ಭಾರತ ರತ್ನ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ 35ನೇ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಕಳ: ಭಾರತ ರತ್ನ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ 35ನೇ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಶೇಖರ್ ಮಡಿವಾಳ್, “ರಾಜೀವ್ ಗಾಂಧಿಯವರು ಆಧುನಿಕ ಭಾರತದ ರೂಪುರೇಷೆ ಕಟ್ಟಿದ ದೂರದೃಷ್ಟಿಯ ನಾಯಕರು. ದೇಶದ ಸರ್ವಾಂಗೀಣ ಅಭಿವೃದ್ಧಿ ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ ಎಂಬ ನಂಬಿಕೆಯಿಂದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದು, ಗ್ರಾಮೀಣ ಮಟ್ಟದ ಬಡ ಜನರಿಗೆ ಆಡಳಿತದಲ್ಲಿ ಪಾಲ್ಗೊಳ್ಳುವ ಅಧಿಕಾರ ನೀಡಿದರು. ಇದು ಪ್ರಜಾತಂತ್ರ ವ್ಯವಸ್ಥೆಯ ಮಹತ್ತರ ಕ್ರಾಂತಿಗೆ ನಾಂದಿ ಹಾಡಿತು. ಭಾರತ ಇಂದು ಆಧುನಿಕ ತಂತ್ರಜ್ಞಾನ ಹೊಂದಿದ ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರ ಹೊಮ್ಮಲು ರಾಜೀವ್ ಗಾಂಧಿಯವರ ಆಡಳಿತಾತ್ಮಕ ದೂರದೃಷ್ಟಿಯೇ ಕಾರಣ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, “18 ವರ್ಷದ ಯುವಕರಿಗೆ ಮತದಾನದ ಹಕ್ಕು ನೀಡುವ ಮೂಲಕ ಯುವಜನತೆಯನ್ನು ದೇಶದ ರಾಜಕೀಯ ಮುಖ್ಯವಾಹಿನಿಗೆ ಕರೆತಂದವರು ರಾಜೀವ್ ಗಾಂಧಿ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲೂ ರಾಜೀವ್ ಗಾಂಧಿಯವರ ನೆನಪು ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಅವರು ಸಾಧಿಸಿದ ಅಭಿವೃದ್ಧಿಯ ಮಾರ್ಗಗಳು ಚಿರಸ್ಮರಣೀಯ” ಎಂದರು.ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದಾಶಿವ ದೇವಾಡಿಗ, ಹಿರ್ಗಾನ ಸೊಸೈಟಿ ಅಧ್ಯಕ್ಷ ಸೀರಿಯಣ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕ ಪ್ರಭಾಕರ್ ಬಂಗೇರ, ಭೂ ನ್ಯಾಯ ಮಂಡಳಿ ಸದಸ್ಯ ಸುನಿಲ್ ಭಂಡಾರಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜಾ, ಆಶಾ ಬೈಲೂರ್, ಸಂತೋಷ ದೇವಾಡಿಗ ಬೋಳ, ದೀಪಕ್ ಶೆಟ್ಟಿ ದೊಂಡೆರಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು. ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕಾಸ್ಟಲಿನ್ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.