ಹಾವೇರಿ: ಜಿಲ್ಲೆಯಲ್ಲಿ ಅತ್ಯಾಚಾರ, ಬಾಲ್ಯವಿವಾಹ ಹಾಗೂ ಬಾಲ ಗರ್ಭಿಣಿಯರ ಪ್ರಕರಣಗಳ ತಡೆಗೆ ಎಲ್ಲ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರು ಹಾಗೂ ಬಾಲ್ಯ ವಿವಾಹ ಪ್ರಕರಣಗಳು ನಡೆದಿರುವುದು ವಿಷಾದಕರ ಸಂಗತಿಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇಂತಹ ಪ್ರಕರಣಗಳ ತಡೆಗೆ ಸೂಕ್ತ ಕ್ರಮ ವಹಿಸಬೇಕು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ನಂಬಿಕೆ ಬರಬೇಕು. ಹಾಗಾಗಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಪೊಲೀಸ್ ಠಾಣೆಗೆ ಬರುವವರೊಂದಿಗೆ ಸೌರ್ಜನ್ಯದಿಂದ ನಡೆದುಕೊಳ್ಳಬೇಕು ಹಾಗೂ ಆತ್ಮಸ್ಥೈರ್ಯ ತುಂಬಬೇಕು. ನ್ಯಾಯ ದೊರೆಯುತ್ತದೆ ಎಂಬ ವಿಶ್ವಾಸ ಮೂಡಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್. ಗಾಜಿಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಮಹಿಳಾ ಮತ್ತು ಬಹಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರೇವತಿ ಹೊಸಮಠ ಉಪಸ್ಥಿತರಿದ್ದರು.ಸಭೆಯಲ್ಲಿ ದೂರುಗಳ ಮಹಾಪೂರವಸತಿ ಸಮಸ್ಯೆ, ಹೊರಗುತ್ತಿಗೆ ಸಿಬ್ಬಂದಿ ಸಂಬಳ ವ್ಯತ್ಯಾಸ, ಫೈನಾನ್ಸ್ ಕಿರುಕುಳ, ಕಾರ್ಮಿಕರಿಗೆ ಸೌಲಭ್ಯ ಕೊರತೆ, ಪಡಿತರ ಚೀಟಿ, ಮಾಸಾಶನ, ಬಸ್ ನಿಲುಗಡೆ, ಹೆಚ್ಚುವರಿ ಬಸ್ ಸೌಲಭ್ಯ, ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಪರಿಹಾರ, ಆಸ್ತಿಗಾಗಿ ನಕಲು ಸಹಿ, ಹಕ್ಕುಪತ್ರ ಸೇರಿದಂತೆ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿನಿಯರು, ಮಹಿಳೆಯರು, ವೃದ್ಧರು ಹಾಗೂ ವಿವಿಧ ಸಂಘಟನೆಗಳು ಮಹಿಳಾ ಆಯೋಗದ ಅಧ್ಯಕ್ಷರ ಗಮನಕ್ಕೆ ತಂದರು. ಸತತ ಎರಡು ಗಂಟೆಗಳ ಕಾಲ ಎಲ್ಲರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿದ ಅಧ್ಯಕ್ಷರು, ಎಲ್ಲರ ಸಮಸ್ಯೆಗೂ ಮಾನವೀಯ ನೆಲೆಯಲ್ಲಿ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.