ಶಿಥಿಲವಾದ ಭದ್ರಾ ಕಾಲುವೆಗಳ ಮರು ನಿರ್ಮಿಸಿ: ಶಾಸಕ ಕೆ.ಎಸ್.ಬಸವಂತಪ್ಪ

KannadaprabhaNewsNetwork |  
Published : Mar 02, 2024, 01:47 AM IST
1ಕೆಡಿವಿಜಿ6-ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಅಧಿವೇಶನದಲ್ಲಿ ಭದ್ರಾ ನಾಲೆ ದುರಸ್ಥಿ ಕುರಿತಂತೆ ಮಾತನಾಡಿ, ಸರ್ಕಾರದ ಗಮನ ಸೆಳೆದರು. ............1ಕೆಡಿವಿಜಿ7-ದಾವಣಗೆರೆ ಜಿಲ್ಲೆಯ ಭದ್ರಾ ನಾಲೆಗಳ ಕಾಲುವೆ, ಸೇತುವೆಗಳು ಶಿಥಿಲಗೊಂಡ ಸ್ಥಳಕ್ಕೆ ನೀರಾವರಿ ಅಧಿಕಾರಿಗಳೊಂದಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ವೀಕ್ಷಿಸುತ್ತಿರುವ ಸಂಗ್ರಹ ಚಿತ್ರ. ...........1ಕೆಡಿವಿಜಿ8-ಭದ್ರಾ ನಾಲೆಗಳು, ಸೇತುವೆಗಳ ನಿರ್ಮಾಣಕ್ಕೆ 40 ಕೋಟಿ ಅನುದಾನ ಕೋರಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಬರೆದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ನೀರಾವರಿ ನಿಗಮದ ಎಂಡಿಗೆ ಸೂಚಿಸಿರುವ ಆದೇಶ. | Kannada Prabha

ಸಾರಾಂಶ

ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಶಿಥಿಲ ಕಾಲುವೆಗಳು, ಸೇತುವೆಗಳ ಮರು ನಿರ್ಮಿಸುವ ಮೂಲಕ ಅಚ್ಚುಕಟ್ಟು ರೈತರ ಹಿತ ಕಾಯಬೇಕು ಎಂದರು. ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 42 ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶ‍ವಿದೆ. ಈ ಒಟ್ಟು ನೀರಾವರಿ ಪ್ರದೇಶ ರೈತರ ಜೀವನಾಡಿ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲೆಯ ಜೀವನಾಡಿ ಭದ್ರಾ ನಾಲೆಗಳು ಶಿಥಿಲಗೊಂಡಿದ್ದು, ಕಾಲುವೆಗಳ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ತಕ್ಷಣ 40 ಕೋಟಿ ರು.ಅನುದಾನ ಬಿಡುಗಡೆ ಮಾಡುವಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಚ್ಚುಕಟ್ಟು ರೈತರ ಪರ ವಿಧಾನಸೌಧದಲ್ಲಿ ಧ್ವನಿ ಎತ್ತಿ ಗಮನ ಸೆಳೆದರು.

ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿ, ಮಾಯಕೊಂಡ ಕ್ಷೇತ್ರವೂ ಸೇರಿ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಶಿಥಿಲ ಕಾಲುವೆಗಳು, ಸೇತುವೆಗಳ ಮರು ನಿರ್ಮಿಸುವ ಮೂಲಕ ಅಚ್ಚುಕಟ್ಟು ರೈತರ ಹಿತ ಕಾಯಬೇಕು ಎಂದರು. ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 42 ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶ‍ವಿದೆ. ಈ ಒಟ್ಟು ನೀರಾವರಿ ಪ್ರದೇಶ ರೈತರ ಜೀವನಾಡಿ. 1958ರಲ್ಲಿ ನಿರ್ಮಾಣವಾದ ಭದ್ರಾ ಕಾಲುವೆಗಳು, ಸೇತುವೆಗಳು ಶಿಥಿಲವಾಗಿ ಹಾಳಾಗಿವೆ. ಈ ವರೆಗೂ ಕಾಲುವೆಗಳು, ಸೇತುವೆಗಳ ನಿರ್ಮಾಣವಾಗಲೀ ಅಥವಾ ಆಧುನೀಕರಣವಾಗಲಿ ಆಗಿಲ್ಲ ಎಂದರು.

ನಲ್ಕುಂದ ಬಳಿ ಕಾಲುವೆ ಸೇತುವೆ ಒಡೆದು, ನೀರು ರೈತರ ಗದ್ದೆಗಳಿಗೆ ನುಗ್ಗಿ, ಗದ್ದೆಗಳು ಜಲಾವೃತವಾಗಿ ಫಸಲಿಗೆ ಬಂದಿದ್ದ ಭತ್ತ ಹಾಳಾಗಿ, ರೈತರು ಲಕ್ಷಾಂತರ ರುಪಾಯಿ ನಷ್ಟ ಅನುಭವಿಸಬೇಕಿತ್ತು. ಆಗ ಸಚಿವ ಎಸ್.ಎಸ್.ಮಲ್ಲಿಕಾರ್ಜುನರನ್ನು ಸಂಪರ್ಕಿಸಿದಾಗ ಅನುದಾನ ಬಿಡುಗಡೆ ಮಾಡಿ, ಬ್ರಿಡ್ಜ್ ನಿರ್ಮಿಸಿ, ರೈತರ ಹಿತ ಕಾಪಾಡಿದರು. ಈ ನಿಟ್ಟಿನಲ್ಲಿ ಸರ್ಕಾರ ಶಿಥಿಲವಾದ ಭದ್ರಾ ಕಾಲುವೆಗಳು, ಸೇತುವೆಗಳ ಮರು ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ, ಪ್ರಥಮಾದ್ಯತೆ ಮೇಲೆ ಕಾಮಗಾರಿ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಮಾಯಕೊಂಡ ವ್ಯಾಪ್ತಿಯ ಭದ್ರಾ ಕಾಲುವೆಗಳು, ಸೇತುವೆಗಳ ನಿರ್ಮಿಸಿ, 6 ದಶಕ ಕಳೆದಿವೆ. ಕಾಲಕ್ರಮೇಣ ಕಾಲುವೆ, ಸೇತುವೆಗಳು ಶಿಥಿಲಗೊಂಡು, ರೈತರು ಬೆಳೆ ಬೆಳೆಯಲು ಸಾಕಷ್ಟು ತೊಂದರೆಯಾದ ವಿಚಾರ ಶಾಸಕ ಬಸವಂತಪ್ಪ ಪ್ರಸ್ತಾಪಿಸಿದ್ದು ಸತ್ಯಾಂಶವಾಗಿದೆ. 6 ದಶಕದಿಂದ ಹಿಂದಿನ ಕಾಲುವೆ, ಸೇತುವೆ ಮರು ನಿರ್ಮಿಸಬೇಕೆ ಅಥವಾ ಆಧುನೀಕರಣಗೊಳಿಸಬೇಕೆ ಎಂಬ ಬಗ್ಗೆ ಕಾಲುವೆ-ಸೇತುವೆಗಳ ಪರಿಶೀಲಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸುವೆ. ಅಧಿಕಾರಿಗಳ ವರದಿ ಸಲ್ಲಿಕೆಯಾದ ನಂತರ ಹಣದ ಲಭ್ಯತೆ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

........

ಅರಣ್ಯ ವಾಸಿಗಳ ಒಕ್ಕಲೆಬ್ಬಿಸದಿರಿ: ಬಸವಂತಪ್ಪ

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹೋಬಳಿಯ ಅರಣ್ಯ ಪ್ರದೇಶದ ಪರಿಶಿಷ್ಟ ಜಾತಿ-ಪಂಗಡ ಮತ್ತು ಹಿಂದುಳಿದವರು ಕಳೆದ 6 ದಶಕದಿಂದ ಮನೆ ಕಟ್ಟಿ ವಾಸಿಸುತ್ತಿದ್ದು, ಆ ಜನರು, ಕುಟುಂಬಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವಿಧಾನಸೌಧ ಅಧಿವೇಶನದಲ್ಲಿ ಮಾತನಾಡಿ, 1975-76ರಲ್ಲಿ ಸೇಂದಿ ವನ, ಗೋಮಾಳ ಆಗಿದ್ದ ಜಾಗದಲ್ಲಿ ಆ ಕಾಲದಲ್ಲೇ ಪರಿಶಿಷ್ಟರು, ಹಿಂದುಳಿದವರು ಮನೆ ಕಟ್ಟಿ ವಾಸಿಸುತ್ತಿದ್ದಾರೆ. ನಂತರ ಅದು ಅರಣ್ಯ ವ್ಯಾಪ್ತಿಗೆ ಒಳಪಟ್ಟಿದೆ. ಇದರಿಂದಾಗಿ ಅಲ್ಲಿನ ನಿವಾಸಿಗಳಿಗೆ ದಿನದಿನಕ್ಕೂ ತೊಂದರೆಯಾಗುತ್ತಿದೆ ಎಂದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಶಿವಮೊಗ್ಗ ವ್ಯಾಪ್ತಿಯ ಭದ್ರಾವತಿ ಅರಣ್ಯ ವಿಭಾಗ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿ ವ್ಯಾಪ್ತಿಯ ಶೃಂಗಾರ ಬಾಗು ಗ್ರಾಮದ ರಿ.ಸ.ನಂ.16ರಲ್ಲಿ ಶೃಂಗಾರಬಾಗು ಮುಳ್ಳು ನಾಯಕನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ 44.34 ಎಕರೆ ಒತ್ತುವರಿಯಾಗಿದೆ. ಈ ಒತ್ತುವರಿ ತೆರವಿಗೆ ಈಗಾಗಲೇ ಅಧಿಕಾರಿಗಳು ನಿಯಮಾನುಸಾರ ಅರಣ್ಯ ಕಾಯ್ದೆ 1960ರಡಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ವಿಚಾರಣೆ ಮಾಡಿ, ತೆರವುಗೊಳಿಸುವ ಕಾರ್ಯ ಕೈಗೊಳ್ಳುತ್ತಾರೆ. ಶಾಸಕರೊಂದಿಗೆ ಚರ್ಚಿಸಿ, ಕಾಯ್ದೆಯನುಸಾರ ಏನು ಮಾಡಬಹುದೆಂಬ ಬಗ್ಗೆ ಕೂಲಂಕಷವಾಗಿ ಚರ್ಚಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ