ, ಹಾರ ಹಾಕಿ ಸನ್ಮಾನಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ರಾಜ್ಯದಲ್ಲಿ ಗುತ್ತಿಗೆದಾರರಿಗೆ ಅನೇಕ ಸಮಸ್ಯೆಗಳಿದೆ. ಎಲ್ಲವನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಬಿಜೆಪಿ ಸರ್ಕಾರ ಅಧಿಕಾರ ಬಿಟ್ಟು ಹೋಗುವಾಗ 2 ಲಕ್ಷ ಕೋಟಿ ರು. ಬಿಲ್ ಬಾಕಿ ಉಳಿಸಿತ್ತು. ಇದರಿಂದಾಗಿ ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಂತ ಹಂತವಾಗಿ ಗುತ್ತಿಗೆದಾರರ ಬಿಲ್ ಪಾವತಿಸುತ್ತಿದೆ. ರಾಜ್ಯಾದ್ಯಂತ ಗುತ್ತಿಗೆದಾರರ ಹಿತ ಕಾಯುವತ್ತ ನೂತನ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಮನ ಕೊಡಬೇಕೆಂದು ಸುಧಾಕರ್ ಮನವಿ ಮಾಡಿದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಿತ್ರದುರ್ಗದ ಆರ್.ಮಂಜುನಾಥ್ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಆಯ್ಕೆಯಾಗಿರುವುದು ಒಂದು ಸಾಧನೆ. ಎಲ್ಲರಿಗೂ ಇಂತಹ ಅವಕಾಶ ಸಿಗುವುದಿಲ್ಲ. ಗುತ್ತಿಗೆದಾರರ ಸಮಸ್ಯೆಗಳಿಗೆ ಮೊದಲಿನಿಂದಲೂ ಸ್ಪಂದಿಸುತ್ತಿರುವ ಆರ್.ಮಂಜುನಾಥ್ ರಾಜ್ಯದಲ್ಲಿರುವ ಗುತ್ತಿಗೆದಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬಿಜೆಪಿ ನಿರ್ಧಾರಗಳು ಗುತ್ತಿಗೆದಾರರಿಗೆ ಪೂರಕವಾಗಿಲ್ಲ. ಅದು ಈಗ ನಮ್ಮ ಸರ್ಕಾರದ ಮೇಲೆ ಹೊರೆಯಾಗಿದೆ. ದೊಡ್ಡ ಗುತ್ತಿಗೆದಾರ, ಸಣ್ಣ ಗುತ್ತಿಗೆದಾರ ಎನ್ನುವ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಒಂದೊಂದು ರೀತಿಯ ತೊಂದರೆಗಳಿದೆ. ಸಾಮಾಜಿಕ ನ್ಯಾಯ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಕಾಮಗಾರಿಗಳಿಗೆ ಕೈಯಿಂದ ಬಂಡವಾಳ ಹೂಡಿ ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಗುತ್ತಿಗೆದಾರರು ನಡೆಸುವ ಕಾಮಗಾರಿಗಳು ಸರ್ಕಾರ ಮತ್ತು ಸಮಾಜಕ್ಕೆ ಉಪಯೋಗವಾಗುತ್ತದೆ. 2013 ರಿಂದ 18 ರವರೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಗುತ್ತಿಗೆದಾರರಿಗೆ ಸುವರ್ಣ ಯುಗವಾಗಿತ್ತು. ಗುತ್ತಿಗೆದಾರರಲ್ಲಿಯೂ ಪೈಪೋಟಿಯಿರುವುದರಿಂದ ಟೆಂಡರ್ ಕರೆಯುವ ಮುನ್ನವೇ ಗುತ್ತಿಗೆದಾರರು ಸಂಬಂಧಪಟ್ಟವರನ್ನು ಕಾಣುವಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನಿಗಧಿತ ಅವಧಿಯೊಳಗೆ ಗುತ್ತಿಗೆದಾರರು ಕಾಮಗಾರಿಗಳನ್ನು ಪೂರೈಸಬೇಕು. ಜಿಲ್ಲೆಯಲ್ಲಿ ಗುತ್ತಿಗೆದಾರರು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಹಾಕಿದ ಬಂಡವಾಳಕ್ಕೆ ಲಾಭವೂ ಸಿಗಲಿ. ಹಣವಿಲ್ಲದೆ ಟೆಂಡರ್ ಕರೆಯುವ ಕೆಟ್ಟ ಪದ್ದತಿಯನ್ನು ಗುತ್ತಿಗೆದಾರರು ಮೊದಲು ವಿರೋಧಿಸಬೇಕು ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಆರ್.ಮಂಜುನಾಥ್‍ಗೆ ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ಸಿಕ್ಕಿರುವುದು ಸಂತೋಷದ ಸಂಗತಿ. ರಾಜ್ಯಾದ್ಯಂತ ಗುತ್ತಿಗೆದಾರರ ಹಿತ ಕಾಪಾಡುವತ್ತ ಗಮನ ಕೊಡಬೇಕು. ದೊಡ್ಡ ಗುತ್ತಿಗೆದಾರರಿಗೆ ಸಮಸ್ಯೆಯಿಲ್ಲ. ಮಧ್ಯಮ ಮತ್ತು ಸಣ್ಣ ಗುತ್ತಿಗೆದಾರರು ತೊಂದರೆಯಲ್ಲಿದ್ದಾರೆ. ಅವರ ಪರವಾಗಿ ಗುತ್ತಿಗೆದಾರರ ಸಂಘದ ನೂತನ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ನಿಲ್ಲಬೇಕು. ಮಂತ್ರಿಗಳು, ಶಾಸಕರಿಂದ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿಲ್ಲ. ಅಧಿಕಾರಿಗಳಿಂದ ಕಿರುಕುಳ ಅನುಭವಿಸುವಂತಾದಾಗ ಧ್ವನಿ ಎತ್ತಬೇಕು. ಸರ್ಕಾರಗಳು ಯಾವುದೇ ಬರಬಹುದು, ಹೋಗಬಹುದು. ಗುತ್ತಿಗೆದಾರರು ಮಾತ್ರ ನಿರಂತರವಾಗಿರುತ್ತಾರೆ ಎಂದರು.

ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಇಲ್ಲಿಯವರೆಗೂ ಬೆಂಗಳೂರು ನಗರದವರೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಅಧ್ಯಕ್ಷರಾಗುತ್ತಿದ್ದರು. ಈಗ ಚಿತ್ರದುರ್ಗದ ಆರ್.ಮಂಜುನಾಥ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾಗಿರುವುದು ಜಿಲ್ಲೆಗೆ ಸಂದ ಗೌರವ. ಶಿಸ್ತು, ನೇರ ನಡೆ ನುಡಿಯ ಮನುಷ್ಯ ಆರ್.ಮಂಜುನಾಥ್ ಸಲಹೆ ಸೂಚನೆಗಳನ್ನು ಕೊಡುವುದರ ಜೊತೆಗೆ ತಪ್ಪು ಹೆಜ್ಜೆ ಇಟ್ಟಾಗ ಸರಿಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರ ಸಮಸ್ಯೆಳಿಗೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್, ನಾನು ರಾಜ್ಯಾಧ್ಯಕ್ಷನಾಗಲು ಜಿಲ್ಲಾ ಗುತ್ತಿಗೆದಾರರ ಸಂಘದ ಪರಿಶ್ರಮವಿದೆ. ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಮೂರ್ನಾಲ್ಕು ವರ್ಷಗಳಿಂದ ಬಿಲ್ ಬಾಕಿ ಉಳಿದಿದೆ. ಜಿಎಸ್‌ಟಿ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಹೊಳಲ್ಕೆರೆ ತಾಲೂಕಿನಲ್ಲಿ ಹೊರ ರಾಜ್ಯಗಳಿಂದ ಗುತ್ತಿಗೆದಾರರು ಬಂದು ಕಾಮಗಾರಿಗಳನ್ನು ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿಯೇ ಗುಣಮಟ್ಟದ ಕೆಲಸ ಮಾಡುವ ಗುತ್ತಿಗೆದಾರರುಗಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿ ಜೊತೆ ಗುತ್ತಿಗೆದಾರ ಸಭೆ ಕರೆದು ಸಮಸ್ಯೆಗಳನ್ನು ಕೇಳಿ ಟೆಂಡರ್ ಹಾಕಲು ಅವಕಾಶ ಕಲ್ಪಿಸಿಕೊಡಲಿ ಎಂದು ಮನವಿ ಮಾಡಿದರು.

ಹೊಳಲ್ಕೆರೆ ತಾಲೂಕಿನಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಅವಕಾಶ ಸಿಗಬೇಕು. ಗುತ್ತಿಗೆದಾರರು ಮರಣ ಹೊಂದಿದರೆ 5 ಲಕ್ಷ ರು. ನೀಡಲಾಗುತ್ತಿತ್ತು. ಈಗ 10 ಲಕ್ಷ ರು.ಗಳಿಗೆ ಏರಿಸಲಾಗಿದೆ. ಜಿಎಸ್‌ಟಿ, ವ್ಯಾಟ್ ಸಮಸ್ಯೆಯಿದೆ. ಗುತ್ತಿಗೆದಾರರ ಲೈಸೆನ್ಸ್ ನವೀಕರಣ ಅವಧಿಯನ್ನು 10 ವರ್ಷಗಳಿಗೆ ಮಿತಿಗೊಳಿಸಲಾಗಿದೆ.

ಸಣ್ಣ ಸಣ್ಣ ಗುತ್ತಿಗೆದಾರರ ಪರ ಕೆಲಸ ಮಾಡುತ್ತೇನೆ. ಯಾರು ಭಯ ಪಡುವ ಅವಶ್ಯಕತೆಯಿಲ್ಲ. 30 ಸಾವಿರ ಕೋಟಿ ರು. ಬಿಲ್ ಬಾಕಿಯಿದೆ. ಅದರಲ್ಲಿ 15 ಸಾವಿರ ಕೋಟಿ ರು. ಕೊಡುವುದಾಗಿ ಸಿಎಂ ಸಿದ್ದರಾಮಯ್ಯನವರು ಭರವಸೆ ಕೊಟ್ಟಿದ್ದಾರೆ. ಕೆಲವು ಸಮಸ್ಯೆಗಳನ್ನು ಹೇಳಿಕೊಳ್ಳಲು ಆಗುವುದಿಲ್ಲ. ನನಗೆ ಸಿಕ್ಕಿರುವ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಚಿತ್ರದುರ್ಗ ಜಿಲ್ಲೆಗೆ ಕೆಟ್ಟ ಹೆಸರು ತರುವುದಿಲ್ಲವೆಂದು ಆಶ್ವಾಸನೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಕೆ.ಅನ್ವರ್‍ಪಾಷ ಸೇರಿದಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಲ್ಲೇಶಪ್ಪ, ಮೈಲಾರಪ್ಪ, ತಕ್ಕಡಿ ಸುರೇಶ್, ಕುಮಾರ್, ಮಾಧವ ನಾಯ್ಕ, ದೇವರಾಜ್ ಸೇರಿದಂತೆ ಆರ್.ಮಂಜುನಾಥ್‍ರವರ ಅಪಾರ ಅಭಿಮಾನಿಗಳು ಅಭಿನಂದನಾ ಸಮಾರಂಭದಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ