ಬಳ್ಳಾರಿ: ನೆಲದ ಸಾಂಸ್ಕೃತಿಕ ಸೊಗಡಿಗೆ ಧಕ್ಕೆಯಾದಾಗ ಎಲ್ಲರೂ ಒಗ್ಗೂಡಿ ಧ್ವನಿ ಎತ್ತಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದರು.
ಕನ್ನಡದ ಭಾಷೆ, ಸಂಸ್ಕೃತಿ ಮೇಲಿನ ದಾಳಿಗೆ ಪರೋಕ್ಷವಾಗಿ ಹೊರಗಿನ ಕೈಗಳು ಕೆಲಸ ಮಾಡುತ್ತಿವೆ. ಒಂದೇ ಭಾಷೆ, ಒಂದೇ ಸಂಸ್ಕೃತಿ ಹೆಸರಿನಲ್ಲಿ ಪ್ರಾದೇಶಿಕ ವೈವಿಧ್ಯತೆ, ಸಂಸ್ಕೃತಿ ಹಾಗೂ ಅಸ್ಮಿತೆ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಯಾವ ಭಾಷೆಯೂ ಮೇಲಲ್ಲ. ಯಾವ ಭಾಷೆಯೂ ಕೀಳಲ್ಲ. ಸಂವಿಧಾನವು ಎಲ್ಲ ಭಾಷೆಗಳಿಗೆ ಸಮಾನ ಗೌರವ ಕೊಟ್ಟಿದೆ. ನಮ್ಮ ಭಾಷೆಯ ಸೊಗಡನ್ನೇ ಹಾಳು ಮಾಡುವ ಕೃತ್ಯವನ್ನು ಕನ್ನಡಿಗರು ಸಹಿಸಬಾರದು. ಬರೀ ಉತ್ತರ ಭಾರತದ ಇತಿಹಾಸ ಅರ್ಥ ಮಾಡಿಕೊಂಡರೆ ಸಾಲದು. ನಮ್ಮ ನೆಲದ ಇತಿಹಾಸ ಎಷ್ಟು ತಿಳಿದುಕೊಂಡಿದ್ದೇವೆ ಎಂಬುದನ್ನು ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು. ಬಹುತ್ವದ ಮೇಲೆ ದಾಳಿ ನಡೆದಾಗ ಕನ್ನಡಿಗರು ಸುಮ್ಮನಿರಬಾರದು ಎಂದು ಹೇಳಿದರು.
ತೆರಿಗೆ ಪಾಲು ನೀಡದ ಕೇಂದ್ರ:ದೇಶದಲ್ಲಿಯೇ ಅತಿಹೆಚ್ಚು ತೆರಿಗೆ ಸಂದಾಯ ಮಾಡುವುದು ಕರ್ನಾಟಕ. ಆದರೆ, ಕೇಂದ್ರ ಸರ್ಕಾರ ನಮಗೆ ತೆರಿಗೆ ಹಣದಲ್ಲಿ ಸರಿಯಾದ ಪಾಲು ನೀಡುತ್ತಿಲ್ಲ. ಇದರಿಂದ ರಾಜ್ಯದ ಅನೇಕ ನೀರಾವರಿ ಯೋಜನೆಗಳು ಸೇರಿದಂತೆ ಅಭಿವೃದ್ಧಿ ನೆಲೆಯ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಕನ್ನಡಿಗರಾದ ನಾವು ಇದನ್ನು ಪ್ರಶ್ನಿಸಬೇಕಲ್ಲವೇ ? ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ವಿವಿಧ ಕ್ಷೇತ್ರದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ:
69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಶಾಲಾ ಮಕ್ಕಳಿಗಾಗಿ ಆಯೋಜನೆ ಮಾಡಿದ್ದ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ಸಚಿವ ಕೃಷ್ಣ ಭೈರೇಗೌಡ ಅವರು ವಿತರಿಸಿದರು. ನಗರ ಶಾಸಕ ನಾರಾ ಭರತ್ ರೆಡ್ಡಿ, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್ಪಿ ಡಾ.ಶೋಭಾರಾಣಿ, ಜಿ.ಪಂ. ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಡಿಸಿ ಮಹಮ್ಮದ್ ಝುಬೇರ್, ಹಿರಿಯ ಲೆಕ್ಕಪರಿಶೋಧಕ ಸಿರಿಗೇರಿ ಪನ್ನರಾಜ್ , ಕರವೇ ಮುಖಂಡ ಚಾನಾಳ್ ಶೇಖರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಸಾರಿಗೆ ಇಲಾಖೆ) ವತಿಯಿಂದ ವಿಧಾನ ಸೌಧ, ತೋಟಗಾರಿಕೆ ವತಿಯಿಂದ ಪರಿಸರ ಸಂರಕ್ಷಣೆಯ ಗಿಡಗಳು ಪ್ರದರ್ಶಿಸಿದರೆ ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ಮುಕ್ತ ನಗರ-ಸ್ವಚ್ಛ ನಗರ ವಿಷಯದೊಂದಿಗೆ ಸ್ತಬ್ಧಚಿತ್ರ ರೂಪಿಸಲಾಗಿತ್ತು.
ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಕಾರ್ಯಕ್ರಮಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ ಮೊದಲ ಕನ್ನಡದ ಶಾಸನಗಳಲ್ಲಿ ಒಂದಾದ ಹಲ್ಮಿಡಿ ಶಾಸನದ ಪ್ರತಿರೂಪವನ್ನು ಸಚಿವ ಕೃಷ್ಣ ಭೈರೇಗೌಡ ಅನಾವರಣಗೊಳಿಸಿದರು.
ನಗರದ ಪ್ರಮುಖ ವೃತ್ತಗಳಲ್ಲಿ ಕನ್ನಡ ಕವಿಗಳ ಭಾವಚಿತ್ರಗಳು ಹಾಗೂ ಕನ್ನಡ ಧ್ವಜಗಳಿಂದ ಅಲಂಕಾರ ಮಾಡಲಾಗಿತ್ತು. ಶಾಲಾ-ಕಾಲೇಜುಗಳು, ವಿವಿಧ ವಾಣಿಜ್ಯ ಸಂಸ್ಥೆಗಳು, ಕನ್ನಡಪರ ಸಂಘಟನೆಗಳ ಕಚೇರಿಗಳಲ್ಲಿ ಕರ್ನಾಟಕ ರಾಜ್ಯೋತ್ಸವದ ಸಡಗರ ಕಂಡು ಬಂತು.