ಹಗರಿಬೊಮ್ಮನಹಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಬ್ಬರು ಅತಿಥಿ ಶಿಕ್ಷಕರ ನೇಮಕ ಮಾಡುವ ಜೊತೆಗೆ ಸರ್ಕಾರಿ ಪ್ರೌಢಶಾಲೆಗೆ ಕಾಯ್ದಿರಿಸಿರುವ 2.85 ಎಕರೆ ನಿವೇಶನದಲ್ಲಿ ಪ್ರೌಢಶಾಲಾ ಕಟ್ಟಡ ನಿರ್ಮಿಸುವಂತೆ ಆಗ್ರಹಿಸಿ ಮಾದೂರು ಗ್ರಾಮದ ಡಾ. ಎಸ್. ರಾಧಾಕೃಷ್ಣನ್ ಶಿಕ್ಷಣ ಪ್ರೇಮಿಗಳ ಸಂಘ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
ಶಾಲೆಗೆ ಮಂಜೂರಾದ 12 ಶಿಕ್ಷಕರ ಹುದ್ದೆಗಳಿಗೆ ಒಬ್ಬ ಅತಿಥಿ ಶಿಕ್ಷಕ ಸಹಿತ 9 ಶಿಕ್ಷಕರನ್ನು ಮಾತ್ರ ನೇಮಿಸಲಾಗಿದೆ. ಇನ್ನೂ ಮೂರು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಇರುವ 9 ಶಿಕ್ಷಕರಲ್ಲಿ ಒಬ್ಬ ಶಿಕ್ಷಕರು ದೀರ್ಘಾವಧಿಯ ರಜೆಯಲ್ಲಿದ್ದಾರೆ. ಮುಖ್ಯ ಗುರುಗಳು ಆಡಳಿತಾತ್ಮಕ ಕರ್ತವ್ಯ ಹಾಗೂ ಬಿಸಿಯೂಟ ಕಾರ್ಯದಲ್ಲಿರುತ್ತಾರೆ. ವಿದ್ಯಾರ್ಥಿಗಳು ಪಾಠವಿಲ್ಲದೇ ಊಟ ಮಾಡಿ ಮನೆಗೆ ತೆರಳುವಂತಾಗಿದೆ ಎಂದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿಕುಮಾರ್ ಮಾತನಾಡಿ, ಗ್ರಾಮದಲ್ಲಿ ಕಳೆದ ಆರು ವರ್ಷದ ಹಿಂದೆ ಆರಂಭವಾಗಿರುವ ಸರ್ಕಾರಿ ಪ್ರೌಢಶಾಲೆಗೆ 120 ಮಕ್ಕಳು ದಾಖಲಾಗಿದ್ದರೂ ಸ್ವಂತ ಕಟ್ಟಡವಿಲ್ಲದೇ ಪ್ರಾಥಮಿಕ ಶಾಲಾ ಕಟ್ಟಡದಲ್ಲಿಯೇ ಪಾಠ ನಡೆಸಲಾಗುತ್ತಿದೆ. ಪರಿಣಾಮವಾಗಿ ಪ್ರಾಥಮಿಕ ಶಾಲಾ ಮಕ್ಕಳು ಸಹಿತ ಸ್ಥಳ ಬಿಕ್ಕಟ್ಟು ಎದುರಿಸುತ್ತಿದ್ದಾರೆ ಎಂದು ದೂರಿದರು.ಕೂಡಲೇ ಶಾಲೆಗೆ ಇಬ್ಬರು ಪೂರ್ಣ ಪ್ರಮಾಣದ ಶಿಕ್ಷಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು. ಪ್ರೌಢಶಾಲಾ ಕಟ್ಟಡಕ್ಕೆ ಅಗತ್ಯ ನಿವೇಶನವಿದ್ದರೂ ಅನುದಾನದ ಕೊರತೆ ಗಂಭೀರವಾಗಿದ್ದು, ಶಾಸಕರು ಅಗತ್ಯ ಅನುದಾನ ಒದಗಿಸಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.