ಅಜೀಜಅಹ್ಮದ ಬಳಗಾನೂರು
ಗ್ರಾಮೀಣ ಮಕ್ಕಳಲ್ಲೂ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಹಾಗೂ ಸಂಶೋಧನಾ ಮನೋಭಾವ ಬೆಳೆಸಬಹುದು ಎಂಬುದನ್ನು ತಮ್ಮ ಕಾರ್ಯದ ಮೂಲಕ ಸಾಬೀತುಪಡಿಸಿರುವ ಶಿಕ್ಷಕಿ ರಾಜಶ್ರೀ ಬೀಡಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕುರಡಿಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ಪಠ್ಯಪುಸ್ತಕ ಬೋಧನೆಗೆ ಸೀಮಿತವಾಗದೆ ವಿದ್ಯಾರ್ಥಿಗಳನ್ನು ಪ್ರಯೋಗ, ವಿಜ್ಞಾನ ಮಾದರಿ, ಸಂಶೋಧನಾ ಪ್ರಬಂಧ ಹಾಗೂ ವಿವಿಧ ವಿಜ್ಞಾನ ಪ್ರದರ್ಶನಗಳಲ್ಲಿ ತೊಡಗಿಸುತ್ತಿದ್ದಾರೆ.ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ, ಭಾರತೀಯ ವಿಜ್ಞಾನ ಕಾಂಗ್ರೆಸ್, ರಾಷ್ಟ್ರೀಯ ಕಿಶೋರ ವೈಜ್ಞಾನಿಕ ಸಮ್ಮೇಳನ ಹಾಗೂ INSPIRE-MANAK ಸೇರಿದಂತೆ ರಾಷ್ಟ್ರಮಟ್ಟದ ವೇದಿಕೆಗಳಲ್ಲಿ ಭಾಗವಹಿಸಿ ಯಂಗ್ ಸೈಂಟಿಸ್ಟ್ ಹಾಗೂ ಅತ್ಯುತ್ತಮ ವಿಜ್ಞಾನ ಮಾದರಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಇವರ ಸೇವೆಗೆ 2023ರಲ್ಲಿ ಕರ್ನಾಟಕ ಸರ್ಕಾರದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ, 2024ರಲ್ಲಿ ಅಕ್ಷರ ಅವ್ವ ಸಾವಿತ್ರಿಬಾಯಿ ಫುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಹಾಗೂ 2025ರಲ್ಲಿ ಕಾಯಕಯೋಗಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.