ಕೋಟ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪದವಿ ಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘಗಳ ಜಂಟಿ ಆಶ್ರಯದಲ್ಲಿ ಜಿಲ್ಲೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಪುನಶ್ಚೇತನ ಕಾರ್ಯಾಗಾರ ಬುಧವಾರ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಟೆಕ್ನಾಲಜಿ ಸೆಂಟರ್ನಲ್ಲಿ ನಡೆಯಿತು.
ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಿಸರ್ಚ್ ಸ್ಕಾಲರ್ ಕೀರ್ತನ್ ಅವರು ಜೆನ್ಜಿ ಕಲಿಕಾರ್ಥಿಗಳ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಬಗ್ಗೆ ದಿಕ್ಸೂಚಿ ಉಪನ್ಯಾಸ ನೀಡಿದರು. ಉಪನ್ಯಾಸಕರಾದ ಬಲರಾಮ ವೈದ್ಯ, ಹರೀಶ್ ಕುಮಾರ್, ಸಂತೋಷ್ ಕುಮಾರ್, ಸುರೇಂದ್ರ ಪೂಜಾರಿ ಮತ್ತು ಹೇಮಲತಾ ಅವರು ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡರು.
ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಅವರನ್ನು ಗೌರವಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು.ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ ಸ್ವಾಗತಿಸಿದರು. ಸಂತೋಷ್ ಕುಮಾರ್ ಪ್ರಾಸ್ತಾವಿಕ ಮಾತುಗಳಾಡಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಸುಮಂಗಲ ವಂದಿಸಿದರು.