ಮೆದುಳು ಆರೋಗ್ಯ ಚಿಕಿತ್ಸೆ ಬಗ್ಗೆ ಅರಿವು ಮೂಡಿಸಿ

KannadaprabhaNewsNetwork |  
Published : Nov 24, 2025, 03:15 AM IST
21ಕೆಪಿಎಲ್22 ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ) ಕಾರ್ಯಕ್ರಮ | Kannada Prabha

ಸಾರಾಂಶ

ಜಿಲ್ಲಾಸ್ಪತ್ರೆಯಲ್ಲಿ ಮೆದುಳು ಆರೋಗ್ಯ ಹಾಗೂ ಅದಕ್ಕೆ ಸಂಬಂಧಿಸಿದ ಚಿಕಿತ್ಸೆ ಲಭ್ಯವಿದೆ. ಇದರ ಜತೆಗೆ ಹಾವಿನ ಕಡಿತಕ್ಕೆ ಲಸಿಕೆ ಸಿಗುತ್ತದೆ.

ಕೊಪ್ಪಳ: ಮೆದುಳು ಆರೋಗ್ಯ ಹಾಗೂ ಅದಕ್ಕೆ ಸಂಬಂಧಿಸಿದ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್ ಹೇಳಿದರು.

ಅವರು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ) ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಅಪಸ್ಮಾರ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾಸ್ಪತ್ರೆಯಲ್ಲಿ ಮೆದುಳು ಆರೋಗ್ಯ ಹಾಗೂ ಅದಕ್ಕೆ ಸಂಬಂಧಿಸಿದ ಚಿಕಿತ್ಸೆ ಲಭ್ಯವಿದೆ. ಇದರ ಜತೆಗೆ ಹಾವಿನ ಕಡಿತಕ್ಕೆ ಲಸಿಕೆ ಸಿಗುತ್ತದೆ. ಇದರ ಉಪಯೋಗ ಸಾರ್ವಜನಿಕರು ಪಡೆದುಕೊಳ್ಳುವಂತಾಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೊಪ್ಪಳ ವೈದ್ಯಕೀಯ ಬೋಧಕ ಆಸ್ಪತ್ರೆಯ ಎಂಡಿ ಫಿಜಿಶಿಯನ್ ಡಾ. ವಿಜಯ್ ಸಿಂಗ್ ಮಾತನಾಡಿ, ರಾಷ್ಟ್ರೀಯ ಅಪಸ್ಮಾರ ದಿನವನ್ನು ಪ್ರತಿ ವರ್ಷ ನ. 17 ರಂದು ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿ, ಅಪಸ್ಮಾರ (ಮೂರ್ಛೆರೋಗ)ದ ಲಕ್ಷಣಗಳು, ಅದಕ್ಕೆ ಕಾರಣ, ಯಾವ ರೀತಿ ಗುರುತಿಸುವುದು ಅಪಸ್ಮಾರಕ್ಕಿರುವ ಮಿಥ್ಯ ಹಾಗೂ ಸತ್ಯ ಹಾಗೂ ಅಪಸ್ಮಾರ ಉಂಟಾದ ವ್ಯಕ್ತಿಗೆ ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬೇಕು ಹಾಗೂ ಔಷಧೋಪಚಾರ ಯಾವ ರೀತಿ ತೆಗೆದುಕೊಳ್ಳಬೇಕು ಮತ್ತು ಕಭಿ ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ, ಪ್ರಧಾನಿ ಮೋದಿ ಹೇಳಿದಂತೆ ಭಾರತ 2025ಕ್ಕೆ ಕ್ಷಯರೋಗ ಮುಕ್ತವಾಗಬೇಕು. ಅದರಂತೆ ನಮ್ಮ ಜಿಲ್ಲೆ ಮತ್ತು ರಾಜ್ಯವನ್ನು ಕ್ಷಯ ಮುಕ್ತವನ್ನಾಗಿಸಲು ನಾವೆಲ್ಲರು ಸಹಕರಿಸಬೇಕು. ಕೊಪ್ಪಳ ಜಿಲ್ಲೆಯು ಬಾಲ್ಯ ವಿವಾಹದಲ್ಲಿ ಎರಡನೇ ಸ್ಥಾನದಲ್ಲಿದ್ದು, ಹಾಗಾಗಿ ನಾವೆಲ್ಲರೂ ಬಾಲ್ಯ ವಿವಾಹ ತಡೆಗಟ್ಟಲು ಸಹ ಕೈಜೋಡಿಸಬೇಕು ಎಂದು ಹೇಳಿದರು.

ಕಭೀ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ತೇಜಸ್ವಿನಿ ಕಾರ್ಯಕ್ರಮ ನಿರೂಪಿಸಿದರು. ಕಭಿ ತಂಡದವರು ಹಾಗೂ ಪೊಲೀಸ್ ಇಲಾಖೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಎಲ್ಲ ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV

Recommended Stories

ರಾಜಾಪುರ ಕ್ರೆಡಿಟ್ ಸೊಸೈಟಿ, ಎಜುಕೇಶನ್ ಟ್ರಸ್ಟ್ ವಿದ್ಯಾರ್ಥಿವೇತನ ವಿತರಣೆ
ಕನ್ನಡ ನಾಡು ನುಡಿ ರಕ್ಷಣೆಗೆ ಸರ್ಕಾರ ಬದ್ಧ: ಎನ್ ಎಸ್ ಬೋಸುರಾಜ್