ವೃತ್ತ ಅರಣ್ಯಾಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಸೂಚನೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಅರಣ್ಯ ಹಕ್ಕು ಕಾಯಿದೆಯಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಎಲ್ಲ ಅರ್ಜಿಗಗಳನ್ನು ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ಹಕ್ಕು ಪ್ರತಿಪಾದಿಸಲು ಅವಕಾಶ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದರು.ಶಿವಮೊಗ್ಗದ ಅರಣ್ಯ ಇಲಾಖೆಯ ಶ್ರೀಗಂಧ ಸಭಾಂಗಣದಲ್ಲಿ ಶಿವಮೊಗ್ಗ ವೃತ್ತ ಅರಣ್ಯಾಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿ, 2005ರ ಡಿ.13ರ ಮುನ್ನ ಅರಣ್ಯವಾಸಿಗಳಾಗಿದ್ದ ಎಲ್ಲ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಕಾಯಿದೆಯಡಿ ಪರಿಹಾರ ಸಿಗಲೇಬೇಕು. ಅದೇ ರೀತಿ ಇತರ ಹಿಂದುಳಿದವರು ಈ ದಿನಾಂಕಕ್ಕೆ ಮುನ್ನ ಅರಣ್ಯದಲ್ಲಿ ಜೀವನೋಪಾಯಕ್ಕಾಗಿಯೇ ನೆಲೆಸಿದ್ದಲ್ಲಿ ನಿಯಮಾನುಸಾರ ಅವರಿಗೆ ಹಕ್ಕು ನೀಡಬೇಕಾಗುತ್ತದೆ. ಪ್ರಸ್ತುತ 3 ತಲೆಮಾರು ಅಂದರೆ 75 ವರ್ಷ ಅವರು ಅಲ್ಲಿದ್ದರು ಎಂದು ಸಾಬೀತು ಪಡಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಯಮಕ್ಕೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಶಾರದಾ ನಾಯಕ್, ಆರಗ ಜ್ಞಾನೇಂದ್ರ, ಚನ್ನಬಸಪ್ಪ, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಲ್ಕಡೆ ಮತ್ತಿತರರು ಪಾಲ್ಗೊಂಡಿದ್ದರು.
850 ಅರಣ್ಯ ಸಿಬ್ಬಂದಿಗೆ ನೇಮಕಾತಿ ಪತ್ರ ವಿತರಣೆ: ಅರಣ್ಯ ಇಲಾಖೆಯಲ್ಲಿ ವನ ಪಾಲಕರಾಗಿ ಆಯ್ಕೆಯಾಗಿರುವ 310 ಅಭ್ಯರ್ಥಿಗಳಿಗೆ ಮತ್ತು 540 ಅರಣ್ಯ ರಕ್ಷಕರಿಗೆ ಮುಖ್ಯಮಂತ್ರಿಗಳಿಂದ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆ ನೀಗಿಸಲು ಈಗಾಗಲೇ ನೇಮಕಾತಿ ಪ್ರಕ್ರಿಯೆ ಬಹುತೇಕ ಪೂರ್ಣವಾಗಿದ್ದು, ಶೀಘ್ರವೇ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದರು.