ಕಾರವಾರ: ಬಾರ್ಬಡೋಸ್ನಲ್ಲಿ ಭಾರತ ಟಿ20 ವಿಶ್ವಕಪ್ ಎತ್ತಿ ಹಿಡಿಯುತ್ತಿದ್ದಂತೆ ದೇಶಾದ್ಯಂತ ಸಂಭ್ರಮ ಮನೆ ಮಾಡಿತ್ತು. ಜತೆಗೆ ಕುಮಟಾದ ದಿವಗಿಯಲ್ಲಿ ವಿಶೇಷ ಸಡಗರ ಉಂಟಾಯಿತು. ದಿವಗಿಯ ಯುವಕನೊಬ್ಬ ವಿರಾಟ್, ರೋಹಿತ್, ಹಾರ್ದಿಕ್ ಮತ್ತಿತರ ಜತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು.
ಹಿನ್ನೆಲೆ: ಕ್ರಿಕೆಟ್ ಹುಚ್ಚಿನಿಂದ ರಾಘವೇಂದ್ರ ದಿವಗಿ ಅವರು ಮನೆ ಬಿಟ್ಟು ಹುಬ್ಬಳ್ಳಿಗೆ ತೆರಳಿ ಅಲ್ಲಿನ ಕ್ರಿಕೆಟಿಗರಿಗೆ ಅಭ್ಯಾಸಕ್ಕೆ ನೆರವಾಗುತ್ತಿದ್ದರು. ನಂತರ ಪರಿಚಿತರೊಬ್ಬರ ಮೂಲಕ ಬೆಂಗಳೂರಿಗೆ ತೆರಳಿದರು. ಅಲ್ಲೂ ಅದೇ ಕೆಲಸ ಮುಂದುವರಿಸಿದರು. ಇವರ ಚುರುಕಾದ ಕೆಲಸವನ್ನು ಜಾವಗಲ್ ಶ್ರೀನಾಥ ಗಮನಕ್ಕೆ ತಂದರು. ಶ್ರೀನಾಥ ರಣಜಿ ತಂಡದ ಜತೆ ಇರುವಂತೆ ಸೂಚಿಸಿದರು. ಅಲ್ಲೇ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಸೇರಿದರು. ಇವರ ಪ್ರತಿಭೆ ಗುರುತಿಸಿದ ಸಚಿನ್ ತೆಂಡುಲ್ಕರ್ 2011ರಲ್ಲಿ ಭಾರತ ತಂಡಕ್ಕೆ ಟ್ರೇನಿಂಗ್ ಅಸಿಸ್ಟಂಟ್ ಆಗಿ ಸೇರಿಸಿದರು. ಅಲ್ಲಿಂದ ಇಲ್ಲಿನ ತನಕ ರಾಘವೇಂದ್ರ ಭಾರತೀಯ ತಂಡದ ಕಾಯಂ ಸದಸ್ಯರಾಗಿದ್ದಾರೆ. ರಾಘವೇಂದ್ರ ಮಷಿನ್ನಲ್ಲಿ ಚೆಂಡನ್ನು ಎಸೆಯುವ ಕಲೆಯನ್ನೂ ಕರಗತ ಮಾಡಿಕೊಂಡಿದ್ದಾರೆ.
ಫೋಟೊ ವೈರಲ್: ಈಗ ಟಿ20 ವಿಶ್ವಕಪ್ ಭಾರತಕ್ಕೆ ಒಲಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಲ್ಲಿ ವಿರಾಟ್ ಕೊಯ್ಲಿ ಜತೆ ರಾಘವೇಂದ್ರ ಕಪ್ ಎತ್ತಿ ಹಿಡಿದ, ರೋಹಿತ್ ಜತೆ ಸಂಭ್ರಮಿಸುತ್ತಿರುವ, ಇತರ ಆಟಗಾರರರೊಂದಿಗೆ ಸಂತಸ ಹಂಚಿಕೊಳ್ಳುತ್ತಿರುವ ಫೋಟೋಗಳು ವೈರಲ್ ಆಗಿವೆ.