ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಕನ್ನಡ ಇಲ್ಲದ ಪರೀಕ್ಷೆಯೇ ರದ್ದು!

KannadaprabhaNewsNetwork |  
Published : Aug 04, 2024, 01:17 AM ISTUpdated : Aug 04, 2024, 10:24 AM IST
Indian railway

ಸಾರಾಂಶ

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್‌/ಹಿಂದಿ ಭಾಷೆ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

 ಬೆಂಗಳೂರು :  ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್‌/ಹಿಂದಿ ಭಾಷೆ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದು, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ.

‘ಕನ್ನಡದಲ್ಲಿ ಪರೀಕ್ಷೆ ಬರೆವ ಅವಕಾಶ ಕೊಟ್ಟು ಕಿತ್ತುಕೊಂಡ ರೈಲ್ವೇ ಇಲಾಖೆ’ ಶೀರ್ಷಿಕೆಯಡಿ ‘ಕನ್ನಡಪ್ರಭ’ ಆ.2ರಂದು ವರದಿ ಪ್ರಕಟಿಸಿತ್ತು. ಪರೀಕ್ಷೆ ಸುತ್ತೋಲೆ ಹೊರಡಿಸುವಾಗ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ಹಾಲ್‌ ಟಿಕೆಟ್‌ನಲ್ಲಿ ಹಿಂದಿ/ಇಂಗ್ಲಿಷ್‌ಗೆ ಮಾತ್ರ ಅವಕಾಶ ನೀಡಿರುವ ಬಗ್ಗೆ ವಿವರಿಸಲಾಗಿತ್ತು. ಈ ಸಂಬಂಧ ರೈಲ್ವೇ ನೌಕರರ ವಿವಿಧ ಸಂಘಟನೆಗಳು ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು. ಜೊತೆಗೆ ನೈಋತ್ಯ ರೈಲ್ವೇ ನಡೆಗೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಪರಿಣಾಮ, ಶನಿವಾರ (ಆ.3) ನಡೆಯಬೇಕಿದ್ದ ಪರೀಕ್ಷೆಯನ್ನು ನೈಋತ್ಯ ರೈಲ್ವೆ ರದ್ದುಪಡಿಸಿ, ಮುಂದೂಡಿತು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ‘ಈಗಾಗಲೇ ಪರೀಕ್ಷೆ ಮುಂದೂಡಲಾಗಿದೆ.

 ಪ್ರಸ್ತುತ ಜಿಡಿಸಿಇ ಮಾತ್ರವಲ್ಲದೆ ರಾಜ್ಯದಲ್ಲಿ ನಡೆಯುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆ (ಎಲ್‌ಡಿಸಿಇ) ಸೇರಿ ಎಲ್ಲ ರೈಲ್ವೆ ಪರೀಕ್ಷೆಗಳಲ್ಲೂ ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು. ಈ ಸಂಬಂಧ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರ ಜೊತೆಗೆ ಮಾತನಾಡಿದ್ದೇವೆ. ನಮ್ಮನ್ನು ನಂಬಿ, ಸಂಶಯ ಬೇಡ’ ಎಂದು ಹೇಳಿದರು.ಕರ್ನಾಟಕ ಮತ್ತು ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಇಚ್ಛಿಸುವ ಪರೀಕ್ಷಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದೇವೆ. ಕನ್ನಡದಲ್ಲಿ ಪರೀಕ್ಷೆ ಬಗ್ಗೆ ಸುತ್ತೋಲೆ ಹೊರಡಿಸಲಿದ್ದೇವೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!