ಹಾನಗಲ್ಲ: ತಾಲೂಕಿನ ಅಕ್ಕಿಆಲೂರಿನ ಬಸ್ ನಿಲ್ದಾಣದ ಬಳಿ ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ಮಳೆ ಸುರಿದಾಗಲೆಲ್ಲ ನೀರು ನಿಂತು ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ ಕಾರ್ಯ ನಿರ್ವಾಹಕ ಅಭಿಯಂತರ ಅಮರ್ ಅವರಿಂದ ಅಗತ್ಯ ಮಾಹಿತಿ ಪಡೆದ ಸಚಿವ ಪಾಟೀಲ, ನೀರು ಮುಂದೆ ಸರಾಗವಾಗಿ ಹರಿದು ಏಕೆ ಸಾಗುತ್ತಿಲ್ಲ ಎನ್ನುವ ಕುರಿತು ಪರಿಶೀಲನೆ ನಡೆಸಿ. ವೈಜ್ಞಾನಿಕ ಕಾರಣಗಳಿದ್ದರೆ ಸರಿಪಡಿಸಲು ಕ್ರಮ ಕೈಗೊಳ್ಳಿ. ಪ್ರಯಾಣಿಕರು, ಸುತ್ತಲಿನ ವ್ಯಾಪಾರಸ್ಥರಿಗೆ ತೊಂದರೆ ಉಂಟಾಗದಂತೆ ಸಮಸ್ಯೆ ಬಗೆಹರಿಸಲು ಕಾಳಜಿ ವಹಿಸಿ ಎಂದು ಸೂಚಿಸಿದರು.
ಕಾಲುವೆಗೆ ತಡೆಗೋಡೆ ನಿರ್ಮಿಸಿ ನೀರು ಮುಂದೆ ಹರಿದು ಸಾಗುವಂತೆ ತಡೆದಿದ್ದರೆ, ಕೂಡಲೇ ಅದನ್ನು ತೆರವುಗೊಳಿಸಿ. ಒಟ್ಟಾರೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಿ ಎಂದು ತಹಸೀಲ್ದಾರ್ ರೇಣುಕಾ ಎಸ್. ಅವರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.