ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ 1819 ವಿದ್ಯುತ್ ಕಂಬಗಳು ಧರೆಗುರುಳಿದೆ. 43 ಟ್ರಾನ್ಸ್ಫಾರ್ಮರ್ಗಳು ಹಾನಿಗೀಡಾಗಿವೆ. 1 ಅಂಗನವಾಡಿ ಹಾಗೂ 2 ಶಾಲೆಗಳ ಕಟ್ಟಡಕ್ಕೆ ಹಾನಿಯಾಗಿದೆ. ಕೊಯನಾಡುವಿನ ಸರ್ಕಾರಿ ಶಾಲೆಯ ಹಿಂಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಬರೆ ಕುಸಿದು ಸಂಪೂರ್ಣ ನಷ್ಟವಾಗಿದ್ದು, ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆಯುಂಟಾಗಿದೆ. ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ರಸ್ತೆಯ ಅಡ್ಡಲಾಗಿ ಬಿದ್ದ 85 ಮರಗಳನ್ನು ತೆರವುವೊಳಿಸಲಾಗಿದೆ.
ಮಳೆ ಇಳಿಮುಖ: ಜಿಲ್ಲೆಯಾದ್ಯಂತ ಭಾನುವಾರ ಮಳೆ ಪ್ರಮಾಣ ಇಳಿಮುಖವಾಗಿತ್ತು. ಮಧ್ಯಾಹ್ನದ ನಂತರ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಮಳೆ ಕಡಿಮೆಯಾದರೂ ಜಿಲ್ಲೆಯ ವಿವಿಧೆಡೆಗಳಲ್ಲಿ ಒಂದು ಜಾನುವಾರು ಮೃತಪಟ್ಟಿದೆ ಹಾಗೂ ಕೆಲವು ಮನೆಗಳಿಗೆ ಹಾನಿಯಾಗಿದೆ. ಶನಿವಾರಸಂತೆ ಹೋಬಳಿಯ ಗೌಡಳ್ಳಿ ಗ್ರಾಮದ ಮಹೇಶ್ ಎಂಬುವವರ ಹಾಲು ಕೊಡುತ್ತಿದ್ದ ಹಸು ಈಮಳೆಯಿಂದ ಗದ್ದೆಯಲ್ಲಿ ಕೆಸರಿಗೆ ಸಿಲುಕಿ ಮೃತಪಟ್ಟಿದೆ. ಶನಿವಾರಸಂತೆ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಕುಶಾಲನಗರ ತಾಲೂಕಿನ ಕುಶಾಲನಗರ ಹೋಬಳಿಯ ಚಿಕ್ಕತ್ತೂರು ಗ್ರಾಮದ ಪುಟ್ಟಣ್ಮಯ್ಯ ಅವರ ಮನೆ ಹಿಂದಿನ ಗೋಡೆ ಮಳೆಗೆ ಭಾಗಶಃ ಹಾನಿಯಾಗಿದೆ. ಕುಶಾಲನಗರ ಹೋಬಳಿಯ ಕಾಳಿದೇವರಹೊಸೂರುಲ್ಲಿ ಮನೆಯ ಗೋಡೆ ತೀವ್ರವಾಗಿ ಹಾನಿಯಾಗಿದೆ. ಕುಶಾಲನಗರ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಬೇಬಿ ಅವರ ಮನೆಯ ಗೋಡೆ ಭಾಗಶಃ ಹಾನಿಯಾಗಿದೆ.