ಕನ್ನಡಪ್ರಭ ವಾರ್ತೆ ಮಂಡ್ಯ
ತಮ್ಮನ್ನು ಭೇಟಿಯಾದ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ತಮಿಳುನಾಡಿನಲ್ಲೂ ಕಾಂಗ್ರೆಸ್ ಬೆಂಬಲಿತ ಸರ್ಕಾರವಿದೆ. ಹೀಗಿರುವಾಗ ಕಾಂಗ್ರೆಸ್ನ ರಾಹುಲ್ಗಾಂಧಿ ಅವರು ಎರಡೂ ರಾಜ್ಯದ ಮುಖ್ಯಮಂತ್ರಿಗಳನ್ನು ಒಟ್ಟಿಗೆ ಕೂರಿಸಿ ಸಂಧಾನ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಮ್ಮಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ಪರಿಸ್ಥಿತಿಯಲ್ಲಿ ಇರುವ ನೀರನ್ನೇ ತಮಿಳುನಾಡಿಗೆ ಹರಿಸಿದರೆ ನಮ್ಮ ಜನರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಇರುವ ನೀರನ್ನು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು. ಒಂದು ವೇಳೆ ನೀರು ಬಿಟ್ಟಲ್ಲಿ ಸದನದ ಒಳಗೆ, ಹೊರಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ತಮಿಳುನಾಡಿಗೆ ನೀರು ಬಿಡುವವರು ನಾವು. ಒಂದು ವೇಳೆ ನೀರು ಕೇಳುವವರು ನಾವಾಗಿದ್ದರೆ ಆಗ ಸಂಸದರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳಿಗೂ ಜವಾಬ್ದಾರಿ ಇರುತ್ತದೆ. ಆದರೆ, ನಾವೇ ನೀರು ಬಿಡುವ ಸ್ಥಾನದಲ್ಲಿದ್ದೇವೆ. ಹೀಗಾಗಿ ಸಂಸದರು ಏಕೆ ಮಾತನಾಡಬೇಕು ಎಂದು ಶಾಸಕ ಪಿ. ರವಿಕುಮಾರ್ ಅವರಿಗೆ ತಿರುಗೇಟು ನೀಡಿದರು.
ಈ ಹಿಂದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಜಲ ತಜ್ಞರು, ತಂತ್ರಜ್ಞರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಂತಹ ಮಹನೀಯರನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕಿತ್ತು. ಯಾವುದೇ ಕ್ರಮಗಳನ್ನು ಅನುಸರಿಸದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಪಕ್ಷದವರನ್ನು ಗಣನೆಗೆ ತೆಗೆದುಕೊಂಡಿಲ್ಲ. ಈಗ ನಮ್ಮ ಮೇಲೆ ಬೊಟ್ಟು ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ನಾಡಿನ ಜಲ, ನೆಲ, ಭಾಷೆ ವಿಚಾರವಾಗಿ ಯಾವುದೇ ಸಂಘಟನೆಗಳು ಹೋರಾಟ ನಡೆಸಿದರೆ ನಮ್ಮ ಸಂಪೂರ್ಣ ಬೆಂಬಲವಿದೆ. ಮಂಡ್ಯ ಬಂದ್ಗೆ ಕರೆ ನೀಡಿರುವ ಸಂಘಟನೆಗೂ ನಮ್ಮ ಬೆಂಬಲ ಇರುವುದಾಗಿ ಘೋಷಿಸಿದರು.