ಹೋರಾಟಕ್ಕೆ ಮನ್ನಣೆ: ಬರ ಪೀಡಿತ ಪಟ್ಟಿಗೆ ಸೇರಿದ ರಾಣಿಬೆನ್ನೂರು ತಾಲೂಕು

KannadaprabhaNewsNetwork |  
Published : Sep 20, 2026, 03:15 AM IST
ಮಂಜುನಾಥ ಗೌಡಶಿವಣ್ಣನವರ  | Kannada Prabha

ಸಾರಾಂಶ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಣಿಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿದ್ದು ಅದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವೆ ಎಂದು ಜೆಡಿಎಸ್ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.

ರಾಣಿಬೆನ್ನೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಣಿಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿದ್ದು ಅದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವೆ ಎಂದು ಜೆಡಿಎಸ್ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಣಿಬೆನ್ನೂರು ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಮಾಜಿ ಶಾಸಕ ಅರುಣಕುಮಾರ ಪೂಜಾರ ಹಾಗೂ ತಮ್ಮ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದೀಗ ರೈತರ ಪರಿಸ್ಥಿತಿಯನ್ನು ಪರಿಗಣಿಸಿ ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸಲಾಗಿದೆ. ಆದರೆ ಕೇವಲ ಬರಗಾಲ ಘೋಷಣೆ ಮಾಡಿದರೆ ಸಾಲದು. ಬರದಿಂದ ಹಾನಿಗೊಳಗಾಗಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಪ್ರತಿ ಎಕರೆಗೆ ರು. 50 ಸಾವಿರ ಪರಿಹಾರ ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.

ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಸರ್ಕಾರ ಕೂಡಲೇ ಲೋಡ್‌ಶೆಡ್ಡಿಂಗ್ ತೆರವುಗೊಳಿಸಿ ಪ್ರತಿದಿನ 10 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ವ್ಯತ್ಯಯ ಮುಂದುವರಿದರೆ ರೈತರಿಗೆ ಹಿಂಗಾರು ಬೆಳೆಯನ್ನೂ ರಕ್ಷಿಸಿಕೊಳ್ಳುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಹಿತದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ಕರ್ನಾಟಕ ರಾಜ್ಯದ ದಕ್ಷಿಣ ಭಾಗಕ್ಕೆ ಹೋಲಿಕೆ ಮಾಡಿದಾಗ ಉತ್ತರ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದೆ. ಹೀಗಾಗಿಯೇ ಈ ಭಾಗದ ಜನರು ಉದ್ಯೋಗ ಅರಸಿ ಬೆಂಗಳೂರಿಗೆ ದಾಂಗುಡಿಯಿಡುತ್ತಿದ್ದಾರೆ. ಪರಿಸ್ಥಿತಿ ಸುಧಾರಣೆಯಾಗದಿದ್ದರೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರೀತಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಶುರುವಾದರೂ ಅಚ್ಚರಿಯಿಲ್ಲ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ಉತ್ತರ ಕರ್ನಾಟಕ ಅಭಿವೃದ್ಧಿ ಹೆಚ್ಚಿನ ಒತ್ತು ನೀಡಬೇಕು. ಹೊಸ ಕಾರ್ಖಾನೆಗಳು, ಕಂಪನಿಗಳು ಹಾಗೂ ಬಿಡದಿ ಅಂತಹ ಸಿಟಿಗಳನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪನೆ ಮಾಡಬೇಕು ಎಂದರು.

ತಾಲೂಕಿನ ಹುಣಸಿಕಟ್ಟಿ ಬಳಿ ಕಲ್ಲು ಕ್ವಾರಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸಚಿವ ರುದ್ರಪ್ಪ ಲಮಾಣಿ ಅವರಿಗೆ ರು. 3 ಕೋಟಿ ದಂಡ ವಿಧಿಸಿದೆ. ಇಲಾಖೆಯ ನೋಟಿಸ್ ಪ್ರಕಾರ ದಂಡವನ್ನು ಆರು ತಿಂಗಳ ಅವಧಿಯಲ್ಲಿ ಮೂರು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ. ಆದ್ದರಿಂದ ಸರ್ಕಾರದ ಸಂಪತ್ತಿಗೆ ಸಂಬಂಧಿಸಿದ ಅಕ್ರಮದ ಆರೋಪ ಎದುರಾಗಿರುವ ಹಿನ್ನೆಲೆಯಲ್ಲಿ ಸಚಿವ ರುದ್ರಪ್ಪ ಲಮಾಣಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನಿಂಗಪ್ಪ ಸತ್ಯಪ್ಪನವರ, ನಿಂಗರಾಜ ಹೊನ್ನಾಳಿ, ಶಿವಪುತ್ರಪ್ಪ ನಡುವಿನಮನಿ, ಲಕ್ಷ್ಮಿ ಕದರಮಂಡಲಗಿ, ಉಷಾ ಜಾಡಮಲಿ, ಗುರುರಾಜ ಬೋಜನವರ, ಕಾಂತೇಶ ಕದರಮಂಡಲಗಿ, ಚಂದ್ರಪ್ಪ ಆಲೂರ, ನಾಗಣ್ಣ ಕ್ಯಾತಾಳಿ, ಪರಶುರಾಮ ಕಸವಾಳ, ಕಸ್ತೂರಿ ಅರ್ಕಸಾಲಿ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬುಡಕಟ್ಟು ಸಿದ್ದಿ ಸಮುದಾಯಕ್ಕೆ ಪೌಷ್ಟಿಕಾಹಾರ ವಿತರಿಸಿ
ರೋಗ ಬರುವ ಮುಂಚೆ ಜಾಗೃತಿ ವಹಿಸಿ: ಡಾ. ಯೋಗೇಶ್ ಮಡಗಾಂವಕರ