ಆರ್‌ಸಿಬಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ

KannadaprabhaNewsNetwork | Published : Jun 5, 2025 1:45 AM
ಐಪಿಎಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಶಿವಮೊಗ್ಗ ನಗರದ ವಿವಿಧೆಡೆ ಯುವಕರು ರಸ್ತೆಗಿಳಿದು ಘೋಷಣೆಗಳನ್ನು ಮೊಳಗಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಐಪಿಎಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಶಿವಮೊಗ್ಗ ನಗರದ ವಿವಿಧೆಡೆ ಯುವಕರು ರಸ್ತೆಗಿಳಿದು ಘೋಷಣೆಗಳನ್ನು ಮೊಳಗಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಐಪಿಎಲ್ ಫೈನಲ್ ಪಂದ್ಯಾವಳಿ ವೀಕ್ಷಣೆಗೆ ಶಿವಮೊಗ್ಗದ ವಿವಿಧೆಡೆ ಬೃಹತ್ ಪರದೆಗಳನ್ನು ಹಾಕಲಾಗಿತ್ತು. ಆರ್‌ಸಿಬಿ ಅಭಿಮಾನಿಗಳು ಈ ಪರದೆಗಳಲ್ಲಿ ಪಂದ್ಯಾವಳಿ ವೀಕ್ಷಿಸಿ ಸಂಭ್ರಮಿಸಿದರು.

ಆರ್‌ಸಿಬಿ ಗೆಲ್ಲುತ್ತಿದ್ದಂತೆ ನಗರದ ವಿವಿಧೆಡೆ ರಸ್ತೆಗಿಳಿದ ಆರ್‌ಸಿಬಿ ಅಭಿಮಾನಿಗಳು ಘೋಷಣೆಗಳನ್ನು ಕೂಗಿ, ಬೈಕ್ ಜಾಥಾ ನಡೆಸಿದರು. ವಿವಿಧೆಡೆ ದಿಢೀರ್ ರಸ್ತೆಗಿಳಿದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಬಹುತೇಕ ಎಲ್ಲ ಬಡಾವಣೆಗಳಲ್ಲಿಯು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಗರದ ವಿವಿಧ ಕ್ಲಬ್‌ಗಳು, ಬಾರ್‌ಗಳಲ್ಲಿ ಪಂದ್ಯಾವಳಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬಹತೇಕ ಟೇಬಲ್‌ಗಳು ಭರ್ತಿಯಾಗಿದ್ದವು. ಈ ಅವಧಿಯಲ್ಲಿ ಮದ್ಯ ಮಾರಾಟವು ಬಿರುಸಾಗಿತ್ತು.

ಲಾಠಿ ರುಚಿ:

ನೆಹರು ರಸ್ತೆಯಲ್ಲಿ ವಿಜಯೋತ್ಸವದ ಸಂದರ್ಭ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಆರ್‌ಸಿಬಿ ಅಭಿಮಾನಿಗಳು ತಡರಾತ್ರಿವರೆಗೂ ಸಂಭ್ರಮಾಚರಣೆ ಮಾಡಿದರು. ಸಮಯ ಮೀರಿದ್ದರಿಂದ ಪೊಲೀಸರು ಗುಂಪು ಚದುರಿಸಲು ಪ್ರಯತ್ನಿಸಿದರು. ಆದರೆ ಜನರು ತೆರಳದೆ ಇದ್ದಾಗ ಲಘು ಲಾಠಿ ಪ್ರಹಾರ ನಡೆಸಿದರು.

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ:

ವಿಜಯೋತ್ಸವ ಸಂದರ್ಭ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ವಾಹನ ಡಿಕ್ಕಿ ಹೊಡೆದಿದೆ. ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಕಾಟನ್ ಜಗದೀಶ್ ಎಂಬುವವರು ನಿಲ್ಲಿಸಿದ್ದ ಕಾರಿಗೆ ರಾತ್ರಿ ವಾಹನ ಡಿಕ್ಕಿ ಹೊಡೆದಿದೆ. ಇನ್ನು, ನಗರದ ವಿವಿಧೆಡೆ ರಸ್ತೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದಿರುವುದು ಕೂಡ ವರದಿಯಾಗಿದೆ. ರಸ್ತೆಯಲ್ಲಿ ವಾಹನಗಳನ್ನು ತಡೆದು, ಬಸ್ಸುಗಳನ್ನು ಅಡ್ಡಗಟ್ಟಲಾಗಿದೆ.

ಯುವಕ ಸಾವು:

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಅಪಘಾತವಾಗಿ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ನಗರದ ಉಷಾ ನರ್ಸಿಂಗ್ ಹೋಂ ಸರ್ಕಲ್ ಸಮೀಪದ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ದುರ್ದೈವಿ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದರು.

ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೇ ಅಭಿ ಮೃತಪಟ್ಟಿದ್ದಾನೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.