ಡ್ರಗ್ಸ್‌ ಪತ್ತೆಗೆ ರೈಲುಗಳಲ್ಲಿ ಬಿಗಿ ಪೊಲೀಸ್‌ ಗಸ್ತು

KannadaprabhaNewsNetwork |  
Published : Jan 29, 2024, 01:32 AM IST
ರೈಲು | Kannada Prabha

ಸಾರಾಂಶ

ಅನ್ಯ ರಾಜ್ಯಗಳಿಂದ ಕರ್ನಾಟಕಕ್ಕೆ ರೈಲುಗಳಲ್ಲಿ ಮಾದಕ ದ್ರವ್ಯ ಸಾಗಣೆ ಹೆಚ್ಚಳ ಕಡಿವಾಣಕ್ಕೆ ಸಜ್ಜಾದ ರಾಜ್ಯ ರೈಲ್ವೇ ಪೊಲೀಸ್‌ ರೈಲುಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು ರೈಲುಗಳಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಹಾಗೂ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳ ತಡೆಗೆ ಮುಂದಾಗಿರುವ ರಾಜ್ಯ ರೈಲ್ವೆ ಪೊಲೀಸರು, ಈಗ ರಾಜ್ಯದಲ್ಲಿ ಸಂಚರಿಸುವ ರೈಲುಗಳಲ್ಲಿ ‘ರಾತ್ರಿ ಗಸ್ತು’ ಮೂಲಕ ಕಣ್ಗಾವಲಿರಿಸಿದ್ದಾರೆ.ರೈಲು ಪಹರೆ ಪರಿಣಾಮ ಹೊಸ ವರ್ಷಾಚರಣೆಗೆ ನಾಡಿಗೆ ಭದ್ರತಾ ಪಡೆಗಳ ಕಣ್ತಪ್ಪಿಸಿ ಬರುತ್ತಿದ್ದ 60 ಲಕ್ಷ ರು. ಮೌಲ್ಯದ ಡ್ರಗ್ಸ್ ಅನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದು, ಏಳು ಮಂದಿ ಪೆಡ್ಲರ್‌ಗಳನ್ನು ಜೈಲಿಗೆ ಸಹ ಅಟ್ಟಿದ್ದರು. ಈ ಹಿನ್ನೆಲೆಯಲ್ಲಿ ಗಸ್ತಿನ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ರೈಲ್ವೆ ಡಿಐಜಿ ಡಾ.ಎಸ್‌.ಡಿ.ಶರಣಪ್ಪ ಸೂಚಿಸಿದ್ದಾರೆ.ಎಲ್ಲಿಂದ ಗಾಂಜಾ ಪೂರೈಕೆ:ಬೆಂಗಳೂರು, ಮೈಸೂರು ಹಾಗೂ ಮಂಗಳೂರು ಸೇರಿದಂತೆ ರಾಜ್ಯಕ್ಕೆ ಹೊರ ರಾಜ್ಯಗಳಿಂದಲೇ ಅತಿ ಹೆಚ್ಚು ಗಾಂಜಾ ಪೂರೈಕೆಯಾಗುತ್ತಿದೆ. ಅದರಲ್ಲೂ ಒಡಿಶಾ, ಆಂಧ್ರಪ್ರದೇಶ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಮೂಲಕ ಕ್ವಿಂಟಲ್‌ಗಟ್ಟಲೆ ಗಾಂಜಾ ಕಳ್ಳ ಸಾಗಾಣಿಕೆಯಾಗುತ್ತಿದೆ. ಕಡಿಮೆ ವೆಚ್ಚ ಹಾಗೂ ಸುಲಭ ಎಂಬ ಕಾರಣದಿಂದ ಹೊರರಾಜ್ಯಗಳಿಂದ ಗಾಂಜಾ ಪೂರೈಕೆಗೆ ರೈಲುಗಳನ್ನೇ ಅಧಿಕವಾಗಿ ಮಾದಕ ವಸ್ತು ಮಾರಾಟಗಾರರು ಬಳಸುತ್ತಿದ್ದಾರೆ. ಹೆಚ್ಚು ಪ್ರಯಾಣಿಕರಿರುವ ರೈಲುಗಳಲ್ಲಿ ತಪಾಸಣೆ ಕಡಿಮೆ ಇರುತ್ತದೆ. ಕಾರು ಅಥವಾ ಬಸ್ಸುಗಳ ಮೂಲಕ ಸಾಗಿಸಿದರೆ ಪೊಲೀಸರ ತಪಾಸಣೆ ಇರುತ್ತದೆ. ಹಾಗಾಗಿ ರೈಲುಗಳನ್ನೇ ಪೆಡ್ಲರ್‌ಗಳು ಆಶ್ರಯಿಸಿದ್ದಾರೆ. ಅಲ್ಲದೇ ಮಾದಕ ವಸ್ತು ಪ್ರಕರಣಗಳಲ್ಲಿ ಬಂಧಿತ ಗಾಂಜಾ ಪೆಡ್ಲರ್‌ಗಳ ವಿಚಾರಣೆ ವೇಳೆ ರೈಲುಗಳ ಮೂಲಕ ಗಾಂಜಾ ಸಾಗಿಸಿರುವುದಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಮಾದಕ ವಸ್ತು ಸಾಗಾಣಿಕೆಗೆ ರೈಲ್ವೆ ಪೊಲೀಸರ ಗಸ್ತು ವ್ಯವಸ್ಥೆ ಜಾರಿಗೆ ತರಲಾಗಿದೆ.ಹೇಗೆ ರೈಲ್ವೆ ಪೊಲೀಸರ ಗಸ್ತು:

ಇನ್ಸ್‌ಪೆಕ್ಟರ್‌ಗಳಿಂದ ಕಾನ್‌ಸ್ಟೇಬಲ್‌ವರೆಗೆ ರಾಜ್ಯದ 18 ರೈಲ್ವೆ ಠಾಣೆಯ ಎಲ್ಲ ಪೊಲೀಸರು ಹಗಲು-ರಾತ್ರಿ ಗಸ್ತು ನಡೆಸುವ ನಿಯಮವಿದೆ. ರೈಲುಗಳಲ್ಲಿ ಪೊಲೀಸರಿಗೆ ಉಚಿತ ಪ್ರಯಾಣವಿದೆ. ಈಗ ರಾತ್ರಿ ಗಸ್ತು ವ್ಯವಸ್ಥೆ ಸುಧಾರಿಸಿದ್ದೇವೆ. ಹೆಚ್ಚು ಗಸ್ತು ನಡೆಸಿದರೆ ಅಪರಾಧ ಚಟುವಟಿಕೆಗಳು ಸಹ ನಿಯಂತ್ರಣಕ್ಕೆ ಬರುತ್ತವೆ ಎಂದು ಡಿಐಜಿ ಶರಣಪ್ಪ‘ಕನ್ನಡಪ್ರಭ’ಕ್ಕೆ ತಿಳಿಸಿದರು.ಈ ಗಸ್ತು ಮೂಲಕ ರೈಲುಗಳಲ್ಲಿ ಪೊಲೀಸರು ಅಂತರ್ ಜಿಲ್ಲೆ ಓಡಾಡುವುದರಿಂದ ಅಕ್ರಮ ಚಟುವಟಿಕೆಗಳಿಗೆ ಸಹ ಕಡಿವಾಣ ಬೀಳಲಿದೆ. ಉದಾಹರಣೆಗೆ ಮೈಸೂರಿನ ಪೊಲೀಸರು ಬೆಂಗಳೂರಿನವರೆಗೆ, ಬೆಂಗಳೂರಿನವರು ದಾವಣಗೆರೆ ಹೀಗೆ ರಾತ್ರಿ ರೈಲುಗಳಲ್ಲಿ ಸಿಬ್ಬಂದಿ ಗಸ್ತು ನಡೆಸಲಿದ್ದಾರೆ. ಗಸ್ತು ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಡೈರಿಯಲ್ಲಿ ಎಲ್ಲಿಂದ ಎಲ್ಲಿವರೆಗೆ ಪ್ರಯಾಣಿಸಿದ ಬಗ್ಗೆ ನಮೂದಿಸಬೇಕು. ಕರ್ತವ್ಯ ಲೋಪವೆಸಗಿದರೆ ಪೊಲೀಸರು ಶಿಸ್ತು ಕ್ರಮ ಸಹ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಎಚ್ಚರಿಕೆ ನೀಡಿದ್ದಾರೆ.ಹಾಟ್ ಸ್ಪಾಟ್ ಗುರುತಿಸಿದ ಪೊಲೀಸರು:

ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅಧಿಕ ಪ್ರಮಾಣದಲ್ಲಿ ಗಾಂಜಾ ಸಾಗಿಸುವ ರೈಲುಗಳನ್ನು ಗುರುತಿಸಲಾಗಿದೆ. ಆ ರೈಲುಗಳ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಡಿಐಜಿ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ