ಮಳೆ ಕೊರತೆ; ಕಡಿಮೆ ಅವಧಿ ರಾಗಿ ಬೆಳೆ ಸೂಕ್ತ

KannadaprabhaNewsNetwork |  
Published : Aug 07, 2026, 01:30 AM IST
ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಚಿವ ಕೆ.ಎಚ್.ಮುನಿಯಪ್ಪ, ಬರ ಪರಿಸ್ಥಿತಿ ಅಧ್ಯಯನ ನಡೆಸಿದರು. ಶಾಸಕ ಧೀರಜ್‌ ಮುನಿರಾಜ್, ಜಿಲ್ಲಾಧಿಕಾರಿ ಅನುರಾಧಾ ಮತ್ತಿತರರು ಇದ್ದಾರೆ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ ಜಮೀನುಗಳಿಗೆ, ಕೋಳೂರು ಕೆರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಗುರುವಾರ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು

ದೊಡ್ಡಬಳ್ಳಾಪುರ: ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ ಜಮೀನುಗಳಿಗೆ, ಕೋಳೂರು ಕೆರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಗುರುವಾರ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, ಮುಂಗಾರು ಮಳೆ ಕೊರತೆಯಾಗುವ ಸಂಭವವಿದ್ದು ರೈತರು ಕಡಿಮೆ ಅವಧಿಯ ರಾಗಿ ಬಿತ್ತನೆ ಮಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಲಭ್ಯವಿದೆ. ಕಡಿಮೆ ಅವಧಿಯ ರಾಗಿ ಬೆಳೆ ಬಗ್ಗೆ ಕೃಷಿ ಅಧಿಕಾರಿಗಳ ಬಳಿ ಮಾಹಿತಿ ಬಿತ್ತನೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿರುವ ರಾಗಿಗೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ, ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು

ಮುಂಗಾರು ಮಳೆ ಹಾಗೂ ಬೆಳೆ ಪರಿಸ್ಥಿತಿ:

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಬಿತ್ತನೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಜೂನ್ 1ರಿಂದ ಆಗಸ್ಟ್ 4 ರವರೆಗೆ ಜಿಲ್ಲೆಯ ವಾಡಿಕೆ ನೈಋತ್ಯ ಮುಂಗಾರು ಮಳೆಯ ಪ್ರಮಾಣ 306.6 ಮಿ.ಮೀ. ಆಗಿದ್ದು, ಪ್ರಸ್ತುತ 272.1 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆ ಉಂಟಾಗಿದೆ.

ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಒಟ್ಟು ಬಿತ್ತನೆ ಗುರಿ 25833 ಹೆಕ್ಟೇರ್ ಆಗಿದ್ದು, ಇದುವರೆಗೆ 1429 ಹೆಕ್ಟೇ‌ರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು. ಇದು ಗುರಿಯ ಶೇ. 5.53ರಷ್ಟು ಮಾತ್ರವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 17671 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಗುರಿಯ ಶೇ.68.41 ರಷ್ಟು ಪ್ರಗತಿ ಸಾಧಿಸಲಾಗಿತ್ತು. ಪ್ರಸ್ತುತ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ 914.93 ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದ್ದು, ಮುಂಗಾರು ಹಂಗಾಮಿಗೆ ರೈತರ ಬೇಡಿಕೆಗೆ ಅನುಗುಣವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜವನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ರೈತರಿಗೆ ಬೇಡಿಕೆಯಂತೆ ನಿರಂತರವಾಗಿ ಬಿತ್ತನೆ ಬೀಜವನ್ನು ವಿತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಲೂಕಿನಲ್ಲಿ ವಿವಿಧ ವಿಧದ 2016 ಮೆಟ್ರಿಕ್ ಟನ್ ರಸಗೊಬ್ಬರಗಳು ಲಭ್ಯವಿದ್ದು, ರೈತರ ಅಗತ್ಯಕ್ಕೆ ತಕ್ಕಂತೆ ಸಮರ್ಪಕ ಪ್ರಮಾಣದಲ್ಲಿ ದಾಸ್ತಾನು ಇರಿಸಲಾಗಿದೆ. ತಾಲೂಕಿನಲ್ಲಿ ಪ್ರಸ್ತುತ ಸುಮಾರು 87 ಸಾವಿರ ಟನ್ ಮೇವು ಲಭ್ಯವಿದ್ದು, ಇದು ಸುಮಾರು 39 ವಾರಗಳವರೆಗೆ ತಾಲೂಕಿನ ಜಾನುವಾರುಗಳ ಮೇವಿನ ಅಗತ್ಯವನ್ನು ಪೂರೈಸುವಷ್ಟು ಸಾಕಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಶಿವಕುಮಾರ್, ಎಸಿ ಮಂಜುನಾಥ್, ಕೃಷಿ ಜಂಟಿ ನಿರ್ದೇಶಕಿ ಕಲಾವತಿ, ಅಧಿಕಾರಿಗಳು ಉಪಸ್ಥಿತರಿದ್ದರು.

6ಕೆಡಿಬಿಪಿ1- ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಚಿವ ಕೆ.ಎಚ್.ಮುನಿಯಪ್ಪ, ಬರ ಪರಿಸ್ಥಿತಿ ಅಧ್ಯಯನ ನಡೆಸಿದರು. ಶಾಸಕ ಧೀರಜ್‌ ಮುನಿರಾಜ್, ಜಿಲ್ಲಾಧಿಕಾರಿ ಅನುರಾಧಾ ಮತ್ತಿತರರು ಇದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ, ನಾಡಿದ್ದು ಜಿಲ್ಲಾ ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ
ಸೆ.1ಕ್ಕೆ ದೆಹಲಿ ಚಲೋ: ಸಿಪಿಐನಿಂದ ಜಾಗೃತಿ, ಪಾದಯಾತ್ರೆ