ಮಂಗಳೂರು: ಶೀಘ್ರದಲ್ಲೇ ಆರಂಭವಾಗಲಿರುವ ಮಂಗಳೂರು ಸೆಂಟ್ರಲ್-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿಯನ್ನು ಪರಿಷ್ಕರಿಸಿ, ಮಂಗಳೂರಿನಿಂದಲೇ ಮುಂಜಾನೆ ಸೇವೆಯನ್ನು ಪ್ರಾರಂಭಿಸುವಂತೆ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯು ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಹಾಗೂ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳಿಗೆ ಮನವಿ ಮಾಡಿದೆ.ಪ್ರಸ್ತುತ ಪ್ರಸ್ತಾಪಿಸಲಾಗಿರುವ ವೇಳಾಪಟ್ಟಿಯ ಪ್ರಕಾರ, ರೈಲು ಯಶವಂತಪುರದಿಂದ ಬೆಳಗ್ಗೆ 7.00 ಗಂಟೆಗೆ ಹೊರಟು ಮಧ್ಯಾಹ್ನ 2.30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದ್ದು, ಮರುಪ್ರಯಾಣದಲ್ಲಿ ಮಂಗಳೂರಿನಿಂದ ಸಂಜೆ 3.00 ಗಂಟೆಗೆ ಹೊರಟು ರಾತ್ರಿ 10.30ಕ್ಕೆ ಯಶವಂತಪುರ ತಲುಪುವ ನಿರೀಕ್ಷೆಯಿದೆ.
ಆದ್ದರಿಂದ ವಂದೇ ಭಾರತ್ ರೈಲು ಸೇವೆಯನ್ನು ಮಂಗಳೂರು ಸೆಂಟ್ರಲ್ನಿಂದ ಬೆಳಗ್ಗೆ ಸುಮಾರು 5.45ಕ್ಕೆ ಹೊರಟು, ಮಧ್ಯಾಹ್ನ ಸುಮಾರು 1.00 ಗಂಟೆಗೆ ಯಶವಂತಪುರ ತಲುಪುವಂತೆ ರೂಪಿಸಬೇಕು. ಮರುಪ್ರಯಾಣದಲ್ಲಿ ಯಶವಂತಪುರದಿಂದ ಸಂಜೆ ಸುಮಾರು 4.00 ಗಂಟೆಗೆ ಹೊರಟು ರಾತ್ರಿ 11.00ರ ಸುಮಾರಿಗೆ ಮಂಗಳೂರು ಸೆಂಟ್ರಲ್ ತಲುಪುವಂತೆ ವೇಳಾಪಟ್ಟಿ ನಿಗದಿಪಡಿಸಬೇಕು ಎಂದು ಸಮಿತಿ ವಿನಂತಿಸಿದೆ.
ಮಂಗಳೂರಿನಿಂದ ಮುಂಜಾನೆಯೇ ರೈಲು ಸಂಚರಿಸಿದರೆ ಪ್ರಯಾಣಿಕರು ಮಧ್ಯಾಹ್ನದ ವೇಳೆಗೆ ಬೆಂಗಳೂರು ತಲುಪಿ, ತಮ್ಮ ಕಚೇರಿ ಹಾಗೂ ವಾಣಿಜ್ಯ ಕೆಲಸಗಳನ್ನು ಮುಗಿಸಿಕೊಂಡು ಅದೇ ದಿನ ರಾತ್ರಿ ರೈಲುಗಳಲ್ಲಿ ಮಂಗಳೂರಿಗೆ ಹಿಂತಿರುಗಲು ಸಾಧ್ಯವಾಗುತ್ತದೆ. ಇದರಿಂದ ಬೆಂಗಳೂರಿಗೆ ಹಗಲಿನ ಸಂಪರ್ಕ ಬಯಸುವ ಪ್ರಯಾಣಿಕರಿಗೆ ಈ ರೈಲು ಹೆಚ್ಚು ಉಪಯುಕ್ತವಾಗಲಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ತಿರುವನಂತಪುರಂ-ಮಂಗಳೂರು ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಗಳೂರಿನಿಂದ ಮುಂಜಾನೆ ಹೊರಟು, ರಾತ್ರಿ ಮರಳಿ ಆಗಮಿಸುವ ಮಾದರಿಯಲ್ಲೇ ಯಶಸ್ವಿಯಾಗಿ ಸೇವೆ ನೀಡುತ್ತಿದೆ. ಈ ಭಾಗದ ಜನರ ಪ್ರಯಾಣದ ಅಗತ್ಯತೆಗಳನ್ನು ಪೂರೈಸಲು ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗೂ ಇದೇ ಮಾದರಿಯ ಕಾರ್ಯಾಚರಣೆ ಜಾರಿಗೊಳಿಸಬೇಕು ಎಂದು ಸಮಿತಿ ಗಮನಸೆಳೆದಿದೆ.
ಮಂಗಳೂರು ಹಾಗೂ ಸಮಗ್ರ ಕರಾವಳಿ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟಿಸುವ ಮುನ್ನ ಈ ಸಮಯ ಪರಿಷ್ಕರಣೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯು ರೈಲ್ವೆ ಸಚಿವಾಲಯ ಹಾಗೂ ನೈರುತ್ಯ ರೈಲ್ವೆಗೆ ಮನವಿ ಮಾಡಿದೆ.
* ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಡುವ ಸಮಯ: ಬೆಳಗ್ಗೆ 5.45
* ಯಶವಂತಪುರ ಜಂಕ್ಷನ್ ರೈಲು ನಿಲ್ದಾಣದಿಂದ ಹೊರಡುವ ಸಮಯ: ಸಂಜೆ 4.00