ಹೊಸಪೇಟೆ: ಪತ್ರಕರ್ತರಿಗೆ ಎಲ್ಲ ವಿಷಯಗಳ ಸಂಪೂರ್ಣ ಜ್ಞಾನವಿರುವುದಿಲ್ಲ. ಆದರೆ ನಿರಂತರ ಅಧ್ಯಯನ, ಮಾಹಿತಿ ಸಂಗ್ರಹ, ಅನುಭವದ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ದಾರವಾಡದ ಪತ್ರಕರ್ತ ನರಸಿಂಹಮೂರ್ತಿ ಪ್ಯಾಟಿ ಹೇಳಿದರು.
ಪತ್ರಿಕೋದ್ಯಮದ ವಿದ್ಯಾರ್ಥಿಗಳು ಸೈದ್ಧಾಂತಿಕ ಅಧ್ಯಯನದ ಜೊತೆಗೆ ಪ್ರಾಯೋಗಿಕ ತರಬೇತಿಗೂ ಹೆಚ್ಚಿನ ಒತ್ತು ನೀಡಬೇಕು. ಓದುವ ಹವ್ಯಾಸ ಆತ್ಮವಿಶ್ವಾಸವನ್ನು ಬೆಳೆಸುವುದರೊಂದಿಗೆ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾಹಿತಿಯನ್ನು ಪರಿಶೀಲಿಸದೇ ಪ್ರಕಟಿಸುವ ಪ್ರವೃತ್ತಿ ಹೆಚ್ಚಾಗಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ಪತ್ರಿಕೆಗಳು ಸುದ್ದಿಯನ್ನು ಪ್ರಕಟಿಸುವ ಮೊದಲು ಅದರ ಸತ್ಯಾಸತ್ಯತೆಯನ್ನು ಸಮಗ್ರವಾಗಿ ಪರಿಶೀಲಿಸುತ್ತವೆ ಎಂದು ಹೇಳಿದರು.ಯಾರು ಭಾಷೆಯನ್ನು ಕಲಿತಿರುತ್ತಾರೋ ಅವರು ಜಗತ್ತನ್ನು ಆಳುತ್ತಾರೆ. ಭಾಷೆಯ ಮೇಲಿನ ಹಿಡಿತ ಪತ್ರಕರ್ತನ ಪ್ರಮುಖ ಶಕ್ತಿಯಾಗಿದೆ. ಉತ್ತಮ ಸುದ್ದಿಗಳನ್ನು ಪಡೆಯಲು ಸಮಾಜದ ವಿವಿಧ ವರ್ಗಗಳೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವುದು ಅಗತ್ಯ. ಜೊತೆಗೆ ಮಾನವೀಯ ಸಂವೇದನೆ ಮತ್ತು ಭಾವನಾತ್ಮಕ ಸ್ಪಂದನೆ ಹೊಂದಿರುವ ಪತ್ರಕರ್ತರಿಂದಲೇ ಪರಿಣಾಮಕಾರಿ ಮತ್ತು ಅರ್ಥಪೂರ್ಣ ಸುದ್ದಿಗಳು ಮೂಡಿಬರುತ್ತವೆ ಎಂದು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಗೆ ಹಿರಿಯ ಪತ್ರಕರ್ತರು ಅಪಾರ ಕೊಡುಗೆ ನೀಡಿದ್ದಾರೆ. ಹಾಗೆ ಪತ್ರಕರ್ತರು ಸುದ್ದಿ ಬರವಣಿಗೆಯಷ್ಟೇ ಅಲ್ಲದೆ, ಲೇಖನಗಳು, ಪ್ರವಾಸ ಕಥನಗಳು ಸೇರಿದಂತೆ ವಿವಿಧ ಪ್ರಕಾರದ ಬರಹಗಳ ಮೂಲಕ ಸಮಾಜಕ್ಕೆ ಮೌಲ್ಯಯುತ ಕೊಡುಗೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಅಧ್ಯಾಪಕ ಡಾ.ಟಿ.ಎಸ್. ಗೊರವರ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಅಧ್ಯಾಪಕರು ಹಾಗೂ ಮಾಹಿತಿಕೇಂದ್ರದ ಮುಖ್ಯಸ್ಥರು, ಆಡಳಿತ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.