ಕಾರವಾರ: ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾದ ತರುವಾಯ ಪಕ್ಷದ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರುಹಳ್ಳಿ ಹಳ್ಳಿಗೆ ತೆರಳಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದ್ದು, ಸೋಮವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಾಗಾರ “ಸಂಘಟನಾ ಪರ್ವ” ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಮಟ್ಟದ ನಾಯಕರೊಂದಿಗೆ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ದಾಖಲೆಯ ಪ್ರಮಾಣದ ಸದಸ್ಯತ್ವದ ನೋಂದಣಿಯಾಗಿದೆ. ಸಕ್ರಿಯ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಪಕ್ಷದ ಕಮಿಟಿಗಳ ರಚನೆ ಸೇರಿದಂತೆ ಸಂಘಟನೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಂಘಟನಾ ಪರ್ವದ ಯಶಸ್ಸಿಗೆ ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಯಿತು.
ರಾಜ್ಯ ಸಹ ಉಸ್ತುವಾರಿಗಳಾದ ಡಾ. ಸುಧಾಕರ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪಿ. ರಾಜೀವ್ ಇತರರು ಪಾಲ್ಗೊಂಡಿದ್ದರು.ಉತ್ತಮ ಸ್ಪಂದನೆಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಅವರು ಜಿಲ್ಲೆಯಲ್ಲಿ ನಡೆದ ಪಕ್ಷದ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲಾಧ್ಯಕ್ಷರು, ಪಕ್ಷದ ಪ್ರಮುಖರೊಂದಿಗೆ ಪಾಲ್ಗೊಂಡು ಜಿಲ್ಲೆಯಲ್ಲಿ ಪಕ್ಷದ ಸದಸ್ಯತ್ವ ಹೆಚ್ಚಳಕ್ಕೆ ನಿರಂತರವಾಗಿ ದುಡಿಯುತ್ತಿದ್ದಾರೆ.
ಅದರಲ್ಲೂ ಕಾರವಾರ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಪಕ್ಷದ ಕಾರ್ಯಕರ್ತರ ನೆರವಿನಿಂದ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದಾರೆ. ರೂಪಾಲಿ ಎಸ್. ನಾಯ್ಕ ಹೋದಲ್ಲೆಲ್ಲ ಕಾರ್ಯಕರ್ತರು ಹಾಗೂ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.