ಕನ್ನಡ ಪ್ರಭ ವಾರ್ತೆ ದಾವಣಗೆರೆ
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ವಿಪತ್ತು ನಿರ್ವಹಣೆ ಕುರಿತಂತೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಂಜಿನಿಯರ್, ಪಶುಸಂಗೋಪನಾ ಇಲಾಖೆ, ಬೆಸ್ಕಾಂ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದರು.
ಶಾಂತಿಸಾಗರದಿಂದ ಎರಡು ಜಿಲ್ಲೆಗಳ ಪ್ರಮುಖ ಪಟ್ಟಣ, ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕೆರೆಗೆ ಅನಧಿಕೃತವಾಗಿ ಪಂಪ್ಸೆಟ್ ಅಳವಡಿಸಿಕೊಂಡು ಅಕ್ರಮವಾಗಿ ನೀರೆತ್ತಲಾಗುತ್ತಿದೆ. ಇದರಿಂದ ನೀರಿನ ಸಂಗ್ರಹ ತುಂಬಾ ಇಳಿಕೆಯಾಗಿರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆಯಾಗಲಿದೆ ಎಂದರು.ಬೆಸ್ಕಾಂನಿಂದ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿಕೊಟ್ಟಿದ್ದರಿಂದ ರೈತರು ಅನಧಿಕೃತವಾಗಿ ಕೆರೆಯಲ್ಲಿನ ನೀರನ್ನು ಬಳಕೆ ಮಾಡುತ್ತಿದ್ದಾರೆ. ಅನಧಿಕೃತವಾಗಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳನ್ನು ತೆರವು ಮಾಡಲು ಮತ್ತು ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲು ಬೆಸ್ಕಾಂ ಇಂಜಿನಿಯರ್ಗೆ ಸೂಚನೆ ನೀಡಿದರು. ಶಾಂತಿಸಾಗರದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಕಾಲುವೆ ಮೂಲಕ ನೀರು ಶೇಖರಣೆಗೆ ಕ್ರಮವಹಿಸಲಾಗುತ್ತದೆ ಎಂದರು.
ಕೇಂದ್ರಸ್ಥಾನ ಬಿಡುವಂತಿಲ್ಲ: ಬೇಸಿಗೆ ಆರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ, ಸಾಂಕ್ರಾಮಿಕ ಕಾಯಿಲೆಗಳು ಸೇರಿದಂತೆ ವಿಕೋಪದಿಂದಾಗುವ ಸಮಸ್ಯೆಗಳನ್ನು ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು. ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿವೆ ಎಂದು ಪರಿಶೀಲನೆ ನಡೆಸಿ ಆಳಕ್ಕೆ ಕೊರೆಯಬೇಕಾಗಿದ್ದಲ್ಲಿ ಅಂತಹ ಕೊಳವೆಬಾವಿಗಳ ವಿವರದೊಂದಿಗೆ ಪ್ರಸ್ತಾವನೆಯನ್ನು ಆಯಾ ತಾಲ್ಲೂಕು ತಹಶೀಲ್ದಾರರಿಗೆ ಸಲ್ಲಿಸಬೇಕು ಎಂದರು.
18.77 ಕೋಟಿ ಲಭ್ಯ: ಬರಗಾಲ ಎದುರಿಸಲು ತುರ್ತು ಕೆಲಸಗಳಿಗಾಗಿ ಅಂದರೆ ಕುಡಿಯುವ ನೀರು, ಮೇವು ಪೂರೈಕೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ.16.10 ಕೋಟಿ, ಮತ್ತು ಎಲ್ಲಾ ತಹಶೀಲ್ದಾರರ ಖಾತೆಯಲ್ಲಿ ರೂ.2.67 ಕೋಟಿ ಹಣವಿದ್ದು ಯಾವುದೇ ಅನುದಾನದ ಕೊರತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.