ಕನ್ನಡಪ್ರಭ ವಾರ್ತೆ ಮಂಡ್ಯ
ಮಹಿಳೆಯರಿಗೆ ಮೀಸಲಾತಿ ಕೊಡಬಾರದು ಎಂಬುದು ಕಾಂಗ್ರೆಸ್ ನಿಲುವಾಗಿದೆ. ಕೇವಲ ತೋರ್ಪಡಿಕೆಗೆ ಮಾತ್ರ ಮಹಿಳೆಯರ ಪರ ಎನ್ನುತ್ತಾರೆ. ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದಾದರೂ ಏಕೆ? ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಮಹಿಳಾ ಮೀಸಲಾತಿಗೆ ಬೆಂಬಲ ನೀಡದೆ ಇಂದು ಏನೇನೋ ಕಾರಣ ಕೊಡುತ್ತಿದ್ದಾರೆ. ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಆರೋಪಿಸುತ್ತಿದ್ದಾರೆ. ಕ್ಷೇತ್ರ ಮರುವಿಂಗಡಣೆಯಾದರೆ ದಕ್ಷಿಣ ರಾಜ್ಯಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.ಕಾಂಗ್ರೆಸ್ನವರು ದೇಶ ಒಡೆಯುವ ಮತ್ತು ಮಹಿಳಾ ವಿರೋಧಿತನವನ್ನು ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಗೆ ಏಕೆ ಆತುರ ಎನ್ನುತ್ತಿದ್ದಾರೆ. ೧೯೭೧ರ ಜನಗಣತಿ ಆಧಾರದ ಮೇಲೆ ೫೪೩ ಲೋಕಸಭಾ ಕ್ಷೇತ್ರಗಳಿವೆ. ಆ ಸಂದರ್ಭ ೫೫ ಕೋಟಿ ಜನಸಂಖ್ಯೆ ಇತ್ತು. ಪ್ರಸ್ತುತ ೧೪೦ ಕೋಟಿ ಜನಸಂಖ್ಯೆ ಇದೆ. ಹಾಗಾಗಿ ಮಹಿಳೆಯರಿಗೆ ಮೀಸಲಾತಿ ನೀಡಿ ಕ್ಷೇತ್ರ ಮರುವಿಂಗಡಣೆಗೆ ಪ್ರಧಾನಿ ಮೋದಿ ಮುಂದಾದರು. ಆದರೆ, ಕಾಂಗ್ರೆಸ್ನವರು ಬೆಂಬಲ ನೀಡದೆ ಅನುಷ್ಠಾನವಾಗದಂತೆ ಮಾಡಿದರು ಎಂದು ದೂರಿದರು.
ಪ್ರಧಾನಿಗಳು ೨೦೧೧ರ ಜನಗಣತಿ ಆಧಾರದ ಮೇಲೆ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆಗೆ ತೀರ್ಮಾನಿಸಿ ಅದರಂತೆ ಅನುಷ್ಠಾನಗೊಳಿಸಲು ಮುಂದಾದರು. ಆದರೆ, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಬೆಂಬಲ ನೀಡಲಿಲ್ಲ. ಒಂದು ದೇಶ ಒಂದು ಚುನಾವಣೆ, ರಾಷ್ಟ್ರೀಯ ಶಿಕ್ಷಣ ನೀತಿ, ದೇಶ ಕಟ್ಟುವ ಕೆಲಸ ಮತ್ತು ಕೋವಿಡ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಕಾಂಗ್ರೆಸ್ಸಿಗರು ನಿರಂತರವಾಗಿ ವಿರೋಧ ಮಾಡುತ್ತಲೇ ಬಂದಿದ್ದಾರೆ. ಚುನಾವಣೆ ಸಂದರ್ಭ ಬಂದಾಗ ಮಾತ್ರ ಇಂತಹ ಯೋಜನೆಗಳನ್ನು ಜಾರಿಗೆ ತರಲು ಮುಂದಾಗುತ್ತಾರೆ ಎಂಬ ಆರೋಪ ನಿರಾಧಾರ ಎಂದರು.
ಮಹಿಳಾ ಮೀಸಲಾತಿಗೆ ಬೆಂಬಲ ನೀಡದ ಕಾಂಗ್ರೆಸ್ ಪಕ್ಷದ ಮುಖವಾಡವನ್ನು ಇಡೀ ದೇಶದ ಜನತೆಗೆ ತೋರಿಸಬೇಕೆಂಬ ಉದ್ದೇಶದಿಂದಲೇ ರಾಷ್ಟ್ರೀಯ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಬೇಕಾಯಿತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ಗೌಡ, ಜಿಲ್ಲಾಧ್ಯಕ್ಷೆ ಮಂಗಳಾ, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಡಾ. ಸಿದ್ದರಾಮಯ್ಯ, ಅಶೋಕ್ ಜಯರಾಂ, ರೂಪಾ ಹಾಜರಿದ್ದರು.