- ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ
ಕನ್ನಡಪ್ರಭ ವಾರ್ತೆ ದಾವಣಗೆರೆ ಕಿತ್ತೂರು ರಾಣಿ ಚೆನ್ನಮ್ಮ ಸಮಾಜಕ್ಕೋಸ್ಕರ ಹೋರಾಟ ಮಾಡಿ ದೇಶಭಕ್ತಿ, ಶೌರ್ಯ, ಸಾಹಸಕ್ಕೆ ಹೆಸರಾಗಿದ್ದರು. ಅವರ ಆದರ್ಶ ಮೌಲ್ಯಗಳನ್ನು ಮಹಿಳೆಯರು ಜೀವನದಲ್ಲಿ ಅಳವಡಿಸಿಕೊಂಡು ಶೋಷಣೆಗೊಳಗಾಗುವ ಮಹಿಳೆಯರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.ಮಹಿಳೆಯರ ರಕ್ಷಣೆಗಾಗಿ ಇಂದು ಸಾಕಷ್ಟು ಮಹಿಳಾ ಸಂಘಟನೆಗಳು ರಚನೆಗೊಂಡಿವೆ. ಆದರೆ ಕೆಲವು ಮಹಿಳಾ ಸಂಘಟನೆಗಳು ತನ್ನ ಸ್ವಹಿತಾಶಕ್ತಿಗೆ ಸಂಘಟನೆಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹೀಗಾಗಬಾರದು ಎಂದು ಸಲಹೆ ನೀಡಿದರು.
ಚೆನ್ನಮ್ಮ ತಾಯ್ನಾಡಿಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಬ್ರಿಟಿಷ್ ಸೈನ್ಯವನ್ನು ಬಗ್ಗು ಬಡಿದಿದ್ದರು. ಅವರ ದೇಶ ಭಕ್ತಿ ಹಾಗೂ ಸಾಹಸ ಗಾಥೆಗಳನ್ನು ಇಂದಿನ ಪೀಳಿಗೆಗೆ ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತಿಳಿಸುವ ಕೆಲಸ ಆಗಬೇಕು. ಹೆಣ್ಣು ಮಕ್ಕಳಿಗೆ ಶೋಷಣೆ ನಡೆದಾಗ ಮಹಿಳೆಯರು ಮನೆಯಿಂದ ಹೊರಗೆ ಬಂದು ಹೋರಾಟದಲ್ಲಿ ದುಮಿಕಿದಾಗಲೇ ಶೋಷಣೆಗೆ ಒಳಗಾಗದ ಆ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಲು ಸಾಧ್ಯ ಎಂದು ತಿಳಿಸಿದರು.
- - -
ದಾವಣಗೆರೆಯಲ್ಲಿ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.