ಬಳ್ಳಾರಿ: ಕಳೆದ ಎರಡುವರೆ ತಿಂಗಳಿನಿಂದ ನಡೆಯುತ್ತಿದ್ದ ಕಾಮಗಾರಿಯಿಂದ ನಗರದ ಸಂಚಾರ ದಟ್ಟಣೆಗೆ ಕಾರಣವಾಗಿದ್ದ ಇಲ್ಲಿನ ಶ್ರೀಕನಕ ದುರ್ಗಮ್ಮ ದೇವಸ್ಥಾನ ಬಳಿಯ ರೈಲ್ವೆ ಕೆಳಸೇತುವೆ ರಸ್ತೆಯನ್ನು ಭಾನುವಾರ ಸಂಜೆ ಮರು ಸಂಚಾರಕ್ಕೆ ಮುಕ್ತಗೊಳಿಸಲಾಯಿತು.
ಇದೇ ವೇಳೆ ಮಾತನಾಡಿದ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ನಗರದ ಸಮಗ್ರ ಅಭಿವೃದ್ಧಿ ನನ್ನ ಕನಸಾಗಿದೆ. ಈ ದಿಸೆಯಲ್ಲಿ ಹತ್ತಾರು ಯೋಜನೆಗಳ ಮೂಲಕ ಪ್ರಗತಿದಾಯಿಕ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ ನಾರಾ ಪ್ರತಾಪ ರೆಡ್ಡಿ, ಮೇಯರ್ ಮುಲ್ಲಂಗಿ ನಂದೀಶ್, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ಇದ್ದರು.ರೈಲ್ವೆ ಕೆಳಸೇತುವೆ ರಸ್ತೆಯ ಮರು ಸಂಚಾರ ಕಾರ್ಯಕ್ರಮ ಹಿನ್ನಲೆಯಲ್ಲಿ ಎರಡು ಬದಿಯ ಗೋಡೆಗಳನ್ನುವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು. ಸುವರ್ಣ ಬಳ್ಳಾರಿಯ ಫಲಕವು ವಿದ್ಯುತ್ ದೀಪದಿಂದ ಗಮನ ಸೆಳೆಯಿತು. ಕಾರ್ಯಕ್ರಮ ಚಾಲನೆ ಸಿಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡುತ್ತಿಲ್ಲ ಎಂದು ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ, ಸಿಪಿಐಎಂ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಭಾನುವಾರ ಸಂಜೆ ಶ್ರೀಕನಕ ದುರ್ಗಮ್ಮ ದೇವಸ್ಥಾನ ಬಳಿಯ ಅಂಡರ್ ಬ್ರಿಡ್ಜ್ ರಸ್ತೆಯನ್ನು ಓಡಾಟಕ್ಕೆ ಮುಕ್ತಗೊಳಿಸುತ್ತಿದ್ದಂತೆಯೇ ಸಾರ್ವಜನಿಕರು ನಿರಾಳಗೊಂಡರು.