ಹನಿಟ್ರ್ಯಾಪ್‌ ವಿಚಾರ ಕುರಿತು ಸಾಕ್ಷ್ಯ ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಸಚಿವ ರಾಜಣ್ಣ ಪುತ್ರ!

KannadaprabhaNewsNetwork |  
Published : Mar 23, 2025, 01:33 AM ISTUpdated : Mar 23, 2025, 08:00 AM IST
ರಾಜೇಂದ್ರ | Kannada Prabha

ಸಾರಾಂಶ

ಹನಿಟ್ರ್ಯಾಪ್‌ ವಿಚಾರ ಕುರಿತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ನೀಡಿ ಇಡೀ ಬೆಳವಣಿಗೆಯ ವಿವರ ನೀಡಿದ್ದಾರೆ.

 ಬೆಂಗಳೂರು : ಹನಿಟ್ರ್ಯಾಪ್‌ ವಿಚಾರ ಕುರಿತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ನೀಡಿ ಇಡೀ ಬೆಳವಣಿಗೆಯ ವಿವರ ನೀಡಿದ್ದಾರೆ.

ಈ ವೇಳೆ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದು, ಅದರಂತೆ ಎರಡ್ಮೂರು ದಿನಗಳಲ್ಲಿ ಹನಿಟ್ರ್ಯಾಪ್‌ ವಿಚಾರವಾಗಿ ದೂರು ನೀಡಲು ನಿರ್ಧರಿಸಿರುವುದಾಗಿ ರಾಜೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದರ ನಡುವೆ ಹನಿಟ್ರ್ಯಾಪ್‌ ಕುರಿತು ಹೈಕಮಾಂಡ್‌ ನಾಯಕರಿಗೆ ಮಾಹಿತಿ ನೀಡಲು ಸಚಿವ ರಾಜಣ್ಣ ಮತ್ತು ರಾಜೇಂದ್ರ ಜತೆಗೂಡಿ ಶೀಘ್ರ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ, ಹನಿಟ್ರ್ಯಾಪ್‌ ವಿಚಾರವಾಗಿ ತನಿಖೆ ನಡೆಯಬೇಕು ಎಂಬುದನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಮುಖ್ಯಮಂತ್ರಿಗಳಿಗೆ ತೋರಿಸಿದ್ದೇನೆ. ಅದಕ್ಕೆ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಹಿರಿಯ ವಕೀಲರೊಂದಿಗೆ ಚರ್ಚಿಸಿ, ಸೋಮವಾರ ಅಥವಾ ಮಂಗಳವಾರ ಮತ್ತೊಮ್ಮೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ನಂತರ ಸಾಕ್ಷಿ ಸಹಿತ ಡಿಜಿ ಅವರಿಗೆ ದೂರು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ದಲಿತ ನಾಯಕನ ತುಳಿಯಲೆತ್ನ:

ರಾಜಣ್ಣ ದಲಿತ ಸಮುದಾಯದ ನಾಯಕ. ರಾಜ್ಯಾದ್ಯಂತ ಅವರದ್ದೇ ಆದ ಛಾಪು ಇದೆ. ದಲಿತ ನಾಯಕನನ್ನು ತುಳಿಯಬೇಕು ಎಂಬ ಷಡ್ಯಂತ್ರ ನಡೆಸಲಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್‌ ಮಾಡಿದ್ದಾರೆಂಬ ಅನುಮಾನವನ್ನೂ ರಾಜಣ್ಣ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುವಂತೆ ನನಗೆ ಸೂಚಿಸಿದ್ದರು. ಅದರಂತೆ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎಂದರು.

ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಬೇಕು ಎಂದು ಮೂರು ತಿಂಗಳಿನಿಂದ ಪ್ರಯತ್ನ ನಡೆಯುತ್ತಿದೆ. ಪ್ರತಿದಿನವೂ ಟ್ರ್ಯಾಪ್‌ ಮಾಡಲು ಬರುತ್ತಿರಲಿಲ್ಲ. ಯಾವಾಗಲೋ ಒಮ್ಮೆ ಬರುತ್ತಿದ್ದರು. ಸರ್ಕಾರಿ ಮನೆಯಲ್ಲಿ ಸಿಸಿ ಟಿವಿ ಕ್ಯಾಮರಾ ಇಲ್ಲದ ಕಾರಣ ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ತುಮಕೂರಿನ ಕ್ಯಾತಸಂದ್ರದ ಮನೆಗೆ ಬಂದಿಲ್ಲ, ಮಧುಗಿರಿಯ ಮನೆಗೆ ಬಂದಿದ್ದರು ಎನ್ನುವ ಮಾಹಿತಿಯಿದೆ. ಆದರೆ, ಯಾರು ಈ ಕೃತ್ಯ ಮಾಡಿದ್ದಾರೆಂಬುದು ತನಿಖೆಯಿಂದಲೇ ತಿಳಿಯಬೇಕು ಎಂದು ಹೇಳಿದರು.

ರಾಜಕೀಯವಾಗಿ ತುಳಿಯಬೇಕೆಂದರೆ ಹೋರಾಟ ಮಾಡಬಹುದು. ಆದರೆ, ಈ ರೀತಿ ಯಾರೂ ಮಾಡಬಾರದು. ರಾಜಣ್ಣ ಅಂತಲ್ಲ, ಮುಂದೆಯೂ ಈ ರೀತಿ ಯಾರ ಮೇಲೂ ಆಗಬಾರದು ಎಂಬ ಕಾರಣಕ್ಕಾಗಿ ತನಿಖೆ ನಡೆಯಬೇಕು. ಅದಕ್ಕಾಗಿ ದೂರು ನೀಡುತ್ತೇನೆ ಎಂದು ತಿಳಿಸಿದರು. 

 ಯಾರಿಗೂ ಮುಂದೆ ಈ ರೀತಿ ಆಗಬಾರದುಹನಿಟ್ರ್ಯಾಪ್‌ ವಿಚಾರವಾಗಿ ತನಿಖೆ ನಡೆಯಬೇಕು ಎಂಬುದನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ಗಳನ್ನು ಮುಖ್ಯಮಂತ್ರಿಗಳಿಗೆ ತೋರಿಸಿದ್ದೇನೆ. ಅದಕ್ಕೆ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಮುಂದೆ ಈ ರೀತಿ ಯಾರ ಮೇಲೂ ಆಗಬಾರದು ಎಂಬ ಕಾರಣಕ್ಕಾಗಿ ತನಿಖೆ ನಡೆಯಬೇಕು. ಅದಕ್ಕಾಗಿ ದೂರು ನೀಡುತ್ತೇನೆ.

- ರಾಜೇಂದ್ರ ರಾಜಣ್ಣ, ಎಂಎಲ್‌ಸಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ