ಖಾಲಿ ಕೊಡ ಹಿಡಿದು ನಗರದಲ್ಲಿ ಮೆರವಣಿಗೆ । ತಮಿಳುನಾಡು ಸರ್ಕಾರ, ಸಿಡಬ್ಲ್ಯುಆರ್ಸಿ ವಿರುದ್ಧ ಧಿಕ್ಕಾರ ಕೂಗು । ಧರಣಿ ಕುಳಿತು ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ‘ಖಾಲಿ ಕೊಡ’ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೈಯಲ್ಲಿ ಖಾಲಿ ಕೊಡ ಹಿಡಿದು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರು ಮಲ್ಲು ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ ೧೫ ದಿನಗಳ ಕಾಲ ಪ್ರತಿನಿತ್ಯ ೩೫೦೦ ಕ್ಯುಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ರಕ್ತ ಕೊಟ್ಟರೂ ನೀರು ಬಿಡುವುದಿಲ್ಲ ಎಂದರು.
ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಕರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
--
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಖಾಲಿ ಕೊಡ’ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.